ಉದಯವಾಣಿ ದೆಹಲಿ ಪ್ರತಿನಿಧಿ: ತೀವ್ರ ಗೊಂದಲ ಉಂಟು ಮಾಡಿರುವ ರಾಜ್ಯ ಬಿಜೆಪಿ ಅಧ್ಯಕ್ಷ ಸ್ಥಾನದ ನೇಮಕ ಬಗ್ಗೆ ಸೋಮವಾರ ಮತ್ತೂಂದು ಸುತ್ತಿನ ಚರ್ಚೆ ನಡೆದಿದೆ.ಕಾವೇರಿ ನದಿ ನೀರು ಹಂಚಿಕೆ ಕುರಿತು ದೆಹಲಿಗೆ ಹೋಗಿದ್ದ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ರಾಜನಾಥ್ ಸಿಂಗ್ರನ್ನು ಭೇಟಿ ಮಾಡಿ ಈ ಬಗ್ಗೆ ಪ್ರಧಾನವಾಗಿ ಚರ್ಚೆ ನಡೆಸಿದ್ದಾರೆ ಎಂದು ಮೂಲಗಳು ತಿಳಿಸಿವೆ.ಕಳೆದ ಏಳೆಂಟು ತಿಂಗಳಿನಿಂದಲೂ ಬಿಜೆಪಿಗೆ ನೂತನ ರಾಜಾÂಧ್ಯಕ್ಷರ ನೇಮಕದ ಬಗ್ಗೆ ಬಿಜೆಪಿಯ ಪ್ರಮುಖ ಎಲ್ಲ ವೇದಿಕೆಗಳಲ್ಲಿಯೂ ಚರ್ಚೆ ನಡೆಯುತ್ತಿದ್ದರೂ ಕೂಡ ತಮ್ಮ ಅಂತಿಮ ತೀರ್ಮಾನ ಪ್ರಕಟಿಸಲು ಬಿಜೆಪಿ ವರಿಷ್ಠರು ಹಿಂಜರಿಯುತ್ತಿದ್ದಾರೆ. ನಿತಿನ್ ಗಡ್ಕರಿ ಅವರಿಂದ ಅಧಿಕಾರ ವಹಿಸಿಕೊಂಡಿರುವ ರಾಜನಾಥ್ ಸಿಂಗ್ ಅನೇಕ ದಿಟ್ಟ ನಡೆಗಳನ್ನು ಕೈಗೊಂಡಿದ್ದರೂ ಕೂಡ ರಾಜ್ಯದ ಮಟ್ಟಿಗೆ ಕಾದು ನೋಡುವ ತಂತ್ರದ ಮೊರೆ ಹೋಗಿದ್ದಾರೆ.ಆದರೆ ಸೋಮವಾರ ನಡೆದ ಸಭೆಯಲ್ಲಿ ಈ ಬಗ್ಗೆ ಅಂತಿಮ ತೀರ್ಮಾನ ಕೈಗೊಳ್ಳಲಾಗಿದ್ದು, ಶೀಘ್ರದಲ್ಲೆ ಹೆಸರು ಪ್ರಕಟಣೆಯಾಗುವ ಸಂಭವವಿದೆ. ಇದೇ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಮತ್ತು ಮುಂದಿನ ವಿಧಾನ ಸಭಾ ಚುನಾವಣೆ ಬಗೆ ಚರ್ಚೆ ನಡೆಸಲಾಗಿದೆ ಎಂದು ಮೂಲಗಳು ತಿಳಿಸಿವೆ.ಭೇಟಿ ಸಂದರ್ಭದಲ್ಲಿ ಬಿಜೆಪಿ ರಾಷ್ಟ್ರೀಯ ಕಾರ್ಯದರ್ಶಿ ಅನಂತ್ಕುಮಾರ್, ಡಿಸಿಎಂ ಆರ್.ಅಶೋಕ್, ಸಚಿವರಾದ ಸುರೇಶ್ ಕುಮಾರ್, ಬಸವರಾಜ್ ಬೊಮ್ಮಾಯಿ ಮುಂತಾದವರು ಉಪಸ್ಥಿತರಿದ್ದರು.