Udayavani | Dec 23, 2012
ಮಧುಗಿರಿ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ರಾಜ್ಯದ 224 ಕ್ಷೇತ್ರದಲ್ಲೂ ಬಿಎಸ್ಆರ್ ಕಾಂಗ್ರೆಸ್ ಪಕ್ಷ ಸ್ಪರ್ಧಿಸಿ 150ರಿಂದ 160 ಕೇತ್ರದಲ್ಲಿ ಜಯಗಳಿಸಲಿದೆ ಎಂದು ಬಿಎಸ್ಆರ್ ಕಾಂಗ್ರೆಸ್ ಜಿಲ್ಲಾ ಅಧ್ಯಕ್ಷ ರಾಮಾಂಜಿನಯ್ಯ ವಿಶ್ವಾಸ ವ್ಯಕ್ತಪಡಿಸಿದರು..
ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಬಡವರ, ಶ್ರಮಿಕರ ಹಾಗೂ ರೈತರ, ಸರ್ವಾಂಗೀಣ ಅಭಿವೃದ್ಧಿಗಾಗಿ ಪಕ್ಷ ಅನೇಕ ಯೋಜನೆಯನ್ನು ಹಾಕಿಕೊಂಡಿದೆ, ರಾಜ್ಯವನ್ನು ಗುಡಿಸಲು ರಹಿತವನ್ನಾಗಿ ಮಾಡುವ ಗುರಿ ಹೊಂದಲಾಗಿದೆ ಎಂದರು.
ರಾಜ್ಯದಲ್ಲಿ ಪ್ರವಾಸೋದ್ಯಮಕ್ಕೆ ಉತ್ತೇಜನ ನೀಡಲಾಗುವುದು, ವಿದ್ಯುತ್ ಕೊರತೆಯಾಗದಂತೆ ಹೊಸ ಯೋಜನೆ ರೂಪಿಸಿ ಕಾರ್ಯಗತಗೊಳಿಸಲಾಗುವುದು. ಬಯಲು ಸೀಮೆಗೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ರಾಜ್ಯದ ಎಲ್ಲಾ ಕ್ಷೇತ್ರದಲ್ಲೂ ನಮ್ಮ ಪಕ್ಷದ ಸಂಸ್ಥಾಪಕ ಅಧ್ಯಕ್ಷ ಬಿ. ಶ್ರೀ ರಾಮುಲು ಅಭಿಮಾನಿ ಪಡೆ ಇದೆ. ಜನರ ಕಷ್ಟ ಸುಖಗಳಿಗೆ ಸ್ಪಂದಿಸುತ್ತಿದ್ದಾರೆ. ರಾಜ್ಯದಲ್ಲಿ ರಾಷ್ಟ್ರೀಯ ಪಕ್ಷಗಳಿಗಿಂತ ಪ್ರಾದೇಶಿಕ ಪಕ್ಷಕ್ಕೆ ಭವಿಷ್ಯವಿದೆ ಎಂದರು.
ಜಿಲ್ಲಾ ಹಿಂದುಳಿದ ವರ್ಗಗಳ ಘಟಕದ ಅಧ್ಯಕ್ಷ ಎಂ.ವಿ. ಮೂಡ್ಲಿಗಿರೀಶ್ ಮಾತನಾಡಿ, ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ನಮ್ಮ ಪಕ್ಷದವತಿಯಿಂದ ಅಭ್ಯರ್ಥಿಯನ್ನು ಕಣಕ್ಕಿಳಿಸಿ ಜಯ ಸಾಧಿಸುವ ಮೂಲಕ ಪಕ್ಷವನ್ನು ಸಂಘಟಿಸಲಾಗುವುದು ಎಂದು ತಿಳಿಸಿದರು.
ಜನವರಿ 6 ರಂದು ದಾವಣಗೆರೆಯಲ್ಲಿ ನಡೆಯಲಿರುವ ಅಲ್ಪಸಂಖ್ಯಾತರ ಸಮಾವೇಶದಲ್ಲಿ ಜಿಲ್ಲೆಯಿಂದ 20 ಸಾವಿರಕ್ಕೂ ಹೆಚ್ಚು ಕಾರ್ಯಕರ್ತರು ಭಾಗವಹಿಸಲಿದ್ದಾರೆ. ಶ್ರೀ ರಾಮುಲು ರವರು ಜನವರಿ ಕೊನೆ ವಾರದಲ್ಲಿ ಮಧುಗಿರಿ ತಾಲೂಕಿನಲ್ಲಿ ಸಂಕಲ್ಪ ಯಾತ್ರೆ ಕೈಗೊಳ್ಳಲಿದ್ದಾರೆ ಎಂದರು.
ತಾಲೂಕು ಬಿಎಸ್ಆರ್ ಕಾಂಗ್ರೇಸ್ ಪಕ್ಷದ ಅಧ್ಯಕ್ಷ ಸುಧೀರ್, ಜಿಲ್ಲಾ ಎಸ್ಸಿ-ಎಸ್ಟಿ ಘಟಕದ ಅಧ್ಯಕ್ಷ ಅಂಜಿನಪ್ಪ, ರಾಜ್ಯ ಯುವ ಘಟಕದ ಸಂಚಾಲಕ ರಕ್ಷಿತ್ಕುಮಾರ್, ಜಿಲ್ಲಾ ಮುಖಂಡರಾದ ಎಚ್.ಡಿ. ರಾಮಲಿಂಗಯ್ಯ, ಆರ್.ವಿ. ಪುಟ್ಟಕಾಮಣ್ಣ, ನಗರ ಘಟಕದ ಅಧ್ಯಕ್ಷ ಕೆ.ಎಸ್.ಮಂಜುನಾಥ್, ತಾಲೂಕು ಎಸ್ಸಿ, ಎಸ್ಟಿ ಘಟಕದ ಅಧ್ಯಕ್ಷ ವೆಂಕಟೇಶ್, ಅಲ್ಪಸಂಖ್ಯಾತರ ಘಟಕದ ಅಧ್ಯಕ್ಷ ಇರ್ಫಾನ್, ಪ್ರಧಾನ ಕಾರ್ಯದರ್ಶಿ ನಯಾಜ್ಉಲ್ಲಾ, ತಾಲೂಖು ಯುವಘಟಕದ ಅಧ್ಯಕ್ಷ ಸತೀಶ್, ನಗರ ಯುವಘಟಕದ ಅಧ್ಯಕ್ಷ ಟಿ.ಗಿರೀಶ್ ಮುಂತಾದವರು ಉಪಸ್ಥಿತರಿದ್ದರು.