ವಾಯುಭಾರ ಕುಸಿತ: ಡಿ.12ರವರೆಗೆ ರಾಜ್ಯಾದ್ಯಂತ ಚಳಿ ಜತೆ ಮಳೆ
Team Udayavani, Dec 10, 2022, 7:35 AM IST
ಬೆಂಗಳೂರು: ಬಂಗಾಳ ಕೊಲ್ಲಿಯಲ್ಲಿ ಉಂಟಾಗಿರುವ ಮ್ಯಾಂಡಸ್ ಚಂಡಮಾರುತದ ಪರಿಣಾಮ ರಾಜ್ಯದ ವಿವಿಧ ಭಾಗಗಳಲ್ಲಿ ಡಿ.12ರ ವರೆಗೆ ಚಳಿಯ ಜತೆಗೆ ಮಳೆ ಉಂಟಾಗಲಿದೆ.
ಬಂಗಾಳ ಕೊಲ್ಲಿಯಲ್ಲಿನ ವಾಯುಭಾರ ಕುಸಿತ ತೀವ್ರಗೊಂಡು ಚಂಡಮಾರುತವಾಗಿ ಮಾರ್ಪಟ್ಟಿದೆ. ಗುರುವಾರ ತಮಿಳುನಾಡು ಹಾಗೂ ಪುದುಚೇರಿ ಕರಾವಳಿ ಭಾಗಕ್ಕೆ ಈ ಚಂಡಮಾರುತದ ಪ್ರಭಾವ ಬೀರಿದೆ. ಇದರ ಪರಿಣಾಮ ಬೆಂಗಳೂರು ಸೇರಿ ದಕ್ಷಿಣ ಒಳನಾಡಿನ ಕೆಲ ಭಾಗಗಳಲ್ಲಿ ಚಳಿಯ ವಾತಾವರಣ ಸೃಷ್ಟಿಯಾಗಿದೆ.
ತುಂತುರು ಮಳೆ ಮತ್ತು ಮೋಡ ಕವಿದ ವಾತಾವರಣ ಇರಲಿದೆ. ವಾರಾಂತ್ಯದಲ್ಲಿ ಗುಡುಗು ಮತ್ತು ಬಿರುಗಾಳಿಯೊಂದಿಗೆ ಮಳೆಯಾಗುವ ನಿರೀಕ್ಷೆಯಿದೆ. ಮ್ಯಾಂಡಸ್ ಚಂಡಮಾರುತದ ಪರಿಣಾಮದಿಂದ ಬೆಂಗಳೂರಿನ ತಾಪಮಾನ ಹಾಗೂ ಗಾಳಿಯ ಗುಣಮಟ್ಟದ ಮೇಲೂ ಪರಿಣಾಮ ಉಂಟಾಗಲಿದೆ. ಈಶಾನ್ಯ ಮಾನ್ಸೂನ್ ಇನ್ನೂ ಮುಗಿಯದ ಕಾರಣ ಮುಂದಿನ 3 ದಿನಗಳ ಕಾಲ ಮಳೆ ಬೀಳಬಹುದು.
ಶುಕ್ರವಾರ ಬಾಗಲಕೋಟೆಯಲ್ಲಿ ಕನಿಷ್ಠ ತಾಪಮಾನ 6.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಎಲ್ಲೆಲ್ಲಿ ಮಳೆಯಾಗಲಿದೆ?: ದಕ್ಷಿಣ ಒಳನಾಡಿನ ಬೆಂಗಳೂರು ನಗರ, ಬೆಂ.ಗ್ರಾಮಾಂತರ, ಚಾಮರಾಜನಗರ, ಮಂಡ್ಯ, ಚಿಕ್ಕಬಳ್ಳಾಪುರ, ಕೋಲಾರ, ಚಿತ್ರದುರ್ಗ, ರಾಮನಗರ, ತುಮಕೂರು ಜೆಲ್ಲೆಯ ಕೆಲ ಭಾಗಗಳಲ್ಲಿ ಡಿ.12ರ ವರೆಗೆ ಭಾರೀ ಮಳೆಯಾಗುವ ಸಾಧ್ಯತೆಗಳಿವೆ.
ದಕ್ಷಿಣ ಕನ್ನಡ, ಉಡುಪಿ, ಹಾಸನ, ಕೊಡಗು, ಚಿಕ್ಕಮಗಳೂರು, ಮೈಸೂರು, ಉತ್ತರ ಒಳನಾಡಿನ ಬಾಗಲಕೋಟೆ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿಯಲ್ಲಿ ಮಳೆಯಾಗಲಿದೆ. ಕರ್ನಾಟಕದ ಕರಾವಳಿ ಮತ್ತು ಉತ್ತರ ಒಳನಾಡಿನಲ್ಲಿ ಡಿ.11 ಹಾಗೂ 12ರಂದು ಗುಡುಗು ಸಹಿತ ಮಳೆಯಾಗಲಿದ್ದು, ಬೆಂಗಳೂರಿನಲ್ಲಿ ಗರಿಷ್ಠ 23 ಹಾಗೂ ಕನಿಷ್ಠ 19 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗುವ ಸಾಧ್ಯತೆಗಳಿವೆ ಎಂದು ಹವಾಮಾನ ತಜ್ಞ ಶ್ರೀನಿವಾಸ ರೆಡ್ಡಿ ತಿಳಿಸಿದ್ದಾರೆ.
ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾದರೆ, ಚೆನ್ನೈನ ಉತ್ತರ ಹಾಗೂ ಆಂದ್ರದ ದಕ್ಷಿಣ ಭಾಗದಲ್ಲಿ ಹೆಚ್ಚಿನ ತೀವ್ರತೆ ಉಂಟಾಗಲಿದೆ. ಉತ್ತರ ಭಾರತದ ಭಾಗದಿಂದ ದಕ್ಷಿಣ ಭಾರತದ ಕಡೆ ಗಾಳಿ ಬೀಸಿದರೆ ಕರ್ನಾಟಕ ಸೇರಿ ದಕ್ಷಿಣ ಭಾರತದ ರಾಜ್ಯಗಳ ಕೆಲ ಭಾಗಗಳಲ್ಲಿ ಚಳಿಯ ವಾತಾವರಣ ಉಂಟಾಗುತ್ತದೆ