ಬಿಜೆಪಿ ಅಭ್ಯರ್ಥಿ ಗೆಲುವು-ವಿಜಯೋತ್ಸವ
Team Udayavani, Dec 15, 2021, 12:17 PM IST
ಶಹಾಪುರ: ವಿಧಾನ ಪರಿಷತ್ ಚುನಾವಣೆಯಲ್ಲಿ ಕಲಬುರಗಿ-ಯಾದಗಿರಿ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಿ.ಜಿ. ಪಾಟೀಲ್ ಗೆಲುವು ಹರ್ಷ ತಂದಿದೆ. ರಾಜ್ಯದಲ್ಲಿ ಒಟ್ಟು 25 ವಿಧಾನ ಪರಿಷತ್ ಸ್ಥಾನಗಳಲ್ಲಿ 12 ಸ್ಥಾನ ಗೆದ್ದು ರಾಜ್ಯ ಬಿಜೆಪಿ ಸರ್ಕಾರ ಅಭೂತಪೂರ್ವ ಸಾಧನೆ ಮಾಡಿದೆ ಎಂದು ಮಾಜಿ ಶಾಸಕ ಗುರು ಪಾಟೀಲ್ ಶಿರವಾಳ ತಿಳಿಸಿದರು.
ನಗರದ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು ಹಮ್ಮಿಕೊಂಡಿದ್ದ ವಿಜಯೋತ್ಸವದಲ್ಲಿ ಭಾಗವಹಿಸಿ ಸಿಹಿ ಸ್ವೀಕರಿಸಿ ಅವರು ಮಾತನಾಡಿದರು.
ಪ್ರಸ್ತುತ ಪರಿಷತ್ ಚುನಾವಣೆ ಫಲಿತಾಂಶ ಮುಂದೆ ಬರುವ ವಿಧಾನಸಭೆ ಚುನಾವಣೆ ದಿಕ್ಸೂಚಿಯಾಗಲಿದೆ. ರಾಜ್ಯದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ ಬರಲಿದೆ. ಕೇಂದ್ರ-ರಾಜ್ಯ ಸರ್ಕಾರದ ಸಾಧನೆಗಳು, ಪ್ರಧಾನಿ ಮೇಲಿನ ವಿಶ್ವಾಸ ಮುಂದಿನ ಚುನಾವಣೆಯಲ್ಲಿ ಪೂರಕ ಶಕ್ತಿಯಾಗಲಿದೆ. ಹೀಗಾಗಿ ಕೇಂದ್ರದಲ್ಲಿ ಮೊದಲಿಗಿಂತ ಹೆಚ್ಚು ಸ್ಥಾನಗಳಲ್ಲಿ ಗೆಲುವು ಸಾಧಿಸಲಿದೆ. ಅಲ್ಲದೇ ರಾಜ್ಯದಲ್ಲೂ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದೇವೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಮಾಜಿ ಎಂಎಲ್ಸಿ ಅಮಾತೆಪ್ಪ ಕಂದಕೂರ ಮಾತನಾಡಿ, ಬಿಜೆಪಿ ಗೆಲುವಿಗೆ ಕಾರ್ಯಕರ್ತರ ಶ್ರಮವಿದೆ. ಅವರ ಸೇವೆ ಪರಿಶ್ರಮ ಶ್ಲಾಘನೀಯ ಎಂದರು.
ಈ ವೇಳೆ ಯಮನಪ್ಪ ಕಾಶಿರಾಜ, ಮಲ್ಲಿಕಾರ್ಜುನ ಕಂದಕೂರ, ವೆಂಕಟೇಶ ಆಲ್ದಾಳ, ಸಾಯಬಣ್ಣ ನಾಸಿ ಸೇರಿದಂತೆ ಇತರರಿದ್ದರು.