ಇಂದಿರಾ ಕ್ಯಾಂಟೀನ್ ಕಾಯಕಲ್ಪಕ್ಕೆ ಜಿಲ್ಲಾಡಳಿತ ಕ್ರಮ
Team Udayavani, Jun 1, 2023, 1:35 PM IST
ರಾಮನಗರ: ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಹಿಂದಿನ ಅವಧಿಯಲ್ಲಿ ಪ್ರಾರಂಭಿಸಿರುವ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಇಂದಿರಾ ಕ್ಯಾಂಟಿನ್ಗಳಿಗೆ ಜಿಲ್ಲೆಯಲ್ಲಿ ಕಾಯಕಲ್ಪ ನೀಡಲು ನಗರಾಭಿವೃದ್ಧಿ ಇಲಾಖೆ ಮುಂದಾಗಿದೆ. ಕಳೆದ ನಾಲ್ಕು ವರ್ಷಗಳ ಅವಧಿಯಲ್ಲಿ ಬೇಕಾಬಿಟ್ಟಿ ನಡೆಯುತ್ತಿದ್ದ ಇಂದಿರಾ ಕ್ಯಾಂಟೀನ್ಗೆ ಚಿಕಿತ್ಸೆ ನೀಡುವ ಕಾರ್ಯವನ್ನು ಜಿಲ್ಲಾಡಳಿತ ಕೈಗೊಂಡಿದೆ.
ಜಿಲ್ಲಾ ಕೇಂದ್ರ ರಾಮನಗರ ಸೇರಿದಂತೆ ಜಿಲ್ಲೆಯ ಮೂರು ತಾಲೂಕು ಕೇಂದ್ರಗಳಲ್ಲಿ ಇಂದಿರಾ ಕ್ಯಾಂಟೀನ್ ಸ್ಥಾಪಿಸಲಾಗಿದ್ದು, 2017-18ನೇ ಸಾಲಿನಲ್ಲಿ ಆರಂಭಗೊಂಡ ಇಂದಿರಾ ಕ್ಯಾಂಟೀನ್, ಮೊದ ಲು ಒಂದೆರಡು ವರ್ಷಗಳ ಕಾಲ ಉತ್ತಮವಾಗಿ ನಡೆದಿ ದ್ದನ್ನು ಹೊರತು ಪಡಿಸಿದರೆ ಬಳಿಕ ನಿರ್ಲಕ್ಷ್ಯಕ್ಕೆ ಒಳಗಾಯಿತು.
ಬೇಕಾಬಿಟ್ಟಿ ಕಾರ್ಯ: ನಗರಸಭೆ ಮತ್ತು ಪುರಸಭೆಗಳ ಉಸ್ತುವಾರಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಇಂದಿರಾ ಕ್ಯಾಂಟೀನ್ಗಳು ನಿರ್ಲಕ್ಷ್ಯಕ್ಕೆ ಒಳಗಾಯಿತು. ಅಧಿಕಾರಿಗಳು ಇಂದಿರಾ ಕ್ಯಾಂಟೀನ್ ಬಗ್ಗೆ ಉದಾಸೀನ ತೋರಿದ ಪರಿಣಾಮ, ಬಡವರಿಗೆ ಕಡಿಮೆ ಬೆಲೆಯಲ್ಲಿ ಊಟ ತಿಂಡಿ ನೀಡುತ್ತಿದ್ದ ಇಂದಿರಾ ಕ್ಯಾಂಟೀನ್ಗಳು ಬೇಕಾಬಿಟ್ಟಿ ಕಾರ್ಯನಿರ್ವಹಿಸುವ ಮೂಲಕ ಇಂದಿರಾ ಕ್ಯಾಂಟೀನ್ನಲ್ಲಿ ದೊರೆಯುವ ಆಹಾರದ ಗುಣಮಟ್ಟ, ನೈರ್ಮಲ್ಯತೆ ಮಾಯವಾಗಿ ಜನತೆ ಕ್ಯಾಂಟೀನ್ನತ್ತ ಬರುವುದನ್ನೇ ಮರೆತು ಬಿಟ್ಟರು.
ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ: ಇಂದಿರಾ ಕ್ಯಾಂಟೀನ್ಲ್ಲಿ ಕುಡಿಯುವ ನೀರಿನ ಸಮಸ್ಯೆ, ಅನೈರ್ಮಲ್ಯತೆ, ಕಡಿಮೆ ಆಹಾರ ನೀಡಿ ಹೆಚ್ಚು ಬಿಲ್ ಪಡೆಯುವುದು ಸೇರಿದಂತೆ ಸಾಕಷ್ಟು ದೂರು ಕೇಳಿಬರಲಾರಂಭಿಸಿದವರು. ನಗರಸಭಾ ಸಿಬ್ಬಂದಿ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆ ಸುಧಾರಿಸಲು ಮುಂದಾಗದ ಪರಿಣಾಮ, ಇಂದಿರಾ ಕ್ಯಾಂಟೀನ್ ಸಿಬ್ಬಂದಿ ಮಾಡಿದ್ದೇ ಅಡುಗೆ ಎನ್ನುವಂತಾಯಿತು. ಇದೀಗ ಮತ್ತೆ ಸಿದ್ದರಾಮಯ್ಯ ನೇತೃತ್ವದ ಸರ್ಕಾರ ಅಧಿಕಾರಕ್ಕೆ ಬಂದಿರುವ ಹಿನ್ನೆಲೆಯಲ್ಲಿ ಇಂದಿರಾ ಕ್ಯಾಂಟೀನ್ ಸಮಸ್ಯೆಗೆ ಪರಿಹಾರ ಸಿಗುವ ನಿರೀಕ್ಷೆ ಮೂಡಿದೆ.
ಲೆಕ್ಕ ನಿರ್ವಹಣೆಗೆ ಸೂಚನೆ: ಇಂದಿರಾ ಕ್ಯಾಂಟೀನ್ ನಲ್ಲಿ ಕಡಿಮೆ ಮಂದಿಗೆ ಆಹಾರ ನೀಡಿ ಹೆಚ್ಚು ಲೆಕ್ಕವನ್ನು ನೀಡಲಾಗುತ್ತಿದೆ ಎಂಬ ಆರೋಪಕ್ಕೆ ವ್ಯಾಪಕವಾಗಿರುವ ಹಿನ್ನೆಲೆಯಲ್ಲಿ, ನಗರಸಭೆಯ ಆರೋಗ್ಯ ನಿರೀಕ್ಷಕರು ಮತ್ತು ಪೌರಾಯುಕ್ತರು ಪ್ರತಿದಿನ ಬಿಲ್ಗಳನ್ನು ಪರಿಶೀಲಿಸಿ ಅನುಮೋದನೆ ನೀಡಬೇಕು ಎಂದು ಜಿಲ್ಲಾಡಳಿತ ಸೂಚನೆ ನೀಡಿದ್ದು, ತಪ್ಪು ಲೆಕ್ಕ ನೀಡಿದರೆ ಅಧಿಕಾರಿಗಳನ್ನೇ ಹೊಣೆ ಮಾಡಿಸಲಾಗುವುದು ಎಂದು ಎಚ್ಚರಿಸಲಾಗಿದೆ.
ಜಿಲ್ಲಾ ಯೋಜನಾ ನಿರ್ದೇಶಕರ ಭೇಟಿ: ಇಂದಿರಾ ಕ್ಯಾಂಟೀನ್ಗಳಿಗೆ ಕಾಯಕಲ್ಪ ನೀಡಲು ನಗರಾಭಿವೃದ್ಧಿ ಇಲಾಖೆ ಮುಂದಾಗಿರುವ ಹಿನ್ನೆಲೆಯಲ್ಲಿ, ಇಲಾಖೆಯ ಜಿಲ್ಲಾ ಯೋಜನಾ ನಿರ್ದೇಶಕ ರಮೇಶ್, ಇಂದಿರಾ ಕ್ಯಾಂಟೀನ್ಗಳಿಗೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಸ್ವತ್ಛತೆ ಹಾಗೂ ನೈರ್ಮಲ್ಯ ನಿರ್ವಹಣೆ ಪರಿಶೀಲನೆ ನಡೆಸಿರುವ ಅವರು, ಇಂದಿರಾ ಕ್ಯಾಂಟೀನ್ಗಳ ಸಮರ್ಪಕವಾಗಿ ಕಾರ್ಯನಿರ್ವ ಹಿಸುವಂತೆ ಸೂಚನೆ ನೀಡಿದ್ದಾರೆ. ಇನ್ನು ಜಿಲ್ಲೆಯ ಮೂರು ನಗರಸಭೆ ಹಾಗೂ ಒಂದು ಪುರಸಭೆ ಅಧಿಕಾರಿಗಳಿಗೆ ಇಂದಿರಾ ಕ್ಯಾಂಟೀನ್ ನಿರ್ವಹಣೆಗೆ ಸಂಬಂಧಿಸಿದಂತೆ ಯೋಜನಾ ನಿರ್ದೇಶಕರು ನೋಟೀಸ್ ಜಾರಿ ಮಾಡಿದ್ದಾರೆ.
