ಮಂಗಳೂರು : ಜಿಲ್ಲೆಯ 8 ವಿಧಾನಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಕಳೆದ ಎರಡು ವರ್ಷಗಳಲ್ಲಿ (2009 - 10 ಮತ್ತು 2010 - 11) ನಳಿನ್ಕುಮಾರ್ ಕಟೀಲು ಅವರ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಗೆ 380.29 ಲಕ್ಷ ರೂ. ಮಂಜೂರಾಗಿದ್ದು, ಅದರಲ್ಲಿ ಇಲ್ಲಿಯವರೆಗೆ 289.58 ಲಕ್ಷ ರೂ. ಗಳನ್ನು 194 ವಿವಿಧ ಕಾಮಗಾರಿಗಳ ಅನುಷ್ಠಾನಕ್ಕಾಗಿ ವೆಚ್ಚ ಮಾಡಲಾಗಿದೆ ಎಂದು ಸಂಸದ ನಳಿನ್ಕುಮಾರ್ ಕಟೀಲು ಅವರು ತಿಳಿಸಿದ್ದಾರೆ.ಸಂಸದ ನಳಿನ್ಕುಮಾರ್ ಕಟೀಲು ಅವರು ಬುಧವಾರ ದ.ಕ. ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ಯೋಜನೆಯಡಿ ಅನುಷ್ಠಾನಗೊಳಿಸಲಾದ ಕಾಮಗಾರಿಗಳ ಪ್ರಗತಿ ಪರಿಶೀಲನೆ ನಡೆಸಿದರು.ಸಂಸದರ ನಿಧಿಯಿಂದ ಕಾಮಗಾರಿಗಳಿಗೆ ಮಂಜೂರಾತಿ ಪಡೆದು ಕಾಮಗಾರಿ ಆರಂಭಿಸದೆ ಕಾಲಹರಣ ಮಾಡುವ ಸಂಘ-ಸಂಸ್ಥೆಗಳಿಗೆ ಮೂರು ನೋಟಿಸು ಜಾರಿ ಮಾಡಲಾಗುವುದು. ಉತ್ತರ ಬರದಿದ್ದಲ್ಲಿ ಅನಂತರ ಏಕಪಕ್ಷೀಯವಾಗಿ ನಿಯಮಾವಳಿಯಂತೆ ರದ್ದುಪಡಿಸಲು ಅವಕಾಶವಿದೆ. ಆದುದರಿಂದ ಕೂಡಲೇ ಕ್ರಮಕೈಗೊಳ್ಳುವಂತೆ ಅವರು ಸಂಬಂಧಿಸಿದ ಅಧಿಕಾರಿಗಳಿಗೆ ಸೂಚಿಸಿದರು.ಜಿಲ್ಲಾ ಪಂಚಾಯತ್ ಎಂಜಿನಿಯರಿಂಗ್ ಇಲಾಖೆ, ನಿರ್ಮಿತಿ ಕೇಂದ್ರ, ಲೋಕೋಪಯೋಗಿ ಇಲಾಖೆಯವರು ಸಂಸದರ ಸ್ಥಳೀಯ ಪ್ರದೇಶಾಭಿವೃದ್ಧಿ ನಿಧಿಯಿಂದ ಕಾಮಗಾರಿಗಳನ್ನು ಅನುಷ್ಠಾನಗೊಳಿಸಿ ಸಂಬಂಧಿಸಿದ ಬಿಲ್ಲುಗಳನ್ನು ಹಣ ಬಳಕೆ ದೃಢೀಕರಣದೊಂದಿಗೆ ಕೂಡಲೇ ಸಲ್ಲಿಸುವಂತೆ ಸೂಚಿಸಿದರು. ಬಾಕಿ ಇರುವ ಕಾಮಗಾರಿಗಳನ್ನು ಮಾ. 15ರೊಳಗೆ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಗಡವು ವಿಧಿಸಿದರು.ಸಭೆಯಲ್ಲಿ ಕಾರ್ಯನಿರ್ವಾಹಕ ಎಂಜಿನಿಯರ್ ಗೋಪಾಲ್ ನಾಯಕ್ ಉಪಸ್ಥಿತರಿದ್ದರು.