ಟಾರ್ಗೆಟ್ 2018 ಸಮೀಕ್ಷೆ ಆರಂಭ: ಪರಮೇಶ್ವರ್
Team Udayavani, Apr 23, 2017, 3:45 AM IST
ಬೆಂಗಳೂರು: ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಪಕ್ಷವನ್ನು ಮತ್ತೂಮ್ಮೆ ಅಧಿಕಾರಕ್ಕೆ ತರಲು ‘ಟಾರ್ಗೆಟ್ 2018’ಗೆ ಅಭ್ಯರ್ಥಿಗಳ ಆಯ್ಕೆಗೆ ಸಮೀಕ್ಷೆ ಆರಂಭಿಸಿದೆ ಎಂದು ಕೆಪಿಸಿಸಿ ಅಧ್ಯಕ್ಷ ಡಾ. ಜಿ. ಪರಮೇಶ್ವರ್ ಹೇಳಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಮುಂದಿನ ಚುನಾವಣೆಗೆ ಯಾರಿಗೆ ಟಿಕೆಟ್ ನೀಡಬೇಕೆಂದು ಸಮೀಕ್ಷೆ ಆರಂಭಿಸಿದೆ. ಕಳೆದ ಚುನಾವಣೆಯಲ್ಲಿ ಮೂರು ಸಾರಿ ಸಮೀಕ್ಷೆ ಮಾಡಿಸಿದ್ದೆವು. ಕ್ಷೇತ್ರದಲ್ಲಿ ಅಭ್ಯರ್ಥಿಗಳು ಜನರೊಂದಿಗೆ ಹೇಗೆ ಸಂಬಂಧ ಇಟ್ಟುಕೊಂಡಿದ್ದಾರೆ. ಯಾರಿಗೆ ಟಿಕೆಟ್ ಕೊಟ್ಟರೆ ಗೆಲ್ಲುತ್ತಾರೆ ಎನ್ನುವುದನ್ನು ಸಮೀಕ್ಷೆ ನಡೆಸುತ್ತೇವೆ ಎಂದು ತಿಳಿಸಿದರು.
ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೆ ನಿಭಾಯಿಸುತ್ತೇನೆ ಎಂದು ಸಚಿವ ಬಸವರಾಜ್ ರಾಯರೆಡ್ಡಿ ನೀಡಿರುವ ಹೇಳಿಕೆಗೆ ಅವರು ಸಮರ್ಥರಿದ್ದಾರೆ. ಐದು ಬಾರಿ ಶಾಸಕರಾಗಿ, ಸಂಸದರಾಗಿ ಕಾರ್ಯ ನಿರ್ವಹಿಸಿದ್ದಾರೆ. ಕಾಂಗ್ರೆಸ್ನಲ್ಲಿ ಸಮರ್ಥರು ಸಾಕಷ್ಟು ಜನ ಇದ್ದಾರೆ ಎಂದರು.
ಬಿಹಾರ ಮುಖ್ಯಮಂತ್ರಿ ನಿತೀಶ್ಕುಮಾರ್ ಸೋನಿಯಾ ಗಾಂಧಿ ಭೇಟಿ ಕುರಿತು ಪ್ರತಿಕ್ರಿಯಿಸಿ, ದೇಶದಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗಬೇಕು ಎಂಬ ಸಂದೇಶವನ್ನು ನೀಡಿವೆ. ಜಾತ್ಯತೀತ ಶಕ್ತಿಗಳು ಒಂದಾಗುವುದರಲ್ಲಿ ತಪ್ಪಿಲ್ಲ. ದೇಶದಲ್ಲಿ ಮಹಾ ಘಟಿಬಂಧನ್ ಆಗುವ ಬಗ್ಗೆ ಮಾಹಿತಿ ಇಲ್ಲ. ರಾಜ್ಯದಲ್ಲಿಯೂ ಜೆಡಿಎಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಬಗ್ಗೆ ಗೊತ್ತಿಲ್ಲ. ಆದರೆ, ಜಾತ್ಯತೀತ ಶಕ್ತಿಗಳು ಒಂದಾಗಬೇಕೆನ್ನುವ ಚಿಂತನೆಯನ್ನು ನಾನು ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಇಬ್ಬರು ಸ್ವಾಗತಿಸುತ್ತೇವೆ ಎಂದು ಹೇಳಿದರು.