ಭಿನ್ನಮತ: ರಾಜ್ಯಾಧ್ಯಕ್ಷರ ತೀರ್ಮಾನಕ್ಕೆ ಬದ್ಧ
Team Udayavani, Aug 17, 2017, 7:25 AM IST
ಬೆಂಗಳೂರು: ಜೆಡಿಯು ರಾಜ್ಯ ಘಟಕ ನಿತೀಶ್ ಕುಮಾರ್ ಪರ ನಿಲ್ಲಬೇಕೋ ಅಥವಾ ಶರದ್ ಯಾದವ್ಗೆ ಬೆಂಬಲ ಸೂಚಿಸಬೇಕೋ ಎಂಬುದನ್ನು ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡರ ತೀರ್ಮಾನಕ್ಕೆ ಬಿಡಲು ಜೆಡಿಯು ಅಲ್ಪಸಂಖ್ಯಾತರ ಘಟಕ ನಿರ್ಧರಿಸಿದೆ. ನಗರದಲ್ಲಿ ಬುಧವಾರ ಆಯೋಜಿಸಿದ್ದ ಪಕ್ಷದ ಅಲ್ಪಸಂಖ್ಯಾತರ ಘಟಕದ ಸಮಾವೇಶದಲ್ಲಿ ಪಕ್ಷದಲ್ಲಿನ ವಿದ್ಯಮಾನಗಳ ಬಗ್ಗೆ ಪ್ರಸ್ತಾಪವಾಯಿತು. ಅಂತಿಮವಾಗಿ ರಾಜ್ಯಾಧ್ಯಕ್ಷರು ಕೈಗೊಳ್ಳುವ ತೀರ್ಮಾನಕ್ಕೆ ಬದ್ಧರಾಗಿರಲು ನಿರ್ಣಯ ಕೈಗೊಳ್ಳಲಾಯಿತು.
ನಿತೀಶ್ ಕುಮಾರ್ ಹಾಗೂ ಶರದ್ ಯಾದವ್ ನಡುವಿನ ಭಿನ್ನಮತ ಕುರಿತು ಸಮಾವೇಶದಲ್ಲಿ ಕೇಳಿ ಬಂದ ಪ್ರಶ್ನೆಗಳಿಗೆ ಉತ್ತರಿಸಿದ ರಾಜ್ಯಾಧ್ಯಕ್ಷ ಎಂ.ಪಿ.ನಾಡಗೌಡ, “ಇದುವರೆಗೂ ಅಂತಹ ಪರಿಸ್ಥಿತಿ ನಿರ್ಮಾಣವಾಗಿಲ್ಲ.ಅಂತಹ ಸಂದರ್ಭ ಬಂದರೆ ರಾಜ್ಯದ ಎಲ್ಲ ಜಿಲ್ಲಾಧ್ಯಕ್ಷರು, ರಾಜ್ಯ ಪದಾಧಿಕಾರಿಗಳು ಹಾಗೂ ಎಲ್ಲ ಘಟಕಗಳ ಅಧ್ಯಕ್ಷರ ಜತೆ ಚರ್ಚಿಸಿ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು’ ಎಂದು ಹೇಳಿದರು.
ರಾಜ್ಯದಲ್ಲಿ ಪಕ್ಷ ಸಂಘಟನೆ ಹಾಗೂ ಅಲ್ಪಸಂಖ್ಯಾತರ ಹಕ್ಕುಗಳಿಗಾಗಿ ನಿರಂತರ ಹೋರಾಟ ಕೈಗೊಂಡು ಸರ್ಕಾರದ ಜನವಿರೋಧಿ ನೀತಿಗಳ ವಿರುದ್ಧ ಜಾಗೃತಿ ಮೂಡಿಸಲು ಸಮಾವೇಶದಲ್ಲಿ ನಿರ್ಣಯ ಕೈಗೊಳ್ಳಲಾಯಿತು. ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಸೈಯದ್ ಮೆಹಬೂಬ್, ಮುಖಂಡರಾದ ಬಿ.ಧರ್ಮಪ್ಪ, ಮಂಜುಳಾ ಉಮೇಶ್ ಮತ್ತಿತರರು ಭಾಗವಹಿಸಿದ್ದರು.