ದಕ್ಷಿಣ ಕನ್ನಡ: ವೀಕೆಂಡ್ ಕರ್ಫ್ಯೂ; ಈ ವಾರ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅವಕಾಶ
Team Udayavani, Jan 6, 2022, 8:10 AM IST
ಕೇರಳ ಗಡಿಭಾಗವಾದ ತಲಪಾಡಿಗೆ ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಮಂಗಳೂರು: ಕೊರೊನಾ ಸೋಂಕು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ಸರಕಾರ ವಿಧಿಸಿರುವ ವೀಕೆಂಡ್ ಕರ್ಫ್ಯೂನಲ್ಲಿ ದ.ಕ. ಜಿಲ್ಲೆಯಲ್ಲಿ ಈ ವಾರಾಂತ್ಯದಲ್ಲಿ ಮದುವೆ, ಯಕ್ಷಗಾನ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳನ್ನು ನಡೆಸಲು ಅವಕಾಶವಿರಲಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಕೆ.ವಿ.
ಅವರು ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿಯಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ದ.ಕ. ಜಿಲ್ಲೆಯಲ್ಲಿ ಕೊರೊನಾ ಸೋಂಕಿನ ಸ್ಥಿತಿ ಹಾಗೂ ವೀಕೆಂಡ್ ಕರ್ಫ್ಯೂ ಹಿನ್ನೆಲೆಯಲ್ಲಿ ಕೈಗೊಳ್ಳಲಾಗಿರುವ ಕ್ರಮಗಳ ಬಗ್ಗೆ ಮಾಹಿತಿ ನೀಡಿದ ಅವರು ಒಳಾಂಗಣದಲ್ಲಿ 100 ಹಾಗೂ ಹೊರಾಂಗಣದಲ್ಲಿ 200 ಜನರಿಗೆ ಸೀಮಿತಗೊಳಿಸಿ ಕಾರ್ಯಕ್ರಮ ನಡೆಸಬಹುದಾಗಿದೆ. ಈ ಕ್ರಮ ಈ ವಾರಕ್ಕೆ ಮಾತ್ರ ಅನ್ವಯವಾಗುತ್ತದೆ. ಮುಂದಿನ ವಾರ ಪರಿಸ್ಥಿತಿ ನೋಡಿ ನಿರ್ಧಾರ ಕೈಗೊಳ್ಳಲಾಗುವುದು ಎಂದರು.
ವಾರಾಂತ್ಯ ಸಂದರ್ಭ ಸುಬ್ರಹ್ಮಣ್ಯ, ಕಟೀಲು, ಧರ್ಮಸ್ಥಳ ಕ್ಷೇತ್ರ ಸೇರಿದಂತೆ ಎಲ್ಲ ದೇವಾಲಯ ಹಾಗೂ ಚರ್ಚ್, ಮಸೀದಿಗಳಲ್ಲಿ ಭಕ್ತರ ಪ್ರವೇಶವನ್ನು ನಿರ್ಬಂಧಿಸಲಾಗಿದೆ. ನಿಗದಿತ ಸಮಯದಲ್ಲೇ ಮಾಡಬೇಕಾದ ಕೆಲವೊಂದು ಸಾಂಪ್ರದಾಯಿಕ ಕಾರ್ಯಕ್ರಮಗಳಿದ್ದಲ್ಲಿ ಅವುಗಳನ್ನು ಸರಕಾರದ ಮಾರ್ಗಸೂಚಿಯಲ್ಲಿ ತಿಳಿಸಿದಂತೆ ಸೀಮಿತಗೊಳಿಸಿ ನಡೆಸಬಹುದಾಗಿದೆ ಎಂದವರು ವಿವರಿಸಿದರು.
