ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಇಂದು ಸಿಎಂ ಚಾಲನೆ
Team Udayavani, Dec 28, 2017, 5:45 PM IST
ತುಮಕೂರು: ನುಡಿದಂತೆ ನಡೆದಿದ್ದೇವೆ ಸಾಧನಾ ಸಂಭ್ರಮದ ಅಂಗವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಡಿ. 28ರಂದು ತುಮಕೂರು ಜಿಲ್ಲೆಯ ಶಿರಾ ನಗರಕ್ಕೆ ಭೇಟಿ ನೀಡುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಸ್ವಾಗತಕ್ಕಾಗಿ ಭರದ
ಸಿದ್ಧತೆ ನಡೆದಿದೆ.
ವಿವಿಧ ಕಾಮಗಾರಿಗೆ ಚಾಲನೆ: ರಾಜ್ಯಾದ್ಯಂತ ನವ ಕರ್ನಾಟಕಕ್ಕಾಗಿ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರು
ನಡೆಸುತ್ತಿರುವ ಪ್ರವಾಸದ ಹಿನ್ನೆಲೆಯಲ್ಲಿ ಕಲ್ಪತರು ನಾಡು ತುಮಕೂರು ಜಿಲ್ಲೆಯ ಶಿರಾ ನಗರಕ್ಕೆ ಮುಖ್ಯಮಂತಿಗಳು
ಆಗಮಿಸಿ 1150 ಕೋಟಿ ರೂ. ವೆಚ್ಚದ ವಿವಿಧ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ನೆರವೇರಿಸಲಿದ್ದಾರೆ
ಮುಖ್ಯಮಂತ್ರಿಗಳ ಆಗಮನಕ್ಕಾಗಿ ಶಿರಾ ನಗರ ಮದುವಣಗಿತ್ತಿಯಂತೆ ಸಿಂಗಾರಗೊಂಡಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ. ಜಯಚಂದ್ರ ಅವರ ಕ್ಷೇತ್ರ ಶಿರಾ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯಲ್ಲಿ 236.50 ಕೋಟಿ ರೂ. ಮೊತ್ತದ ಕಾಮಗಾರಿಗಳ ಉದ್ಘಾಟನೆ ಹಾಗೂ 808.47 ಕೋಟಿ ಮೊತ್ತದ ಕಾಮಗಾರಿಗಳಿಗೆ ಶಂಕುಸ್ಥಾಪನೆ ನೇರವೇರಿಸುವುದರ ಜೊತೆಗೆ ಇಂದಿರಾ ಕ್ಯಾಂಟಿನ್ ಉದ್ಘಾಟನೆ ಹಾಗೂ ವಿವಿಧ ಇಲಾಖೆಗಳ ಸವಲತ್ತುಗಳ ವಿತರಣೆ, ನಿವೇಶನ ಹಕ್ಕುಪತ್ರಗಳನ್ನು ವಿತರಿಸಲಿದ್ದಾರೆ.
ವಿವಿ ಗೆಸ್ಟ್ಹೌಸ್ನಲ್ಲಿ ವಾಸ್ತವ್ಯ: ರಾಜ್ಯ ವ್ಯಾಪ್ತಿ ಪ್ರವಾಸ ಕೈಗೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು
ಚಿತ್ರದುರ್ಗ ಜಿಲ್ಲೆ ಹಿರಿಯೂರು ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಕ್ರಮಗಳ ಉದ್ಘಾಟನೆ ಮತ್ತು ಶಂಕುಸ್ಥಾಪನೆ ಹಾಗೂ ಸಾರ್ವಜನಿಕ ಸಮಾರಂಭದಲ್ಲಿ ಪಾಲ್ಗೊಂಡ ನಂತರ ತುಮಕೂರಿಗೆ ಬುಧವಾರ ಸಂಜೆ ಆಗಮಿಸಿ ತುಮಕೂರು ವಿಶ್ವ ವಿದ್ಯಾನಿಲಯದ ಅಥಿತಿ ಗೃಹದಲ್ಲಿ ವಾಸ್ತವ್ಯ ಹೂಡಿದರು.
ಕೆಪಿಸಿಸಿ ಅಧ್ಯಕ್ಷ ಡಾ.ಜಿ.ಪರಮೇಶ್ವರ್, ಮಧುಗಿರಿ ಶಾಸಕ ರಾಜಣ್ಣ, ತುಮಕೂರು ನಗರ ಶಾಸಕ ರಫೀಕ್ ಅಹಮದ್
ಸಿಎಂ ಜೊತೆ ಸಮಾಲೋಚನೆ ನಡೆಸಿದರು. ಈ ಸಂದರ್ಭದಲ್ಲಿ ಪತ್ರಕರ್ತರಿಗೆ ಪ್ರವೇಶ ನಿಷೇಧಿಸಲಾಗಿತ್ತು.
ಬೆಳಗ್ಗೆ 10ಕ್ಕೆ ಶಿರಾ ಕಾರ್ಯಕ್ರಮ: ಗುರುವಾರ ಬೆಳಗ್ಗೆ 10 ಗಂಟೆಗೆ ತುಮಕೂರು ವಿವಿ ಆವರಣದಿಂದ ಹೆಲಿಕಾಪ್ಟರ್
ಮೂಲಕ ಶಿರಾಗೆ ಭೇಟಿ ನೀಡಲಿದ್ದಾರೆ. ಬೆಳಿಗ್ಗೆ 10:25ಕ್ಕೆ ಶಿರಾ ವಿಧಾನ ಸಭಾ ಕ್ಷೇತ್ರದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಉದ್ಘಾಟನೆ ಮತ್ತು ಶಂಕುಸ್ಥಾಪನಾ ಸಮಾರಂಭದಲ್ಲಿ ಭಾಗವಹಿಸಿ ಮಧ್ಯಾಹ್ನ 12.30ಕ್ಕೆ ಶಿರಾದಿಂದ ಹೆಲಿಕಾಪ್ಟರ್ ಮೂಲಕ ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣಕ್ಕೆ ನಿರ್ಗಮಿಸಲಿದ್ದಾರೆ.
ಅಧ್ಯಕ್ಷತೆಯನ್ನು ಕಾನೂನು ಮತ್ತು ಸಂಸದೀಯ ವ್ಯವಹಾರಗಳು ಹಾಗೂ ಸಣ್ಣ ನೀರಾವರಿ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಟಿ.ಬಿ.ಜಯಚಂದ್ರ ವಹಿಸಿಕೊಳ್ಳಲಿದ್ದಾರೆ. ಸಚಿವರುಗಳಾದ ಕಾಗೋಡು ತಿಮ್ಮಪ್ಪ, ಆರ್.ವಿ.ದೇಶಪಾಂಡೆ, ಡಿ.ಕೆ.ಶಿವಕುಮಾರ್, ಬಸವರಾಜರಾಯರೆಡ್ಡಿ, ಹೆಚ್. ಕೆ.ಪಾಟೀಲ್, ರೋಷನ್ಬೇಗ್, ರಾಮಲಿಂಗಾರೆಡ್ಡಿ, ಎಸ್. ಎಸ್.ಮಲ್ಲಿಕಾರ್ಜುನ, ಎ.ಮಂಜು, ಎಚ್.ಆಂಜನೇಯ, ಎಂ.ಕೃಷ್ಣಪ್ಪ, ಹೆಚ್.ಸಿ.ಮಹದೇವಪ್ಪ, ತನ್ವೀರ್ಸೇಠ…, ಹೆಚ್.ಎಂ.ರೇವಣ್ಣ, ಈಶ್ವರ್ ಖಂಡ್ರೆ, ಪ್ರಿಯಾಂಕ ಖರ್ಗೆ,
ಯು.ಟಿ.ಖಾದರ್, ಲೋಕಸಭಾ ಸದಸ್ಯರುಗಳಾದ ಎಸ್.ಪಿ.ಮುದ್ದಹನುಮೇಗೌಡ, ಬಿ.ಎನ್.ಚಂದ್ರಪ್ಪ,
ಜಿ.ಪಂ.ಅಧ್ಯಕ್ಷೆ ಎಂ.ಲತಾ ರವಿಕುಮಾರ್ ಹಾಗೂ ವಿಧಾನ ಸಭಾ ಸದಸ್ಯರು ಹಾಗೂ ವಿಧಾನಪರಿಷತ್ ಸದಸ್ಯರು, ನಿಗಮ ಮಂಡಳಿಗಳ ಅಧ್ಯಕ್ಷರು ಭಾಗವಹಿಸಲಿದ್ದಾರೆ.