Udayavani | May 09, 2012
ಬೆಂಗಳೂರು: ಕುಡಿಯುವ ನೀರಿನ ಅಭಾವ ಎದುರಿಸುತ್ತಿರುವ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ ಹಾಗೂ ತುಮಕೂರು ಜಿಲ್ಲೆಗಳಿಗೆ ಶಾಶ್ವತ ಪರಿಹಾರ ಕಲ್ಪಿಸಲು ರೂಪಿಸಲಾಗಿರುವ ಎತ್ತಿನಹೊಳೆ ಯೋಜನೆ ಕಾಮಗಾರಿಗೆ ಜೂ.20 ರೊಳಗೆ ಚಾಲನೆ ನೀಡಲು ಸರ್ಕಾರ ತೀರ್ಮಾನಿಸಿದೆ.
ವಿಧಾನಸೌಧದಲ್ಲಿ ಬುಧವಾರ ಈ ಸಂಬಂಧ ನಡೆದ ಉನ್ನತಾಧಿಕಾರಿಗಳ ಸಭೆಯ ನಂತರ ಸುದ್ದಿಗಾರರ ಜತೆ ಮಾತನಾಡಿದ ಮುಖ್ಯಮಂತ್ರಿ ಡಿ.ವಿ. ಸದಾನಂದಗೌಡ, ಎತ್ತಿನಹೊಳೆ ಯೋಜನೆಯ ಸಮಗ್ರ ಯೋಜನಾ ವರದಿ ಸಿದ್ಧಗೊಂಡಿದ್ದು ಟೆಂಡರ್ ಪ್ರಕ್ರಿಯೆ ಪ್ರಾರಂಭಿಸಲಾಗಿದೆ ಎಂದು ಹೇಳಿದರು.
ಒಂದು ತಿಂಗಳಲ್ಲಿ ಸಚಿವ ಸಂಪುಟದ ಅನುಮೋದನೆಯೂ ದೊರೆಯಲಿದ್ದು, ಜೂನ್ ಮೊದಲ ವಾರದಲ್ಲಿ ಸ್ಪಷ್ಟ ಚಿತ್ರಣ ದೊರೆಯಲಿದೆ. ಜೂನ್ 20 ರೊಳಗೆ ಕಾಮಗಾರಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.
ಎರಡು ಹಂತಗಳಲ್ಲಿ ಎಂಟು ಪ್ಯಾಕೇಜ್ಗಳಲ್ಲಿ ಕಾಮಗಾರಿ ನಡೆಯಲಿದ್ದು ಮೊದಲ ಹಂತದಲ್ಲಿ ನಾಲ್ಕು ಪ್ಯಾಕೇಜ್ಗಳ ಕಾಮಗಾರಿ ಆರಂಭವಾಗಲಿದೆ ಎಂದು ಹೇಳಿದರು.
ಈ ಯೋಜನೆಯಡಿ ಬೇರೆ ಬೇರೆ ಮೂಲಗಳಿಂದ ನೀರು ಹರಿಸುವ ಗ್ರಿಡ್ ವ್ಯವಸ್ಥೆಯ ಬಗ್ಗೆಯೂ ಪರಿಶೀಲನೆ ನಡೆಸಲಾಗಿದೆ. ಮೊದಲಿಗೆ ನಾಲ್ಕು ಜಿಲ್ಲೆಗಳಿಗೆ ಕುಡಿಯುವ ನೀರು ಪೂರೈಕೆ ಮಾಡುವ ಉದ್ದೇಶ ಹೊಂದಲಾಗಿದ್ದು, ಮುಂದಿನ ದಿನಗಳಲ್ಲಿ ರಾಮನಗರ ಜಿಲ್ಲೆಗೂ ಯೋಜನೆ ವಿಸ್ತರಿಸಲಿದೆ ಎಂದು ತಿಳಿಸಿದರು.
ಜಲಸಂಪನ್ಮೂಲ ಸಚಿವ ಬಸವರಾಜ ಬೊಮ್ಮಾಯಿ ಮಾತನಾಡಿ, ಕುಡಿಯುವ ನೀರಿನ ತೊಂದರೆ ಎದುರಿಸುತ್ತಿರುವ ಜಿಲ್ಲೆಗಳಲ್ಲಿ ಶಾಶ್ವತ ಪರಿಹಾರ ಕಲ್ಪಿಸುವ ಸಂಬಂಧ ನೀರಾವರಿ ತಜ್ಞ ಪರಮಶಿವಯ್ಯ ಅವರು ನೀಡಿರುವ ವರದಿಯ ಬಗ್ಗೆಯೂ ಸಮಗ್ರ ಯೋಜನಾ ವರದಿ ತಯಾರಿಸಲು ಟೆಂಡರ್ ಪ್ರಕ್ರಿಯೆ ಮುಗಿದಿದ್ದು ಈ ವಾರದಲ್ಲಿ ಯೋಜನಾ ವರದಿ ತಯಾರಿಸುವ ಕೆಲಸಕ್ಕೆ ಚಾಲನೆ ದೊರೆಯಲಿದೆ ಎಂದು ಹೇಳಿದರು.
ಪರಮಶಿವಯ್ಯ ಅವರ ವರದಿ ಕುರಿತ ಸಮಗ್ರ ಯೋಜನಾ ವರದಿ ಅನುಷ್ಟಾನದ ಸಾಧಕ-ಬಾಧಕಗಳ ಬಗ್ಗೆಯೂ ಚರ್ಚೆಗಳು ನಡೆಯಲಿದ್ದು ಇದೂ ಎತ್ತಿನಹೊಳೆ ಯೋಜನೆಗೆ ಪೂರಕವಾಗಿರಲಿದೆ ಎಂದು ತಿಳಿಸಿದರು.
ಮಹಾರಾಷ್ಟ್ರ ಸರ್ಕಾರದೊಂದಿಗಿನ ಮಾತುಕತೆ ಫಲಶೃತಿಯಾಗಿ ಕೊಯ್ನಾದಿಂದ ಕೃಷ್ಣಾ ನದಿಗೆ ನೀರು ಬಿಡುವ ಪ್ರಕ್ರಿಯೆ ಪ್ರಾರಂಭವಾಗಿತ್ತು. ಆದರೆ, ಆ ಭಾಗದಲ್ಲಿ ಕೆಲವರು ರಾಜಕೀಯ ಕಾರಣಕ್ಕಾಗಿ ತಡೆಯೊಡ್ಡಿದ್ದರಿಂದ ನೀರು ತಲುಪಿಲ್ಲ. ಮುಖ್ಯಮಂತ್ರಿ ಡಿ.ವಿ.ಸದಾನಂದಗೌಡರು ಮತ್ತೆ ಮಹಾರಾಷ್ಟ್ರ ಮುಖ್ಯಮಂತ್ರಿಯವರ ಜತೆ ಮಾತುಕತೆ ನಡೆಸಲಿದ್ದಾರೆ
-ಬಸವರಾಜ ಬೊಮ್ಮಾಯಿ, ಜಲಸಂಪನ್ಮೂಲ ಸಚಿವ.