ವಾರಾಂತ್ಯ ಕರ್ಫ್ಯೂ ವೇಳೆ ಶಾಲಾ ಕಾಲೇಜುಗಳು ಬಂದ್ ಆಗಲಿವೆ. ಆದರೆ ಪೂರ್ವನಿಗದಿತ ಪರೀಕ್ಷೆಗಳಿದ್ದಲ್ಲಿ ನಡೆಸಬಹುದಾಗಿದೆ. ವಿದ್ಯಾರ್ಥಿ ಗಳು ಹಾಲ್ ಟಿಕೆಟ್ನೊಂದಿಗೆ ಪ್ರಯಾಣ ಮಾಡಬಹುದು. ದೂರದ ಊರುಗಳಿಗೆ ಹೋಗುವವರು ಬಸ್, ರೈಲು ಅಥವಾ ವಿಮಾನ ಯಾನದ ಟಿಕೆಟ್ನೊಂದಿಗೆ ಕರ್ಫ್ಯೂ ಸಂದರ್ಭ ಸಂಚರಿಸಲು ಅವಕಾಶವಿದೆ. ಜಿಲ್ಲೆಯಲ್ಲಿ ಮುಂದಿನ ದಿನಗಳಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತಂತೆ ವೈದ್ಯಕೀಯ ಪರಿಣಿತರು, ಮಾಲ್, ಬಸ್, ಹೊಟೇಲ್-ರೆಸ್ಟೋರೆಂಟ್ ಮಾಲಕರ ಸಭೆ ನಡೆಸಿ ಚರ್ಚಿಸಲಾಗುವುದು ಎಂದು ಡಿಸಿ ತಿಳಿಸಿದರು.
ಜಿಲ್ಲೆಯಲ್ಲಿ ಈ ಹಿಂದೆ ಸಕ್ರಿಯವಾಗಿದ್ದ ಕೋವಿಡ್ ಕೇರ್ ಸೆಂಟರ್, ಕೋವಿಡ್ ಕಂಟ್ರೋಲ್ ರೂಂಗಳನ್ನು ಹಾಗೂ ಕೋವಿಡ್ ಸಂದರ್ಭ ರಚಿಸಲಾದ ಸುರಕ್ಷಾ ತಂಡಗಳನ್ನು ಸಕ್ರಿಯಗೊಳಿಸಲಾಗುತ್ತಿದೆ. ಗಡಿ ಭಾಗಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ತಪಾಸಣ ಸಂಖ್ಯೆಯನ್ನು ಹೆಚ್ಚಿಸಲು ಸೂಚಿಸಲಾಗಿದೆ. ದಿನವೊಂದಕ್ಕೆ ಜಿಲ್ಲೆಯಲ್ಲಿ 15,000 ಕೋವಿಡ್ ತಪಾಸಣೆಗೆ ಕ್ರಮ ವಹಿಸಲಾಗಿದೆ ಎಂದು ಜಿಲ್ಲಾಧಿಕಾರಿ ಡಾ| ರಾಜೇಂದ್ರ ಅವರು ಹೇಳಿದರು.
ಸೂಕ್ತ ಮುಂಜಾಗ್ರತ ಕ್ರಮ
ದ.ಕ. ಜಿಲ್ಲೆಯಲ್ಲಿ ಪ್ರಸ್ತುತ 441 ಸಕ್ರಿಯ ಪ್ರಕರಣಗಳಿವೆ. ಒಂದು ವಾರದ ಪಾಸಿಟಿವಿಟಿ ದರ ಸರಾಸರಿ ಶೇ.0.63 ಇದ್ದು ಮಂಗಳವಾರ ಶೇ. 1ಕ್ಕೆ ತಲುಪಿದೆ. ಜಿಲ್ಲೆಯಲ್ಲಿ ಪತ್ತೆಯಾಗಿದ್ದ ಏಳು ಒಮಿಕ್ರಾನ್ ರೋಗಿಗಳನ್ನು ಚಿಕಿತ್ಸೆಯ ಬಳಿಕ ಮತ್ತೆ ತಪಾಸಣೆಗೊಳಪಡಿಸಿದಾಗ ನೆಗೆಟಿವ್ ಆಗಿದೆ. ಕೋವಿಡ್ ಸೋಂಕಿತರ ಸಂಖ್ಯೆಯಲ್ಲಿ ಏರಿಕೆಯಾದಲ್ಲಿ ವೆನ್ಲಾಕ್ ಆಸ್ಪತ್ರೆಯಲ್ಲದೆ ಇತರ ಆಸ್ಪತ್ರೆಗಳಲ್ಲೂ ಚಿಕಿತ್ಸೆಗೆ ವ್ಯವಸ್ಥೆಗೊಳಿಸಲಾಗುವುದು ಎಂದು ಜಿಲ್ಲಾಧಿಕಾರಿ ತಿಳಿಸಿದರು. 15ರಿಂದ 18 ವರ್ಷದೊಳಗಿನವರಿಗೆ ಲಸಿಕೆ ನೀಡುವ ಕಾರ್ಯಕ್ರಮದಲ್ಲಿ ಈವರೆಗೆ 41,799 ವಿದ್ಯಾರ್ಥಿಗಳಿಗೆ ಲಸಿಕೆ ನೀಡಲಾಗಿದ್ದು ಕಾರ್ಯಕ್ರಮ ಮುಂದುವರಿದಿದೆ ಎಂದರು.
