Udayavani | Feb 22, 2012
ಉಡುಪಿ: ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಉಪ ಚುನಾವಣೆಯ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಜಾರಿಯಾಗಿರುವ ಮಾದರಿ ನೀತಿಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸಬೇಕು ಎಂದು ಜಿಲ್ಲಾಧಿಕಾರಿ ಡಾ| ಎಂ.ಟಿ. ರೆಜು ಅವರು ಅಧಿಕಾರಿಗಳಿಗೆ ಸೂಚಿಸಿದರು.
ಉಡುಪಿ - ಚಿಕ್ಕಮಗಳೂರು ಲೋಕಸಭೆ ಚುನಾವಣೆಯ ಸಂಬಂಧ ಮಣಿಪಾಲ ರಜತಾದ್ರಿಯ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಫೆ. 21ರಂದು ನಡೆದ ಪೂರ್ವಾಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಸಾರ್ವಜನಿಕ ಸ್ಥಳಗಳಲ್ಲಿ ಈಗಾಗಲೇ ಅಳವಡಿಸಲಾಗಿರುವ ಬಂಟಿಂಗ್ಸ್, ಬ್ಯಾನರ್ ಧ್ವಜಗಳನ್ನು ತೆರವುಗೊಳಿಸಬೇಕು ಅಲ್ಲದೇ ಚುನಾವಣಾ ಅವಧಿಯಲ್ಲಿ ಇವುಗಳ ಅಳವಡಿಕೆ ಅವಕಾಶವಿಲ್ಲ. ಅನುಮತಿ ಇಲ್ಲದೆ ಯಾವುದೇ ರೀತಿಯ ಚುನಾವಣಾ ಪೋಸ್ಟರ್ಗಳನ್ನು ಅಳವಡಿಸಿದರೆ ಕ್ರಮ ಕೈಗೊಳ್ಳಲಾಗುವುದು. ಚುನಾವಣೆಗೆ ಮತಗಟ್ಟೆಗಳ ಸಿದ್ದತೆ ಎಲೆಕ್ಟ್ರಾನಿಕ್ ಮತಯಂತ್ರ ಸಿಬಂದಿ ನೇಮಕಾತಿ, ಸೆಕ್ಟರ್ ಆಫೀಸರ್ಗಳ ನೇಮಕಾತಿಗೆ ತತ್ಕ್ಷಣವೇ ಕ್ರಮ ಕೈಗೊಳ್ಳಲು ಜಿಲ್ಲಾಧಿಕಾರಿ ಸೂಚಿಸಿದರು. ಕೇಂದ್ರ ಚುನಾವಣಾ ಆಯೋಗದಿಂದ 3 ಮಂದಿ ಚುನಾವಣಾ ವೀಕ್ಷಕರು ಲೋಕಸಭಾ ಕ್ಷೇತ್ರದ ವ್ಯಾಪ್ತಿಗೆ ಆಗಮಿಸಲಿದ್ದಾರೆ ಎಂದವರು ತಿಳಿಸಿದರು.
ಕೇಂದ್ರ ಸ್ಥಾನದಲ್ಲಿರಲು ಸೂಚನೆ
ಚುನಾವಣಾ ನೀತಿಸಂಹಿತೆ ಉಲ್ಲಂಘನೆಯ ಯಾವುದೇ ಪ್ರಕರಣ ಸಾರ್ವಜನಿಕರ ಗಮನಕ್ಕೆ ಬಂದರೇ ತಕ್ಷಣವೇ ಉಡುಪಿ ಜಿಲ್ಲಾಧಿಕಾರಿ ಕಚೇರಿ ಅಥವ ತಾಲೂಕು ತಹಶೀಲ್ದಾರ್ ಅವರಿಗೆ ದೂರು ನೀಡಬಹುದು ಎಂದರು. ಚುನಾವಣೆ ಮುಗಿಯುವವರೆಗೆ ಜಿಲ್ಲಾಮಟ್ಟದ ಅಧಿಕಾರಿಗಳು ತಮ್ಮ ಇಲಾಖೆಯ ಕೇಂದ್ರ ಸ್ಥಾನವನ್ನು ಬಿಟ್ಟು ತೆರಳಬಾರದು ಅತಿ ಅವಶ್ಯವಿದ್ದಲ್ಲಿ ಮಾತ್ರ ಜಿಲ್ಲಾ ಚುನಾವಣಾಧಿಕಾರಿಗಳ ಅನುಮತಿಯನ್ನು ಪಡೆದು ತೆರಳಬೇಕು ಎಂದು ಜಿಲ್ಲಾಧಿಕಾರಿಯವರು ಸಭೆಯಲ್ಲಿ ಅಧಿಕಾರಿಗಳಿಗೆ ಸೂಚಿಸಿದರು.
ಚಿಕ್ಕಮಗಳೂರು ಜಿಲ್ಲಾಧಿಕಾರಿ ಡಿ.ಕೆ. ರಂಗಸ್ವಾಮಿ, ಉಡುಪಿ ಎಸ್ಪಿ ಎಂ.ಬಿ. ಬೋರಲಿಂಗಯ್ಯ, ಚಿಕ್ಕಮಗಳೂರು ಎಸ್ಪಿ ಶಶಿಕುಮಾರ್, ಜಿ.ಪಂ. ಸಿಇಒ ಎಸ್.ಎ. ಪ್ರಭಾಕರ್ ಶರ್ಮ, ಉಪಕಾರ್ಯದರ್ಶಿ ಡಿ. ಪ್ರಾಣೇಶ್ ರಾವ್, ಉಡುಪಿ ಅಪರ ಡಿಸಿ ಕುಮಾರ್, ಚಿಕ್ಕಮಗಳೂರು ಅಪರ ಡಿಸಿ ಕೆ.ಪಿ. ಹೊನಕೇರಿ ಹಾಗೂ ಲೋಕಸಭಾ ಚುನಾವಣಾ ವ್ಯಾಪ್ತಿಯ ಎಲ್ಲಾ ಸಹಾಯಕ ಚುನಾವಣಾಧಿಕಾರಿಗಳು ಹಾಗೂ ತಹಶೀಲ್ದಾರ್ ಉಪಸ್ಥಿತರಿದ್ದರು.