ಕೆರೆಗಳ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ ನೀಡಿ: ಶಾಸಕ ಸೊರಕೆ
Team Udayavani, Jul 4, 2017, 3:45 AM IST
ಉಡುಪಿ: ಉಡುಪಿ ತಾಲೂಕಿನಲ್ಲಿ ಕೆರೆಗಳ ನಿರ್ಮಾಣ ಮತ್ತು ಅಭಿವೃದ್ಧಿಗೆ ಅಧಿಕಾರಿಗಳು ಹೆಚ್ಚಿನ ಆದ್ಯತೆ ನೀಡಬೇಕು. ತಾಲೂಕಿನಲ್ಲಿ ಈಗಾಗಲೇ ಸುಮಾರು 20 ಕೆರೆಗಳ ಅಭಿವೃದ್ಧಿಗೆ ಕಾರ್ಯ ನಡೆಯುತ್ತಿದ್ದು, ಪೂರ್ಣಗೊಂಡಿರುವ ಕಡೆಗಳಲ್ಲಿ ನೀರಿನ ಮಟ್ಟ ಜಾಸ್ತಿಯಾಗಿದೆ. ಅಗತ್ಯವಿರುವ ಕಡೆ ಕೆರೆ ಅಭಿವೃದ್ದಿ ಕಾಮಗಾರಿ ಕೈಗೊಳ್ಳಲು ಸಣ್ಣ ನೀರಾವರಿ ಮತ್ತು ಸಂಬಂಧಪಟ್ಟ ಇಲಾಖೆಗಳು ಪ್ರಸ್ತಾವನೆ ಸಲ್ಲಿಸುವಂತೆ ಕಾಪು ಶಾಸಕ ವಿನಯ ಕುಮಾರ್ ಸೊರಕೆ ತಿಳಿಸಿದರು.
ಉಡುಪಿ ತಾ.ಪಂ. ಸಭಾಂಗಣದಲ್ಲಿ ಸೋಮವಾರ ನಡೆದ ಉಡುಪಿ ತಾಲೂಕು ತ್ರೆ„ಮಾಸಿಕ ಕೆಡಿಪಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.
ತಾಲೂಕಿನಲ್ಲಿ ಕೃಷಿ ಚಟುವಟಿಕೆ ಅಭಿವೃದ್ಧಿಗೆ ಉತ್ತಮ ಕಾರ್ಯಗಳನ್ನು ಕೈಗೊಂಡಿದ್ದು, ಕಾಪು ಕ್ಷೇತ್ರದಲ್ಲಿ ಹಡಿಲು ಬಿಟ್ಟಿದ್ದ ಸುಮಾರು 250 ಎಕರೆ ಜಾಗದಲ್ಲಿ ಮತ್ತೆ ಕೃಷಿ ಚಟುವಟಿಕೆ ಕೈಗೊಳ್ಳಲಾಗಿದೆ. ಸಾಲ ಮನ್ನಾ ಯೋಜನೆ ಯಡಿ ಪ್ರಯೋಜನ ಪಡೆಯುವ ಫಲಾನುಭವಿ ರೈತರ ಮಾಹಿತಿ ಒದಗಿಸುವಂತೆ ಸಹಕಾರ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದರು.
ಗುಂಡಿ ಬಿದ್ದಿರುವ ರಸ್ತೆಗಳ ಶೀಘ್ರ ದುರಸ್ತಿ ಕಾರ್ಯ ಕೈಗೊಳ್ಳಿ. ರಸ್ತೆ ಬದಿಯಲ್ಲಿ ಗಿಡ ನೆಡಿ. ಕೆಲ ಹಾಸ್ಟೆಲ್ಗಳು ಮಳೆಯಿಂದಾಗಿ ಸೋರುತ್ತಿದ್ದು, ವಿದ್ಯಾರ್ಥಿಗಳಿಗೆ ತೊಂದರೆಯಾಗಿದೆ. ತತ್ಕ್ಷಣ ದುರಸ್ತಿಗೊಳಿಸಿ. ಹಾಸ್ಟೆಲ್ ಪರಿಶೀಲನೆಗೆ ನೇಮಕ ಮಾಡಿದ್ದ ನೋಡಲ್ ಅಧಿಕಾರಿಗಳ ವಿವರ ಹಾಗೂ ಪರಿಶೀಲಿಸಿದ ವರದಿ ಕೊಡಿ. ಮಲೇರಿಯಾ ಹಾಗೂ ಡೆಂಗ್ಯೂ ನಿಯಂತ್ರಣಕ್ಕೆ ಅಗತ್ಯ ಕ್ರಮಗಳನ್ನು ಕೈಗೊಳ್ಳಿ. ಜನಸಂಖ್ಯೆಗನು ಗುಣವಾಗಿ ಮೇಲ್ದರ್ಜೆಗೆ ಏರಿಸಬೇಕಾದ ಆರೋಗ್ಯ ಕೇಂದ್ರಗಳ ಮಾಹಿತಿ ಯನ್ನು ಪ್ರಸ್ತಾವನೆಯೊಂದಿಗೆ ಸಲ್ಲಿಸುವಂತೆ ಆರೋಗ್ಯ ಇಲಾಖೆ ಅಧಿಕಾರಿಗಳಿಗೆ ಹೇಳಿದರು.
