ಕೊನೆಗೂ ತುಂಬಿದ ಸುಖು ಸಂಪುಟ : ಸ್ಥಾನ ಪಡೆದುಕೊಂಡ ವಿಕ್ರಮಾದಿತ್ಯ ಸಿಂಗ್
Team Udayavani, Jan 8, 2023, 8:22 PM IST
ಶಿಮ್ಲಾ: ಹಿಮಾಚಲ ಪ್ರದೇಶದಲ್ಲಿ ಒಂದು ತಿಂಗಳ ಹಿಂದೆ ಅಧಿಕಾರಕ್ಕೆ ಬಂದ ಸುಖ್ವಿಂದರ್ ಸಿಂಗ್ ಸುಖು ನೇತೃತ್ವದ ಕಾಂಗ್ರೆಸ್ ಸರ್ಕಾರದ ಸಂಪುಟ ವಿಸ್ತರಣೆಯಾಗಿದೆ. ಕಾಂಗ್ರೆಸ್ನ ಹಿರಿಯ ನಾಯಕ ದಿ.ವೀರಭದ್ರ ಸಿಂಗ್ ಅವರ ಪುತ್ರ ವಿಕ್ರಮಾದಿತ್ಯ ಸಿಂಗ್ ಸೇರಿದಂತೆ ಏಳು ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದ್ದಾರೆ.
ರಾಜ್ಯಪಾಲ ರಾಜೇಂದ್ರ ವಿಶ್ವನಾಥ್ ಅಲ್ವೇಕರ್ ನೂತನ ಸಚಿವರಿಗೆ ಅಧಿಕಾರ ಮತ್ತು ಗೋಪ್ಯತೆಯ ಪ್ರಮಾಣ ವಚನ ಬೋಧಿಸಿದ್ದಾರೆ. ಏಳು ಸಚಿವರ ಪ್ರಮಾಣ ಸ್ವೀಕಾರದ ಬಳಿಕ ಸುಖು ಸಂಪುಟದ ಸಚಿವರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.
ಇನ್ನೂ ಮೂರು ಸಚಿವ ಸ್ಥಾನಗಳು ಖಾಲಿ ಉಳಿದಿವೆ. ದಿ.ವೀರಭದ್ರ ಸಿಂಗ್ ಪುತ್ರನನ್ನು ಸಂಪುಟಕ್ಕೆ ಸೇರಿಸಿಕೊಳ್ಳುವ ಮೂಲಕ ಭಿನ್ನಮತೀಯರ ಗುಂಪನ್ನು ಸಂತೈಸುವ ಪ್ರಯತ್ನವನ್ನೂ ಮಾಡಲಾಗಿದೆ. ಶಿಮ್ಲಾ ಜಿಲ್ಲೆಗೆ ಹೆಚ್ಚಿನ ಪ್ರಾತಿನಿಧ್ಯ ಕಲ್ಪಿಸಲಾಗಿದೆ. ಇನ್ನೊಂದು ಬೆಳವಣಿಗೆಯಲ್ಲಿ ಆರು ಮಂದಿ ಶಾಸಕರಿಗೆ ಮುಖ್ಯ ಸಂಸದೀಯ ಕಾರ್ಯದರ್ಶಿ (ಸಿಪಿಎಸ್) ಹುದ್ದೆ ನೀಡಲಾಗಿದೆ.
ಪ್ರತಿಪಕ್ಷ ನಾಯಕ ಜೈರಾಮ್ ಠಾಕೂರ್ “ಎಲ್ಲಾ ಪ್ರದೇಶಗಳಿಗೆ ಸೂಕ್ತ ಪ್ರಾತಿನಿಧ್ಯ ನೀಡಲಾಗಿಲ್ಲ. 6 ಮಂದಿ ಸಂಸದೀಯ ಕಾರ್ಯದರ್ಶಿಗಳ ನೇಮಕವೂ ಸರಿಯಲ್ಲ’ ಎಂದರು.