ಇಂದಿರಾ ಕ್ಯಾಂಟೀನ್ನಲ್ಲಿ ಪ್ರತಿದಿನ 600 ಮಂದಿಗೆ ಊಟ: ಪ್ರತಿ ಇಂದಿರಾ ಕ್ಯಾಂಟೀನ್ನಲ್ಲಿ ಮಧ್ಯಾಹ್ನ 600 ಮಂದಿಯವರೆಗೆ ಊಟದ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳಲಾಗಿದೆ. ಇನ್ನು ಬೆಳಗ್ಗೆ 400 ಮಂದಿಗೆ ತಿಂಡಿ, ರಾತ್ರಿ 200 ಮಂದಿಗೆ ಊಟದ ವ್ಯವಸ್ಥೆ ಕಲ್ಪಿಸಲು ಸಿದ್ಧತೆ ಮಾಡಿಕೊಳ್ಳುವಂತೆ ಇಂದಿರಾ ಕ್ಯಾಂಟೀನ್ ಗುತ್ತಿಗೆ ಪಡೆದಿರುವವರಿಗೆ ಅಧಿಕಾರಿಗಳು ಸೂಚಿಸಿರುವುದಾಗಿ ಮಾಹಿತಿ ಲಭ್ಯವಾಗಿದೆ. ಇನ್ನು ಬೆಳಿಗ್ಗೆ 7.30 ರಿಂದ 10.30ರ ವರೆಗೆ ಮೆನುವಿನಲ್ಲಿರುವಂತೆ ತಿಂಡಿ, ಮಧ್ಯಾಹ್ನ 12 ಗಂಟೆಯಿಂದ 3 ಗಂಟೆಯವರೆಗೆ ಊಟ, ರಾತ್ರಿ 7.30 ರಿಂದ 10 ಗಂಟೆಯ ವರೆಗೆ ರಾತ್ರಿ ಊಟವನ್ನು ನೀಡುವಂತೆ ಎಲ್ಲಾ ಇಂದಿರಾ ಕ್ಯಾಂಟೀನ್ಗಳಿಗೆ ನಿರ್ದೇಶನ ನೀಡಲಾಗಿದೆ. ಕಳೆದ ಎರಡು ಮೂರು ವರ್ಷಗಳಿಂದ ಇಂದಿರಾ ಕ್ಯಾಂಟೀನ್ನಲ್ಲಿ ನೂರು ಮಂದಿಗೆ ಊಟ ಸಿಕ್ಕರೆ ಹೆಚ್ಚು ಎಂಬಂತಹ ಪರಿಸ್ಥಿತಿ ನಿರ್ಮಾಣಗೊಂಡಿತ್ತು. ಇದೀಗ ಇಂದಿರಾ ಕ್ಯಾಂಟೀನ್ ಸಮಸ್ಯೆ ಸುಧಾರಿಸಲು ಅಧಿಕಾರಿಗಳು ಕ್ರಮ ಕೈಗೊಂಡಿದ್ದಾರೆ. ಇಂದಿರಾ ಕ್ಯಾಂಟೀನ್ ಮತ್ತೆ ಗತವೈಭವನ್ನು ಪಡೆದುಕೊಂಡೀತೆ ಎಂದು ಕಾಯ್ದು ನೋಡಬೇಕಿದೆ.
ಜಿಲ್ಲೆಯಲ್ಲಿ ಕಳ್ಳಾಟಕ್ಕೆ ಬ್ರೇಕ್: ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳ ಕಳ್ಳಾಟಕ್ಕೆ ಬ್ರೇಕ್ ಹಾಕಲು ಮುಂದಾಗಿರುವ ನಗರಾಭಿವೃದ್ಧಿ ಇಲಾಖೆ, ನಗರಸಭೆ ಹಾಗೂ ಪುರಸಭೆ ಅಧಿಕಾರಿಗಳಿಗೆ ತಾಕೀತು ಮಾಡಿರುವ ನಗರಾಭಿವೃದ್ಧಿ ಕೋಶದ ಯೋಜನಾ ನಿರ್ದೇಶಕರು, ಇಂದಿರಾ ಕ್ಯಾಂಟೀನ್ಗಳ ನೈರ್ಮಲ್ಯತೆ ಬಗ್ಗೆ ಗಮನ ವಹಿಸುವ ಜೊತೆಗೆ ಶುದ್ಧ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಬೇಕು. ಇಲ್ಲವಾದಲ್ಲಿ ಸಂಬಂಧಿಸಿದ ನಗರಸಭೆ, ಪುರಸಭೆ ಮುಖ್ಯಸ್ಥರನ್ನೇ ಹೊಣೆಗಾರರನ್ನಾಗಿ ಮಾಡಲಾಗುವುದು ಎಂದು ಎಚ್ಚರಿಸಲಾಗಿದೆ. ಇದರಿಂದಾಗಿ ಇಂದಿರಾ ಕ್ಯಾಂಟೀನ್ಗಳ ಕಳ್ಳಾಟಕ್ಕೆ ಕಡಿವಾಣ ಬೀಳಲಿದೆ ಎಂದು ಹೇಳಲಾಗಿದೆ.