ತಜ್ಞರ ಸಮಿತಿಯ ಡಾ| ಶಾಂತಾರಾಮ ಬಾಳಿಗ ಅವರು ಮಾತನಾಡಿ, ಮಾರ್ಗಸೂಚಿಗಳನ್ನು ಪಾಲಿಸಿದರೆ ಕೊರೊನಾ ನಿಯಂತ್ರಿಸಬಹುದು. ಜ್ವರ ಬಂದರೆ ಹೆದರಬೇಕಾಗಿಲ್ಲ. ಪರೀಕ್ಷೆ ಮಾಡಿಸಬೇಕು. ಒಮಿಕ್ರಾನ್ ಬಂದರೂ ಶೇ. 95 ಮಂದಿಯಲ್ಲಿ ಅದರ ರೋಗ ಲಕ್ಷಣ ಇರುವುದಿಲ್ಲ ಎಂದು ವಿವರಿಸಿದರು.
ಜ.ಪಂ. ಸಿಇಒ ಡಾ| ಕುಮಾರ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಕಿಶೋರ್ ಕುಮಾರ್ ಉಪಸ್ಥಿತರಿದ್ದರು.
ಇದನ್ನೂ ಓದಿ:ಉಚ್ಚಿಲ ದೇವಸ್ಥಾನ: ವ್ಯವಸ್ಥಾಪನ ಸಮಿತಿ ನೇಮಕಾತಿ ಆದೇಶಕ್ಕೆ ಹೈಕೋರ್ಟ್ ತಡೆ
ವಾರಾಂತ್ಯ ಕರ್ಫ್ಯೂ
-ದಿನಸಿ, ಹಾಲು, ತರಕಾರಿ, ಬೀದಿ ಬದಿ ವ್ಯಾಪಾರ, ಮೀನು, ಮಾಂಸ, ಹಾಲು, ಔಷಧಿ ಅಂಗಡಿಗಳು ತೆರೆದಿರುತ್ತವೆ
– ಮದುವೆ, ಯಕ್ಷಗಾನ, ನೇಮ ಸೇರಿದಂತೆ ಪೂರ್ವ ನಿಗದಿತ ಕಾರ್ಯಕ್ರಮಗಳಿಗೆ ಅವಕಾಶ
– ಒಳಾಂಗಣ 100, ಹೋರಾಂಗಣದಲ್ಲಿ 200 ಮಂದಿಗೆ ಸೀಮಿತ
– ಬಸ್ ಸಂಚಾರ ಸಹಿತ ಸಾರ್ವಜನಿಕ ಸಂಚಾರ ವ್ಯವಸ್ಥೆಗೆ ಅವಕಾಶ
– ಧಾರ್ಮಿಕ ಕ್ಷೇತ್ರಗಳಲ್ಲಿ ಭಕ್ತರ ಪ್ರವೇಶ ನಿರ್ಬಂಧ
– ಶಾಲಾ ಕಾಲೇಜು ಬಂದ್, ಪರೀಕ್ಷೆಗಳಿದ್ದಲ್ಲಿ ಅವಕಾಶ
ವಾರಾಂತ್ಯದ ಕರ್ಫ್ಯೂ ಸಂಬಂಧ ರಾಜ್ಯ ಸರಕಾರ ಮಾರ್ಗಸೂಚಿ ಜಿಲ್ಲೆಯಲ್ಲಿ ಅನುಷ್ಠಾನವಾಗಲಿದೆ. 200 ಮಂದಿಯ ಮಿತಿಯಲ್ಲಿ ಪೂರ್ವ ನಿಯೋಜಿತ ಮದುವೆಗೆ ಸರಕಾರವೇ ಅನುಮತಿ ನೀಡಿದೆ.
– ಸದಾಶಿವ ಪ್ರಭು,
ಅಪರ ಜಿಲ್ಲಾಧಿಕಾರಿ, ಉಡುಪಿ ಜಿಲ್ಲೆ
ಉಳ್ಳಾಲ: ಗಡಿಯಲ್ಲಿ ತಪಾಸಣೆ
ಉಳ್ಳಾಲ: ವಾರಾಂತ್ಯ ಕರ್ಫ್ಯೂ ಮತ್ತು ಗಡಿಭಾಗದಲ್ಲಿ ಕಟ್ಟೆಚ್ಚರ ವಹಿಸುವ ನಿಟ್ಟಿನಲ್ಲಿ ಕೇರಳ ಗಡಿಭಾಗವಾದ ತಲಪಾಡಿಗೆ ಜಿಲ್ಲಾ ಧಿಕಾರಿ ಡಾ| ರಾಜೇಂದ್ರ ಕೆ.ವಿ.ಭೇಟಿ ನೀಡಿ ಪರಿಶೀಲನೆ ನಡೆಸಿದರು.
ಈ ಸಂದರ್ಭ ಕೇರಳ ಕಡೆಯಿಂದ ಬರುವ ಎಲ್ಲ ವಾಹನಗಳ ಪರಿಶೀಲನೆ ನಡೆಸುವಂತೆ ಆರೋಗ್ಯ ಮತ್ತು ಕಂದಾಯ ಇಲಾಖೆ ಅಧಿಕಾರಿಗಳಿಗೆ ಸೂಚಿಸಿದರು. ಆರ್ ಟಿಪಿಸಿಆರ್ ಕಡ್ಡಾಯವಾಗಿ ಇರಬೇಕು. ಪ್ರತಿದಿನ 24 ಗಂಟೆ ಗಳ ಕಾಲ ಅಧಿಕಾರಿಗಳು ಈ ವಿಚಾರದಲ್ಲಿ ಜವಾಬ್ದಾರಿಯುತವಾಗಿ ಕಾರ್ಯ ನಿರ್ವಹಣೆ ಮಾಡಬೇಕು. ಪೊಲೀಸ್ ಇಲಾಖೆ ಸಹಿತ ಆರೋಗ್ಯ, ಕಂದಾಯ ಇಲಾಖೆ ಅಧಿಕಾರಿಗಳು ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಸೂಚಿಸಿದ ಅವರು, ಕಾನೂನು ಉಲ್ಲಂಘಿಸುವವರ ವಿರುದ್ಧ ಕ್ರಮ ಕೈಗೊಳ್ಳುವಂತೆ ತಿಳಿಸಿದರು. ಈ ಸಂದರ್ಭ ತಹಶೀಲ್ದಾರ್ ಗುರುಪ್ರಸಾದ್, ಉಳ್ಳಾಲ ಇನ್ಸ್ಪೆಕ್ಟರ್ ಸಂದೀಪ್ ಉಪಸ್ಥಿತರಿದ್ದರು.
ಜ. 19ರ ವರೆಗೆ ನಿಯಂತ್ರಣಕ್ಕೆ ಕ್ರಮ
ಮಂಗಳೂರು: ಕೊರೊನಾ ಸೋಂಕು ಏರುಗತಿಯಲ್ಲಿರುವ ಹಿನ್ನೆಲೆ ಯಲ್ಲಿ ದ.ಕ. ಜಿಲ್ಲೆಯಲ್ಲಿ ಜ. 5ರ ರಾತ್ರಿ 10ರಿಂದ 19ರ ಬೆಳಗ್ಗೆ 5 ಗಂಟೆಯ ವರೆಗೆ ಅನ್ವಯವಾಗುವಂತೆ ರಾತ್ರಿ ಕರ್ಫ್ಯೂ ಸೇರಿದಂತೆ ಕೆಲವೊಂದು ನಿರ್ಬಂಧಗಳನ್ನು ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಬುಧವಾರ ಆದೇಶ ಹೊರಡಿಸಿದ್ದಾರೆ.
ಆ ಪ್ರಕಾರ, ಜಿಲ್ಲೆಯಾದ್ಯಂತ ರಾತ್ರಿ 10ರಿಂದ ಬೆಳಗ್ಗೆ 5 ರವರೆಗೆ ರಾತ್ರಿ ಕರ್ಫ್ಯೂ ಜಾರಿಗೊಳಿಸಲಾಗಿದೆ. ಜಿಲ್ಲೆಯಾದ್ಯಂತ ವಾರಾಂತ್ಯದ ಕರ್ಫ್ಯೂ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿಯಲ್ಲಿ ಎಲ್ಲ ಕಚೇರಿಗಳು ಸೋಮವಾರದಿಂದ ಶುಕ್ರವಾರದವರೆಗೆ ವಾರದಲ್ಲಿ 5 ದಿನಗಳು ಮಾತ್ರ ಕಾರ್ಯನಿರ್ವಹಿಸಬೇಕು. ವಾರಾಂತ್ಯದ ಕರ್ಫ್ಯೂ ಸಮಯದಲ್ಲಿ ತುರ್ತು ಉದ್ದೇಶಗಳಿಗಾಗಿ ಜನರ ಅಗತ್ಯತೆಗನುಗುಣವಾಗಿ ಸಾರ್ವಜನಿಕರಿಗೆ ಕಾರ್ಯನಿರ್ವಹಿಸಲು ಸಾರ್ವಜನಿಕ ಸಾರಿಗೆ ಸಂಸ್ಥೆಯ ಮುಖ್ಯಸ್ಥರು ಕ್ರಮಕೈಗೊಳ್ಳಬೇಕು.
ಕೋವಿಡ್ ಸಮುಚಿತ ವರ್ತನೆಗಳನ್ನು ಕಡ್ಡಾಯವಾಗಿ ಪಾಲಿಸಿಕೊಂಡು ಮತ್ತು ಸಂಪೂರ್ಣವಾಗಿ ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು ಶೇ.50ಕ್ಕೆ ಮಿತಿಗೊಳಿಸಿ ಪಬ್ಗಳು, ಕ್ಲಬ್ಗಳು/ ರೆಸ್ಟೋರೆಂಟ್ಗಳು, ಹೊಟೇಲ್ಗಳಲ್ಲಿ ತಿನ್ನುವ ಸ್ಥಳಗಳು ಇತ್ಯಾದಿಗೆ ಅನುಮತಿ ನೀಡಲಾಗಿದೆ.