ಕೃಷಿ ಅಭಿಯಾನ ಕಾರ್ಯ ಕ್ರಮ ನಡೆಯುತ್ತಿದ್ದು, ಯಾಂತ್ರೀಕೃತ ನಾಟಿಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ. ಬೆಳೆ ವಿಮೆ ಯೋಜನೆಗೆ ಜು. 31 ಕೊನೆ ದಿನವಾಗಿದೆ. ಜಿಲ್ಲೆಗೆ ಈ ವರ್ಷದಿಂದ ಕೃಷಿ ಭಾಗ್ಯ ಯೋಜನೆ ಮಂಜೂರಾಗಿದ್ದು, ಕೃಷಿ ಹೊಂಡ ರಚನೆಗೆ ಸಹಾಯ ಧನವಿದ್ದು, ರೈತರು ಪ್ರಯೋಜನ ಪಡೆಯಬೇಕು. ಮಣ್ಣು ಆರೋಗ್ಯ ಕಾರ್ಡ್ ವಿತರಣೆಗೆ ಕ್ರಮ ಕೈಗೊಳ್ಳಲಾಗಿದೆ ಎಂದು ಕೃಷಿ ಇಲಾಖೆಯ ಅಧಿಕಾರಿಗಳು ತಿಳಿಸಿದರು.
ಸಭೆಯಲ್ಲಿ ಉಡುಪಿ ತಾ.ಪಂ. ಅಧ್ಯಕ್ಷೆ ನಳಿನಿ ಪ್ರದೀಪ್ ರಾವ್, ಉಪಾಧ್ಯಕ್ಷ ರಾಜೇಂದ್ರ ಪಂದುಬೆಟ್ಟು, ತಾ.ಪಂ. ಸಾಮಾಜಿಕ ನ್ಯಾಯ ಸಮಿತಿ ಅಧ್ಯಕ್ಷೆ ನೀತಾ ಗುರುರಾಜ, ತಹಶೀಲ್ದಾರ್ ಮಹೇಶ್ಚಂದ್ರ, ಬ್ರಹ್ಮಾವರ ವಿಶೇಷ ತಹಶೀಲ್ದಾರ್ ಪ್ರದೀಪ್ ಕುಡೇìಕರ್, ತಾ.ಪಂ. ಕಾರ್ಯ ನಿರ್ವಹಣಾಧಿಕಾರಿ ಶೇಷಪ್ಪ ಉಪಸ್ಥಿತರಿದ್ದರು.
ಕಾಪುವಿನಲ್ಲಿ ಸುಸಜ್ಜಿತ ಪ್ರವಾಸಿ ಮಂದಿರ
ಕಾಪುನಲ್ಲಿ 5 ಕೋ. ರೂ. ವೆಚ್ಚದಲ್ಲಿ ಸುಸಜ್ಜಿತ ಪ್ರವಾಸಿ ಮಂದಿರ ನಿರ್ಮಾಣ ಮಾಡುವ ಕುರಿತಂತೆ ಪ್ರಸ್ತಾವನೆ ಸಿದ್ದಪಡಿಸುವಂತೆ ಲೋಕೋಪಯೋಗಿ ಇಲಾಖೆಯ ಅಧಿಕಾರಿಗಳಿಗೆ ಸೂಚಿಸಿದ ಶಾಸಕರು, ಕಾಪು ಕ್ಷೇತ್ರದಲ್ಲಿ ಘನತ್ಯಾಜ್ಯ ವಿಲೇವಾರಿಗೆ 10 ಎಕರೆ ಜಾಗ ಗುರುತಿಸಲಾಗಿದ್ದು, ಕಾಪು ಆಸುಪಾಸಿನ ಗ್ರಾ. ಪಂ.ಗಳು ಸಹ ತ್ಯಾಜ್ಯವನ್ನು ನೀಡುವಂತೆ ಸೊರಕೆ ತಿಳಿಸಿದರು.
ಟಾಪ್ ನ್ಯೂಸ್
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.