ಸಾರಿಗೆ ನೌಕರರು – ಸರಕಾರದ ನಡುವೆ ಯಾವುದೇ ಸಂಧಾನ ಮಾತುಕತೆ ನಡೆದಿಲ್ಲ: ಡಿಸಿಎಂ ಸ್ಪಷ್ಟನೆ
Team Udayavani, Apr 19, 2021, 8:17 PM IST
ಬೆಂಗಳೂರು : ಮುಷ್ಕರ ನಿರತ ಸಾರಿಗೆ ನೌಕರರು ಮತ್ತು ಸರ್ಕಾರದ ನಡುವೆ ಸಂಧಾನದ ಮಾತುಕತೆ ನಡೆದಿದೆ ಎಂದು ಕೆಲವು ಮಾಧ್ಯಮಗಳಲ್ಲಿ ವರದಿಯಾಗಿರುವುದು ಸತ್ಯಕ್ಕೆ ದೂರವಾದ ವಿಚಾರ ಅಂತಹ ಯಾವುದೇ ರೀತಿಯ ಸಂಧಾನ ಪ್ರಕ್ರಿಯೆ ನಡೆದಿಲ್ಲ ಎಂದು ಉಪ ಮುಖ್ಯಮಂತ್ರಿ ಮತ್ತು ಸಾರಿಗೆ ಸಚಿವ ಲಕ್ಶ್ಮಣ ಸವದಿ ಅವರು ಸ್ಪಷ್ಟಪಡಿಸಿದ್ದಾರೆ.
ಸಂಧಾನ ಮಾತುಕತೆ ನಡೆದಿದೆ ಎಂದು ಮಾಧ್ಯಮದಲ್ಲಿ ಪ್ರಸಾರವಾಗುವ ವಿಚಾರವಾಗಿ ಮಾತನಾಡಿದ ಸಚಿವರು ಸಾರಿಗೆ ನೌಕರರ ಮುಷ್ಕರದ ಪ್ರಾರಂಭದ ಸಂದರ್ಭದಲ್ಲಿಯೇ ಮುಖ್ಯಮಂತ್ರಿಗಳು ಯಾವುದೇ ಮಾತುಕತೆ, ಸಂಧಾನದ ಅವಶ್ಯಕತೆ ಇರುವುದಿಲ್ಲ ಮೊದಲು ಸಾರಿಗೆ ನೌಕರರು ಕರ್ತವ್ಯಕ್ಕೆ ಹಾಜರಾಗಲಿ ಎಂದು ತಾಕೀತು ಮಾಡಿದ್ದರು. ಕೆಲವು ಮುಖಂಡರು ತಾವು ಮುಷ್ಕರ ನಿರತರ ಪರವಾಗಿ ಇಂದು ಗೃಹ ಸಚಿವ ಬಸವರಾಜ ಬೊಮ್ಮಾಯಿ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾಗಿ ತಿಳಿಸಿದ್ದಾರೆ. ಅದನ್ನು ನಾನು ಮಾಧ್ಯಮದಲ್ಲಿ ಗಮನಿಸಿದ್ದೇನೆ. ಆದರೆ ನಾನು ಗೃಹ ಸಚಿವರಲ್ಲಿ ಕೇಳಿದಾಗ “ಮುಖ್ಯಮಂತ್ರಿಗಳ ಮಾತನ್ನು ಮೀರಿ ಈಗ ಸಂಧಾನದ ಮಾತುಕತೆ ನಡೆಸುವ ಪ್ರಶ್ನೆಯೇ ಇಲ್ಲ, ಮುಖ್ಯಮಂತ್ರಿಗಳು ತಿಳಿಸಿದಂತೆ ಮೊದಲು ಅವರು ಕರ್ತವ್ಯಕ್ಕೆ ಹಾಜರಾಗಲಿ” ಎಂದು ಅವರು ತಿಳಿಸಿದ್ದಾರೆ.
ಇದನ್ನೂ ಓದಿ :ಕರ್ನಾಟಕ ವಿಶ್ವವಿದ್ಯಾಲಯದ ಆವರಣದಲ್ಲಿ ಕಾಡಾನೆ ಪ್ರತ್ಯಕ್ಷ
ಆದರೆ ಇದನ್ನು ತಿರುಚಿ ಮುಷ್ಕರ ನಿರತ ಸಾರಿಗೆ ನೌಕರರ ಮುಖಂಡರು ತಮ್ಮ ಅನುಕೂಲಕ್ಕೆ ತಕ್ಕಂತೆ ಮಾಧ್ಯಮಕ್ಕೆ ಪ್ರತಿಕ್ರಿಯಿಸುತ್ತಿರುವುದು ಸರಿಯಲ್ಲ. ಆದ್ದರಿಂದ, ಇನ್ನೂ ಕಾಲ ಮಿಂಚಿಲ್ಲ ಎಲ್ಲಾ ಸಾರಿಗೆ ನೌಕರ ಬಂಧುಗಳೂ ತಕ್ಷಣಕ್ಕೆ ಕರ್ತವ್ಯಕ್ಕೆ ಹಾಜರಾಗಬೇಕೆಂದು ಸಾರಿಗೆ ಸಚಿವರು ಮತ್ತೊಮ್ಮೆ ಮನವಿ ಮಾಡಿದ್ದಾರೆ.