ಲಸಿಕೆ ಪಡೆದ ವ್ಯಕ್ತಿಗಳಿಗೆ ಮಾತ್ರ ಆಸನ ಸಾಮರ್ಥ್ಯವನ್ನು ಶೇ. 50ಕ್ಕೆ ಮಿತಿಗೊಳಿಸಿ ಎಲ್ಲ ಸಿನೆಮಾ ಹಾಲ್ಗಳು, ಮಲ್ಟಿಫ್ಲೆಕ್ಸ್ಗಳು, ಚಿತ್ರಮಂದಿರಗಳು, ರಂಗಮಂದಿರಗಳು, ಆಡಿಟೋರಿಯಂಗಳು ಮತ್ತು ಇತರ ಸಭಾಂಗಣಗಳು ಕಾರ್ಯಾಚರಿಸಬೇಕು. ಈಜುಕೊಳ ಮತ್ತು ಜಿಮ್ಗಳಲ್ಲಿ ಶೇ. 50ರಷ್ಟು ಸಾಮರ್ಥ್ಯದೊಂದಿಗೆ ಬಳಸಲು ಅನುಮತಿ ನೀಡಲಾಗಿದೆ. ಅಗತ್ಯ ಮತ್ತು ತುರ್ತು ಚಟುವಟಿಕೆಗಳನ್ನು ಹೊರತುಪಡಿಸಿ ಶುಕ್ರವಾರ ರಾತ್ರಿ 10ರಿಂದ ಸೋಮವಾರ ಬೆಳಗ್ಗೆ 5ರ ವರೆಗೆ ಜನ ಸಂಚಾರವನ್ನು ಕಟ್ಟುನಿಟ್ಟಾಗಿ ನಿಷೇಧಿ ಸಲಾಗಿದೆ. ಜಿಲ್ಲೆಯಲ್ಲಿ ಎಲ್ಲ ರ್ಯಾಲಿ, ಧರಣಿಗಳು, ಪ್ರತಿಭಟನೆಗಳನ್ನು ನಿಷೇಧಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳು ಆದೇಶದಲ್ಲಿ ತಿಳಿಸಿದ್ದಾರೆ.
ಕುಕ್ಕೆ ದೇವಸ್ಥಾನ: ಸೇವೆಗಳು ರದ್ದು
ಸುಬ್ರಹ್ಮಣ್ಯ: ಒಮಿಕ್ರಾನ್ ವೈರಸ್ ಹರಡುವಿಕೆಯನ್ನು ತಡೆಗಟ್ಟುವ ಹಿನ್ನೆಲೆಯಲ್ಲಿ ಸರಕಾರದ ಆದೇಶದಂತೆ ಮುಂದಿನ ಸೂಚನೆ ಬರುವವರೆಗೆ ಕುಕ್ಕೆ ಶ್ರೀ ಸುಬ್ರಹ್ಮಣ್ಯ ದೇವಸ್ಥಾನದಲ್ಲಿ ಸೇವೆಗಳನ್ನು ರದ್ದು ಮಾಡಲಾಗಿದೆ.
ಕುಕ್ಕೆ ದೇಗುಲದಲ್ಲಿ ಒಂದು ಬಾರಿಗೆ 50 ಮಂದಿಗೆ ಮಾತ್ರ ದರ್ಶನಕ್ಕೆ ಅವಕಾಶವಿರುತ್ತದೆ ಹಾಗೂ ವಾರಾಂತ್ಯ ಕರ್ಫ್ಯೂ ಹಿನ್ನೆಲೆಯಲ್ಲಿ ಶನಿವಾರ ಮತ್ತು ರವಿವಾರ ದರ್ಶನಕ್ಕೆ ಅವಕಾಶವಿಲ್ಲ. ಭಕ್ತರು ಎರಡು ಡೋಸ್ ಲಸಿಕೆ ಹಾಕಿಸಿಕೊಂಡವರಿಗೆ ದೇವರ ದರ್ಶನಕ್ಕೆ ಅವಕಾಶವಿದೆ.
ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಸರಕಾರದ ಆದೇಶದಂತೆ ಕೋವಿಡ್ ನಿಯಮ ಪಾಲಿಸಿಕೊಂಡು ದೇವರ ದರ್ಶನ ಮತ್ತು ಸೇವೆಗೆ ಅವಕಾಶ ನೀಡಲಾಗಿದೆ.
ಕುಂಭಾಶಿಯ ಆನೆಗುಡ್ಡೆ ಶ್ರೀ ವಿನಾಯಕ ದೇಗುಲದಲ್ಲಿ ಎರಡು ಡೋಸ್ ಲಸಿಕೆ ಪಡೆದ 50 ಜನರಿಗೆ ಒಂದು ಬಾರಿ ಶ್ರೀದೇವರ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.