ಮಂಗಳೂರು : ನಗರದಲ್ಲಿ ಹೋಂ ಸ್ಟೇಗೆ ದಾಳಿ ಮಾಡಿ ಯುವತಿಯರ ಮೇಲೆ ಹಲ್ಲೆಗೈದಿರುವ ಪ್ರಕರಣದ ಎಲ್ಲ ಆರೋಪಿಗಳನ್ನು ಕೂಡಲೇ ಬಂಧಿಸಬೇಕು ಹಾಗೂ ಅವರ ವಿರುದ್ಧ ಕಠಿನ ಕ್ರಮಕೈಗೊಳ್ಳಬೇಕು ಎಂದು ರಾಜ್ಯ ಯುವಕಾಂಗ್ರೆಸ್ನ ಮಾಜಿ ಅಧ್ಯಕ್ಷ ಹಾಗೂ ಶಾಸಕ ಕೃಷ್ಣ ಭೈರೇ ಗೌಡ ಅವರು ಆಗ್ರಹಿಸಿದ್ದಾರೆ.ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಪ್ರಕರಣಕ್ಕೆ ಸಂಬಂಧಿಸಿ ಇನ್ನೂ ಕೆಲವು ಆರೋಪಿಗಳನ್ನು ಬಂಧಿಸಲು ಬಾಕಿ ಇದೆ. ಬಾಕಿಯುಳಿದಿರುವ ಆರೋಪಿಗಳನ್ನು ಕೂಡಲೇ ಬಂಧಿಸಬೇಕು. ಇದರಲ್ಲಿ ವಿಫಲವಾದರೆ ಕಾಂಗ್ರೆಸ್ ವತಿಯಿಂದ ತೀವ್ರ ಹೋರಾಟ ಹಮ್ಮಿಕೊಳ್ಳಲಾಗುವುದು ಎಂದರು.ಮಂಗಳೂರಿನಲ್ಲಿ ಪದೆ ಪದೆ ಈ ರೀತಿಯ ದಾಳಿಗಳಾಗುತ್ತಿದ್ದು, ರಾಜ್ಯ ಸರಕಾರದ ವೈಫಲ್ಯವೇ ಇದಕ್ಕೆ ಕಾರಣ ಎಂದು ಆರೋಪಿಸಿದ ಅವರು, ಒಟ್ಟು ಪ್ರಕರಣವನ್ನು ನಿಭಾಯಿಸುವಲ್ಲಿ ಸರಕಾರ ಅಸಮರ್ಥತೆ ತೋರಿದೆ. ನಗರದಲ್ಲಿ ನಿಷೇಧಾಜ್ಞೆ ಹೇರುವ ಮೂಲಕ ಪ್ರಕರಣದ ವಿರುದ್ಧದ ಪ್ರತಿಭಟನೆ ಹತ್ತಿಕ್ಕುವ ಪ್ರಯತ್ನ ಮಾಡಲಾಯಿತು. ಕಾಂಗ್ರೆಸ್ ಶಾಸಕರು ವಿಧಾನಸಭೆ, ವಿಧಾನ ಪರಿಷತ್ನಲ್ಲಿ ಈ ಘಟನೆಯ ವಿರುದ್ಧ ಪ್ರಬಲವಾಗಿ ಧ್ವತಿಯೆತ್ತಿದ ಪರಿಣಾಮ ಸರಕಾರ ದಾಳಿಕೋರರ ವಿರುದ್ಧ ಕ್ರಮಕ್ಕೆ ಮುಂದಾಯಿತು ಎಂದರು.