ಬೆಂಗಳೂರು : ಅತ್ಯಾಚಾರ ಪ್ರಕರಣಗಳ ಆರೋಪಿಗಳ ವಿರುದ್ಧ ಗೂಂಡಾಕಾಯ್ದೆ ಜಾರಿ ಮಾಡಲು ರಾಜ್ಯ ಸರ್ಕಾರಕ್ಕೆ ಆದೇಶಿಸುವಂತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿಯಲ್ಲಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರನ್ನು ಪ್ರತಿವಾದಿ ಮಾಡುವಂತೆ ಹೈಕೋರ್ಟ್ ಗುರುವಾರ ಅರ್ಜಿದಾರರಿಗೆ ಸೂಚಿಸಿದೆ.ಶರಣ್ ದೇಸಾಯಿ ಎಂಬುವರು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ಹಂಗಾಮಿ ಮುಖ್ಯ ನ್ಯಾಯಮೂರ್ತಿ ಕೆ.ಶ್ರೀಧರ್ ರಾವ್ ಮತ್ತು ನ್ಯಾ.ಎಸ್.ಅಬ್ದುಲ್ ನಜೀರ್ ಅವರಿದ್ದ ವಿಭಾಗೀಯ ಪೀಠವು, ಮುಖ್ಯಮಂತ್ರಿ ಜಗದೀಶ್ ಶೆಟ್ಟರ್, ಗೃಹ ಹಾಗೂ ಕಾನೂನು ಸಚಿವರನ್ನು ಪ್ರಕರಣದಲ್ಲಿ ಪ್ರತಿವಾದಿ ಮಾಡುವಂತೆ ಅರ್ಜಿದಾರರಿಗೆ ಈ ಸೂಚಿಸಿ ವಿಚಾರಣೆ ಮೂಂದೂಡಿತು.ಕಳೆದ ವರ್ಷ ಗುಲ್ಬರ್ಗಾ ಜಿಲ್ಲೆಯೊಂದರಲ್ಲೇ ರಾಜ್ಯದಲ್ಲೇ ಹೆಚ್ಚಿನ ಪ್ರಮಾಣದ 73 ಅತ್ಯಾಚಾರ ಪ್ರಕರಣಗಳು ನಡೆದಿವೆ. ಅತ್ಯಾಚಾರ ಪ್ರಕರಣಗಳನ್ನು ದಾಖಲಿಸಲು ಪೊಲೀಸರು ನಿರಾಕರಿಸುವುದರಿಂದ ಇನ್ನೂ ಹಲವು ಅತ್ಯಾಚಾರ ಪ್ರಕರಣಗಳು ಬೆಳಕಿಗೇ ಬರುವುದಿಲ್ಲ ಎಂದು ಅರ್ಜಿಯಲ್ಲಿ ದೂರಲಾಗಿದೆ.ಅಲ್ಲದೇ, ಕೆಲ ಅತ್ಯಾಚಾರ ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಯಾಗುತ್ತಿದ್ದಾರೆ. ಹೀಗಾಗಿ, ಅತ್ಯಾಚಾರಿಗಳ ವಿರುದ್ಧ ಗೂಂಡಾಕಾಯ್ದೆ ಜಾರಿ ಮಾಡಿದರೆ ಅತ್ಯಾಚಾರ ಪ್ರಕರಣಗಳು ಕಡಿಮೆಯಾಗುವ ಸಾಧ್ಯತೆಯಿದೆ. ಗೂಂಡಾಕಾಯ್ದೆಯಡಿ ಬಂಧಿಸಿದಲ್ಲಿ ಆರೋಪಿಗೆ ಒಂದು ವರ್ಷದ ಕಾಲ ಜಾಮೀನು ದೊರೆಯುವುದಿಲ್ಲ. ಇದರಿಂದ ಪ್ರಕರಣದ ಪ್ರಬಲ ಸಾಕ್ಷ್ಯಾಧಾರಗಳ ಲಭ್ಯವಾಗುವ ಮತ್ತು ತನಿಖೆ ತ್ವರಿತವಾಗಿ ಪೂರ್ಣಗೊಳ್ಳುವ ಸಾಧ್ಯತೆಯಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.