ಜಿಲ್ಲೆಯಲ್ಲಿ ಇಂದಿರಾ ಕ್ಯಾಂಟೀನ್ಗಳು ನಿರಂತರವಾಗಿ ನಡೆಯುತ್ತಿವೆ. ಸ್ವಚ್ಛತೆ ಹಾಗೂ ನೈರ್ಮಲ್ಯದ ಬಗ್ಗೆ ದೂರುಗಳು ಬಂದ ಹಿನ್ನೆಲೆಯಲ್ಲಿ ಪರಿಶೀಲನೆ ನಡೆಸಲಾಗಿದೆ. ಇಂದಿರಾ ಕ್ಯಾಂಟೀನ್ ನಿರ್ವಹಣೆ ಬಗ್ಗೆ ಗಮನವಹಿಸುವಂತೆ ಜಿಲ್ಲೆಯ ಎಲ್ಲಾ ಪೌರಾಯುಕ್ತರು ಮತ್ತು ಮುಖ್ಯಾಧಿಕಾರಿಗೆ ನೋಟಿಸ್ ಜಾರಿ ಮಾಡಲಾಗಿದ್ದು, ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡುವಂತೆ ಕ್ರಮ ಕೈಗೊಳ್ಳಲಾಗುವುದು. – ರಮೇಶ್, ಯೋಜನಾ ನಿರ್ದೇಶಕರು, ಜಿಲ್ಲಾ ನಗರಾಭಿವೃದ್ಧಿ ಕೋಶ
ಬಡ ಕೂಲಿ ಕಾರ್ಮಿಕರಿಗೆ ಮಧ್ಯಾಹ್ನದ ಸಮಯದಲ್ಲಿ ಕಡಿಮೆ ಬೆಲೆಯಲ್ಲಿ ಊಟ ಸಿಗುವಂತಾಗಬೇಕು ಎಂಬ ಉದ್ದೇಶದಿಂದ ಸಿದ್ದರಾಮಯ್ಯ ಅವರು ಪ್ರಾರಂಭಿಸಿದ ಇಂದಿರಾ ಕ್ಯಾಂಟೀನಿಂದ ಮಧ್ಯಾಹ್ನದ ಸಮಯದಲ್ಲಿ ಸಾಕಷ್ಟು ಜನತೆಗೆ ಅನುಕೂಲವಾಗುತಿತ್ತು. ಇತ್ತೀಚಿನ ದಿನಗಳಲ್ಲಿ ಇಂದಿರಾ ಕ್ಯಾಂಟೀನ್ ಅವ್ಯವಸ್ಥೆಯ ಆಗರವಾಗಿದ್ದು, ನಗರಸಭೆ ಅಧಿಕಾರಿಗಳು ಇತ್ತ ಗಮನಹರಿಸಿ ಇಂದಿರಾ ಕ್ಯಾಂಟೀನ್ ಸಮರ್ಪಕವಾಗಿ ನಿರ್ವಹಣೆ ಮಾಡಬೇಕು. – ವಾಸೀಲ್ ಆಲಿಖಾನ್, ನಗರಸಭಾ ಸದಸ್ಯ, ಚನ್ನಪಟ್ಟಣ
– ಸು.ನಾ.ನಂದಕುಮಾರ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tourist spot: ಪ್ರವಾಸಿಗರ ಡೆತ್ಸ್ಪಾಟ್ ಆಗಿರುವ ಸಂಗಮ
Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು
ಹಣ ಹಂಚಿ ಚುನಾವಣೆ ನಡೆಸಲು ಅವಕಾಶ ಮಾಡಿಕೊಡಿ… ಚುನಾವಣಾ ಆಯೋಗದ ವಿರುದ್ಧ HDK ಕಿಡಿ
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು
ನಾನು ಸಿಎಂ ಆಗಬೇಕು ಎಂಬ ನಿಮ್ಮಾಸೆ ಈಡೇರಲಿದೆ: ಡಿಕೆಶಿ