Kerala: ಪೊಲೀಸರ ದೌರ್ಜನ್ಯ ಖಂಡಿಸಿ ಡಿಜಿಪಿ ಕಚೇರಿಗೆ ಮುತ್ತಿಗೆ
ಹಿಂಸಾಚಾರಕ್ಕೆ ತಿರುಗಿದ ಪ್ರತಿಭಟನೆ ಕೈ ಕಾರ್ಯಕರ್ತರ ಮೇಲೆ ಜಲಫಿರಂಗಿ
Team Udayavani, Dec 24, 2023, 1:08 AM IST
ತಿರುವನಂತಪುರ: ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಕೇರಳ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿ, ಕಾಂಗ್ರೆ ಸ್ ನಡೆಸುತ್ತಿದ್ದ ಪ್ರತಿಭಟನೆ ಶನಿವಾರ ಹಿಂಸಾಚಾರಕ್ಕೆ ತಿರುಗಿದ್ದು, ಪ್ರತಿಭಟ ನಾಕಾರರನ್ನು ಚದುರಿಸಲು ಪೊಲೀಸರು ಜಲಫಿರಂಗಿ ಪ್ರಯೋಗಿಸಿದ್ದಾರೆ. ಕೇರಳ ಸರಕಾರ ನಡೆಸುತ್ತಿರುವ “ನವ ಕೇರಳ ಸದಸ್” ಅಭಿಯಾನ ವಿರೋಧಿಸುತ್ತಿರುವ ಕಾಂಗ್ರೆಸ್ ಕಾರ್ಯಕರ್ತರ ಮೇಲೆ ಪೊಲೀಸರು ದೌರ್ಜನ್ಯ ಎಸಗುತ್ತಿದ್ದಾರೆಂದು ಆರೋಪಿಸಿ ಪಕ್ಷದ ನಾಯಕರು ಮತ್ತು ಕಾರ್ಯಕರ್ತರು ಡಿಜಿಪಿ ಕಚೇರಿಯತ್ತ ಮೆರವಣಿಗೆ ಹೊರಟಿದ್ದರು. ಈ ವೇಳೆ ಕಾರ್ಯಕರ್ತರು ಕಲ್ಲುತೂರಾಟ ನಡೆಸಿದ್ದಾರೆಂದು, ಅವರನ್ನು ಚದುರಿಸಲು ಪೊಲೀಸರು ಅಶ್ರುವಾಯು ಹಾಗೂ ಜಲಫಿರಂಗಿಯನ್ನು ಪ್ರಯೋಗಿಸಿದ್ದಾರೆ.
ಘಟನೆಯಲ್ಲಿ ಕೆಪಿಸಿಸಿ ಅಧ್ಯಕ್ಷ ಕೆ.ಸುಧಾಕರನ್ ಹಾಗೂ ಹಿರಿಯ ನಾಯಕ ರಮೇಶ್ ಚೆನ್ನಿತ್ತಲ ಅವರಿಗೂ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿ ಸಲಾಗಿದೆ. ಕಾಂಗ್ರೆಸ್ ಸಂಸದ ಶಶಿ ತರೂರ್ ಕೂಡ ಪ್ರತಿಭಟನೆಯಲ್ಲಿದ್ದರು ಎಂದು ಪಕ್ಷ ಹೇಳಿದ್ದು, ಪೊಲೀಸರ ವರ್ತನೆಯನ್ನು ತೀವ್ರವಾಗಿ ಖಂಡಿಸಿದೆ. ಈ ನಡುವೆ ಬಿಜೆಪಿ ಕಾರ್ಯಕರ್ತರೂ ಕೂಡ ಕೇರಳ ಸರಕಾರದ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ.