ಜನ ಜೀವನ ಪರಿವರ್ತನೆಗೆ ಯಾತ್ರೆ : ಕಾಪುವಿನಲ್ಲಿ ಬಿಎಸ್ವೈ
Team Udayavani, Nov 13, 2017, 12:12 PM IST
ಕಾಪು: ಬಿಜೆಪಿಯನ್ನು ಅಧಿಕಾರಕ್ಕೇರಿಸುವುದರೊಂದಿಗೆ ಸರ್ವರಿಗೂ ಸಮಪಾಲು – ಸರ್ವರಿಗೂ ಸಮ ಬಾಳು ಎಂಬ ಕಲ್ಪನೆಯೊಂದಿಗೆ ರಾಜ್ಯದಜನರ ಜೀವನದಲ್ಲಿ ಪರಿವರ್ತನೆ ತರುವ ಯಾತ್ರೆ ಇದು ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ ಹೇಳಿದರು.
ಪರಿವರ್ತನಾ ಯಾತ್ರೆ ಅಂಗವಾಗಿ ಕಾಪು ಪೇಟೆಯಲ್ಲಿ ರವಿವಾರ ಜರಗಿದ ಬೃಹತ್ ಸಾರ್ವಜನಿಕ ಸಭೆಯನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಮುಂದಿನ ಚುನಾವಣೆಗೆ ದಿಕ್ಸೂಚಿ ಯಾಗಲಿರುವ ಈ ಸಮಾವೇಶದಲ್ಲಿ ಕಾಪು ಇತಿಹಾಸದಲ್ಲೇ ಮೊದಲ ಬಾರಿಗೆ
ಇಷ್ಟೊಂದು ಪ್ರಮಾಣದ ಜನಬೆಂಬಲ ಸಿಕ್ಕಿದೆ. ಕರಾವಳಿಯ ಪಾಲಿಗೆ ಸಿಂಹ ಸ್ವಪ್ನವಾಗಿರುವ ಸಿದ್ದರಾಮಯ್ಯ ಸರಕಾರವನ್ನು ಅರಬ್ಬೀ ಸಮುದ್ರದಲ್ಲಿ ಮುಳುಗಿಸಿ, ಕಮಲ ಅರಳಿಸುವ ಸಂಕಲ್ಪವನ್ನು ಪ್ರತಿಯೊಬ್ಬರೂ ಇಂದಿನಿಂದಲೇ ಸ್ವೀಕರಿಸಬೇಕು ಎಂದವರು ಕಾರ್ಯಕರ್ತರಿಗೆ ಕರೆ ನೀಡಿದರು.
ಕಾಂಗ್ರೆಸ್ ನೇತೃತ್ವದ ಸರಕಾರದಲ್ಲಿ ಎಲ್ಲ ಇಲಾಖೆಗಳೂ ಭ್ರಷ್ಟಾಚಾರದಲ್ಲಿ ಮುಳುಗಿವೆ. ಮತ್ತೂಂದೆಡೆ ಅತ್ಯಾಚಾರಿ ವೇಣುಗೋಪಾಲ್ ನೇತೃತ್ವದಲ್ಲಿ ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರಕಾರವನ್ನು ಹೀಗೇಬಿಟ್ಟರೆ ರಾಜ್ಯವನ್ನೇ ಮುಳುಗಿಸಿ ಯಾರು. ಭ್ರಷ್ಟಾಚಾರಿ ಮತ್ತು ಅತ್ಯಾಚಾರಿ ಕೊಳ್ಳೆ ಹೊಡೆವ ಮೊದಲೇ ಎಚ್ಚರವಾಗಬೇಕಿದೆ ಎಂದರು.
ಕೇಂದ್ರ ಸಚಿವ ಡಿ.ವಿ. ಸದಾನಂದಗೌಡ, ಸಂಸದರಾದ ಶೋಭಾ ಕರಂದ್ಲಾಜೆ, ನಳಿನ್ಕುಮಾರ್ ಕಟೀಲು, ಶ್ರೀರಾಮುಲು, ಮಾಜಿ ಸಂಸದೆ ತೇಜಸ್ವಿನಿ ರಮೇಶ್, ಬಿಜೆಪಿ ಜಿಲ್ಲಾಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ವಿಧಾನ ಪರಿಷತ್ ಸದಸ್ಯ ಕೋಟ ಶ್ರೀನಿವಾಸ ಪೂಜಾರಿ, ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಲಾಲಾಜಿ ಆರ್. ಮೆಂಡನ್ ಮೊದಲಾದವರು ಮಾತನಾಡಿದರು.
ಮಹಿಳಾ ಮೋರ್ಚಾ ರಾಜ್ಯಾಧ್ಯಕ್ಷೆಭಾರತಿ ಶೆಟ್ಟಿ, ರಾಜ್ಯ ಕಾರ್ಯದರ್ಶಿಗಳಾದ ರವಿ ಕುಮಾರ್, ತಿಂಗಳೆ ವಿಕ್ರಮಾರ್ಜುನ ಹೆಗ್ಡೆ, ಮಂಗಳೂರು ವಿಭಾಗ ಪ್ರಭಾರಿ ಕೆ. ಉದಯ್ ಕುಮಾರ್ ಶೆಟ್ಟಿ, ಜಿ.ಪಂ. ಅಧ್ಯಕ್ಷ ದಿನಕರ ಬಾಬು, ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸದಸ್ಯರಾದ ಶಶಿಕಾಂತ್ ಪಡುಬಿದ್ರಿ, ಗೀತಾಂಜಲಿ ಸುವರ್ಣ, ಶಿಲ್ಪಾ ಜಿ. ಸುವರ್ಣ, ಮುಖಂಡರಾದ ಶ್ಯಾಮಲಾ ಕುಂದರ್, ಯಶ್ಪಾಲ್ ಸುವರ್ಣ, ಸುರೇಶ್ ನಾಯಕ್, ಕುತ್ಯಾರು ನವೀನ್ ಶೆಟ್ಟಿ, ಸಂಧ್ಯಾ ರಮೇಶ್, ರಮಾಕಾಂತ ದೇವಾಡಿಗ, ಅರುಣ್ ಶೆಟ್ಟಿ ಪಾದೂರು, ಕಟಪಾಡಿ ಶಂಕರ ಪೂಜಾರಿ ಇದ್ದರು.
ಬಿಜೆಪಿ ಕ್ಷೇತ್ರಾಧ್ಯಕ್ಷ ಪ್ರಕಾಶ್ ಶೆಟ್ಟಿ ಪಾದೆಬೆಟ್ಟು ಸ್ವಾಗತಿಸಿದರು. ಜಿಲ್ಲಾ ಉಪಾಧ್ಯಕ್ಷ ಸುರೇಶ್ ಶೆಟ್ಟಿ ಗುರ್ಮೆ ಪ್ರಸ್ತಾವಿಸಿದರು. ಕಾರ್ಯದರ್ಶಿ ಮುರಲೀಧರ ಪೈ ವಂದಿಸಿ ಕುತ್ಯಾರು ಪ್ರಸಾದ್ ಶೆಟ್ಟಿ, ಮತ್ತು ಶ್ಯಾಮಲಾ ಕುಂದರ್ ನಿರೂಪಿಸಿದರು.