ಪೆಟ್ರೋಲ್, ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ನಿಂದ ಪ್ರತಿಭಟನೆ
Team Udayavani, Jun 20, 2020, 7:42 PM IST
ಚಾಮರಾಜನಗರ: ಪೆಟ್ರೋಲ್ ಮತ್ತು ಡೀಸೆಲ್ ಬೆಲೆ ಏರಿಕೆ ಖಂಡಿಸಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಮಾಜಿ ಸಂಸದ ಆರ್. ಧ್ರುವನಾರಾಯಣ ನೇತೃತ್ವದಲ್ಲಿ ಶನಿವಾರ ನಗರದಲ್ಲಿ ಪ್ರತಿಭಟನೆ ನಡೆಸಲಾಯಿತು.
ನಗರದ ಜಿಲ್ಲಾಡಳಿತ ಭವನದ ಎದುರು ಪಕ್ಷದ ಮುಖಂಡರು, ಕಾರ್ಯಕರ್ತರು ಧರಣಿ ನಡೆಸಿದರು. ಈ ಸಂದರ್ಭದಲ್ಲಿ ಮಾಜಿ ಸಂಸದ ಆರ್.ಧ್ರುವನಾರಾಯಣ ಮಾತನಾಡಿ, ಇಡೀ ವಿಶ್ವವೇ ಕೋವಿಡ್-19 ರಿಂದ ನಲುಗಿ ಹೋಗಿದೆ. ಭಾರತವು ಸಹ ಎರಡು ತಿಂಗಳುಗಳ ಕಾಲ ಕಠಿಣ ಲಾಕ್ಡೌನ್ನಿಂದ ತತ್ತರಿಸಿದ್ದು, ಆರ್ಥಿಕತೆ ತೀವ್ರ ಕುಸಿತಕ್ಕೆ ಈಡಾಗಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿ ಹಲವು ಕಾರ್ಖಾನೆಗಳು ವಾಹನಗಳು ಓಡಾಡದೇ ಪೆಟ್ರೋಲ್, ಡೀಸೆಲ್ ಬಳಕೆ ಕಡಿಮೆಯಾಗಿದೆ. ಅಲ್ಲದೇ ಅಂತಾರಾಷ್ಟ್ರೀಯ ಮಟ್ಟದಲ್ಲಿ ಮಾರುಕಟ್ಟೆಯಲ್ಲಿ ಒಂದು ಬ್ಯಾರಲ್ ಕಚ್ಚಾ ತೈಲ ಬೆಲೆ 38 ಡಾಲರ್ ಗೆ ಕುಸಿದಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಕಚ್ಚಾ ತೈಲ ಬೆಲೆ ಬ್ಯಾರಲ್ಗೆ 90 ರಿಂದ 120ಡ ಡಾಲರ್ ಇತ್ತು. ಆಗ 65 ರೂ. ಪೆಟೊ್ರೀಲ್ ದರ ಇತ್ತು. ತೈಲ ಬೆಲೆ ಪಾತಾಳಕ್ಕೆ ಹೋಗಿದ್ದರೂ ಬಿಜೆಪಿ ಸರ್ಕಾರ ಪೆಟ್ರೋಲ್ ದರವನ್ನು ಏರಿಸುತ್ತಲೇ ಇದೆ. ಇದು ಖಂಡನೀಯ ಎಂದರು.
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಬಡವರ ಭೂಮಿಗಾಗಿ ಹೋರಾಟ ಮಾಡಿರುವ ನಿದರ್ಶನಗಳು ಉಂಟು ಆದರೆ ರೈತ ವಿರೋಧಿ ಕಾನೂನುಗಳನ್ನು ಜಾರಿ ಮಾಡಲು ಹೊರಟಿದ್ದಾರೆ. ಭೂ ಸುಧಾರಣಾ ಕಾಯ್ದೆ ಸೆಕ್ಷನ್ 79ಎ, 79 ಎ, 80 ರದ್ದು ಮಾಡಬೇಕು. ಭಾರತದೇಶದಲ್ಲಿ ಸಣ್ಣ, ಅತಿ ಸಣ್ಣ ರೈತರು ಇದ್ದು, ಶ್ರಮಪಟ್ಟು ಬೆಳೆದು ಆಹಾರ ಉತ್ಪಾದನೆ ಮಾಡಿದ್ದಾರೆ. ಇದರಿಂದ ದೇಶದಲ್ಲಿ ಆಹಾರ ಸಮಸ್ಯೆ ಇಲ್ಲ. ಇಂತಹ ಸಂದರ್ಭದಲ್ಲೂ ಕೂಡ ರೈತರ ವಿರೋಧಿ ನಿಲುವು ತೆಗೆದುಕೊಂಡಿರುವುದು ಅಕ್ಷಮ್ಯ ಅಪರಾಧವಾಗಿದೆ ಎಂದರು.
ಎಪಿಎಂಸಿ ಹಾಮ್ಕಾಮ್ಸ್ ಮೂಲಕ ರೈತರ ಬೆಳೆದ ಪದಾರ್ಥಗಳಿಗೆ ಸರ್ಕಾರವೇ ಸೂಕ್ತ ಮಾರುಕಟ್ಟೆ ವ್ಯವಸ್ಥೆ ಕಲ್ಪಿಸಿದೆ. ಇದನ್ನು ಖಾಸಗೀಕರಣ ಮಾಡಬಾರದು ಹಾಗೂ ರೈತರಿಗೆ ಮರಣ ಶಾಸನವಾಗಿರುವ ಭೂ ಸುಧಾರಣೆ ಕಾಯ್ದೆಗೆ ಸುಗ್ರೀವಾಜ್ಞೆ ಯಾವುದೇ ಕಾರಣಕ್ಕೂ ತರಬಾರದು. ಒಂದು ಕಡೆ ಬೆಲೆ ಏರಿಕೆ, ರೈತ ವಿರೋಧಿ ಕಾನೂನುಗಳು ಶಾಪವಾಗಲಿದೆ ಎಂದರು.
ಶಾಸಕ ಸಿ.ಪುಟ್ಟರಂಗಶೆಟ್ಟಿ ಮಾತನಾಡಿ, ಬಿಜೆಪಿ ಸರ್ಕಾರ ಕೊರೋನಾ ನಿಯಂತ್ರಿಸುವಲ್ಲಿ ಸಂಪೂರ್ಣ ವಿಫಲವಾಗಿದೆ. ರೈತರು ಬೆಳೆದ ಪದಾರ್ಥಗಳ ಮಾರಾಟಕ್ಕಿರುವ ಎಪಿಎಪಿಸಿಗೆ ತಿದ್ದುಪಡಿ ತರುವ ಮೂಲಕ ರೈತ ವಿರೋಧ ಕಾಯ್ದೆಗಳನ್ನು ತರುವುದು ಸರಿಯಲ್ಲ. ಇವರು ತರಲು ಹೊರಟಿರುವ ಭೂ ಸುಧಾರಣೆ ಕಾಯ್ದೆ ರೈತರಿಗೆ ಮರಣಶಾಸನವಾಗಲಿದೆ ಎಂದು ಆರೋಪಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಪಿ.ಮರಿಸ್ವಾಮಿ, ಜಿ.ಪಂ.ಅಧ್ಯಕ್ಷೆ ಅಶ್ವಿನಿ, ಶಾಸಕ ಆರ್.ನರೇಂದ್ರ, ಎಂಎಲ್ಸಿ ಧರ್ಮಸೇನ, ಮಾಜಿ ಶಾಸಕರಾದ ಎಸ್.ಜಯಣ್ಣ, ಎಸ್.ಬಾಲರಾಜ್, ಮಾಜಿ ಸಂಸದ ಎಂ.ಶಿವಣ್ಣ, ಜಿ.ಪಂ. ಸದಸ್ಯರಾದ ಶಿವಮ್ಮ, ಕೆ.ಪಿ.ಸದಾಶಿವಮೂರ್ತಿ, ಕೆರೆಹಳ್ಳಿನವೀನ್, ಚಾಮುಲ್ ಅಧ್ಯಕ್ಷ ನಂಜುಂಡಪ್ರಸಾದ್, ಮುಖಂಡ ಗಣೇಶ್ಪ್ರಸಾದ್, ಜಿಲ್ಲಾ ಉಪಾಧ್ಯಕ್ಷ ಬಿ.ಕೆ.ರವಿಕುಮಾರ್, ಮಾಧ್ಯಮ ಕಾರ್ಯದರ್ಶಿ ಅರುಣ್ಕುಮಾರ್, ಪ್ರಧಾನ ಕಾರ್ಯದರ್ಶಿಗಳಾದ ಆರ್.ಮಹದೇವು, ಚಿಕ್ಕಮಹದೇವು, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಎಚ್.ವಿ.ಚಂದ್ರು, ಮಹಮ್ಮದ್ಅಸ್ಗರ್, ತೋಟೇಶ್, ಯುವ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಚೇತನ್ದೊರೈರಾಜು ಇತರರು ಭಾಗವಹಿಸಿದ್ದರು.