ಟಿಪ್ಪು ಜಯಂತಿ ಕಾರ್ಯಕ್ರಮಕ್ಕೆ ನಾನೂ ಹೋಗಲ್ಲ: ಕಾಗೇರಿ
Team Udayavani, Oct 23, 2017, 6:25 AM IST
ಶಿರಸಿ: “ಟಿಪ್ಪು ಜಯಂತಿ ಆಚರಣೆ ಮೂಲಕ ಕಾಂಗ್ರೆಸ್ ಸರ್ಕಾರ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣ ಮಾಡುತ್ತಿದೆ. ಆ ಕಾರ್ಯಕ್ರಮಕ್ಕೆ ನಾನೂ ಹೋಗಲ್ಲ’ ಎಂದು ಮಾಜಿ ಸಚಿವ, ಶಾಸಕ ವಿಶ್ವೇಶ್ವರ ಹೆಗಡೆ ಕಾಗೇರಿ ತಿಳಿಸಿದ್ದಾರೆ.
ಭಾನುವಾರ ಸುದ್ದಿಗಾರರ ಜತೆ ಮಾತನಾಡಿದ ಅವರು, “ಟಿಪ್ಪು ಜಯಂತಿ ಆಚರಣೆಯನ್ನು ಕಳೆದೆರಡು ವರ್ಷಗಳಿಂದ ರಾಜ್ಯ ಸರ್ಕಾರ ಹಠಮಾರಿ ಧೋರಣೆಯಲ್ಲಿ ಮಾಡುತ್ತಿದೆ. ಬಹುಸಂಖ್ಯಾತರು ಹಾಗೂ ಬಿಜೆಪಿ ಇದನ್ನು ವಿರೋಧಿಸುತ್ತಲೇ ಬಂದಿದೆ. ಟಿಪ್ಪುವಿನದ್ದು ವಿವಾದಿತ ವ್ಯಕ್ತಿತ್ವ. ಜಯಂತಿ ಆಚರಿಸಬೇಕು ಎಂಬ ಅಪೇಕ್ಷೆ ಯಾರಿಂದಲೂ ಇರಲಿಲ್ಲ. ಆದರೆ, ಕಾಂಗ್ರೆಸ್ ಅಲ್ಪಸಂಖ್ಯಾತರ ಓಲೈಕೆ ರಾಜಕಾರಣದಿಂದ ಮಾಡುತ್ತಿದೆ.
ಈ ವರ್ಷವೂ ಕಾಂಗ್ರೆಸ್ ನಡೆಸುತ್ತಿರುವ ಟಿಪ್ಪು ಜಯಂತಿ ಆಚರಣೆ ವಿರೋಧಿ ಸುತ್ತೇವೆ ಹಾಗೂ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳದೆ ಬಹಿಷ್ಕರಿಸುತ್ತೇವೆ. ನಮ್ಮ ಹೆಸರನ್ನು ಆಹ್ವಾನ ಪತ್ರಿಕೆಯಲ್ಲಿ ಹಾಕುವ ಅಗತ್ಯವಿಲ್ಲ ಎಂದರು.