ಮಾ. 20: ಕರಾವಳಿಯಲ್ಲಿ ರಾಹುಲ್ ಯಾತ್ರೆ
Team Udayavani, Mar 11, 2018, 6:10 AM IST
ಮಂಗಳೂರು: ಎಐಸಿಸಿ ರಾಷ್ಟ್ರೀಯಾಧ್ಯಕ್ಷ ರಾಹುಲ್ ಗಾಂಧಿ ಅವರು ಮಾ. 20ರಂದು ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಜನಾಶೀರ್ವಾದ ಯಾತ್ರೆ ನಡೆಸಲಿದ್ದಾರೆ.
ಜನಾಶೀರ್ವಾದ ಯಾತ್ರೆ ಕುರಿತಂತೆ ಉಭಯ ಜಿಲ್ಲೆಗಳಲ್ಲಿ ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ವ್ಯಾಪಕ ಸಿದ್ಧತೆ ನಡೆಸಲಾಗುತ್ತಿದೆ. ಪಕ್ಷದ ಮೂಲಗಳ ಪ್ರಕಾರ ರಾಹುಲ್ ಗಾಂಧಿ ಮಾ. 20ರಂದು ಬೈಂದೂರು ಅಥವಾ ಕುಂದಾಪುರದಿಂದ ಯಾತ್ರೆ ಆರಂಭಿಸಲಿದ್ದಾರೆ.
ಯಾತ್ರೆಗಾಗಿ ರೂಪಿಸಲಾಗಿರುವ ವಿಶೇಷ ಬಸ್ನಲ್ಲಿ ಅವರು ಸಾಗಿ ಬರಲಿದ್ದಾರೆ. ಯಾತ್ರೆ ಮೂಲ್ಕಿಯಲ್ಲಿ ದ.ಕ. ಜಿಲ್ಲೆ ಪ್ರವೇಶಿಸಲಿದ್ದು ದ.ಕ. ಜಿಲ್ಲಾ ಕಾಂಗ್ರೆಸ್ ವತಿಯಿಂದ ಭವ್ಯ ಸ್ವಾಗತ ಕೋರಲಾಗುವುದು. ಮೂಲ್ಕಿ ಹಾಗೂ ಸುರತ್ಕಲ್ ಮೂಲಕ ಯಾತ್ರೆ ಮಂಗಳೂರಿಗೆ ಬರಲಿದ್ದು ಸಂಜೆ ನೆಹರೂ ಮೈದಾನದಲ್ಲಿ ಸಾರ್ವಜನಿಕ ಸಭೆ ನಡೆಯಲಿದೆ. ಆ ಬಳಿಕ ರಾತ್ರಿ ಮಂಗಳೂರಿನಲ್ಲಿ ವಾಸ್ತವ್ಯ ಹೂಡುವರು. ಅವರು ಮಂಗಳೂರಿನ ಸಕೀìಟ್ ಹೌಸ್ನಲ್ಲಿ ವಾಸ್ತವ್ಯ ಮಾಡುವ ಸಂಭವವಿದೆ. ಜನಾಶೀರ್ವಾದ ಯಾತ್ರೆ ಸಿದ್ಧತೆ ಕುರಿತು ಮಾ. 13ರಂದು ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ ನೇತೃತ್ವದಲ್ಲಿ ಮಂಗಳೂರಿನ ಕಾಂಗ್ರೆಸ್ ಕಚೇರಿಯಲ್ಲಿ ಸಭೆ ನಡೆಯಲಿದೆ.
ಹೈದರಾಬಾದ್ ಕರ್ನಾಟಕ ಭಾಗದಲ್ಲಿ ಯಾತ್ರೆ ಸಂದರ್ಭದಲ್ಲಿ ರಾಹುಲ್ ಗಾಂಧಿ ನಡೆಸಿರುವ ಭರ್ಜರಿ ರೋಡ್ಶೋ ಭಾರೀ ಯಶಸ್ಸು ಕಂಡಿರುವ ಹಿನ್ನೆಲೆಯಲ್ಲಿ ಕರಾವಳಿ ಭಾಗದ ಯಾತ್ರೆಯಲ್ಲೂ ರೋಡ್ಶೋಗೆ ಹೆಚ್ಚು ಒತ್ತು ನೀಡುವ ಸಾಧ್ಯತೆಗಳಿವೆ.
ದ.ಕ. ಜಿಲ್ಲೆಯಲ್ಲಿ ಮಾ. 20 ರಂದು ರಾಹುಲ್ ಗಾಂಧಿಯವರ ಜನಾಶೀರ್ವಾದ ಯಾತ್ರೆಗೆ ವ್ಯಾಪಕ ಸಿದ್ಧತೆಗಳನ್ನು ಮಾಡಲಾಗುತ್ತಿದೆ. ಯಾತ್ರೆ ಸಂದರ್ಭದಲ್ಲಿ ಹಮ್ಮಿಕೊಳ್ಳುವ ಕಾರ್ಯಕ್ರಮಗಳ ಬಗ್ಗೆ ಮಂಗಳವಾರ ನಡೆಯುವ ಕಾಂಗ್ರೆಸ್ ನಾಯಕರ ಸಭೆಯಲ್ಲಿ ನಿರ್ಧಾರವಾಗಲಿದೆ ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್ ತಿಳಿಸಿದ್ದಾರೆ.
ನೆಹರೂ ಮೈದಾನ: ಪರಿಶೀಲನೆ ಮಂಗಳೂರಿನಲ್ಲಿ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆ ನಡೆಯ ಲಿರುವ ನೆಹರೂ ಮೈದಾನದಲ್ಲಿ ಮಾಡಬೇಕಾದ ವ್ಯವಸ್ಥೆಗಳ ಬಗ್ಗೆ ಶನಿವಾರ ಕಾಂಗ್ರೆಸ್ ನಾಯಕರು ಪರಿಶೀಲನೆ ನಡೆಸಿದರು. ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್, ಸಚಿವರಾದ ಬಿ. ರಮಾನಾಥ ರೈ, ಯು.ಟಿ. ಖಾದರ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ. ವೆಂಕಟೇಶ್, ಶಾಸಕ ಜೆ.ಆರ್. ಲೋಬೋ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಹರೀಶ್ ಕುಮಾರ್, ಮೇಯರ್ ಭಾಸ್ಕರ್ ಕೆ., ಶಶಿಧರ ಹೆಗ್ಡೆ ಮತ್ತಿತರರು ಉಪಸ್ಥಿತರಿದ್ದರು.
ಲಕ್ಷಕ್ಕೂ ಅಧಿಕ ಕಾರ್ಯಕರ್ತರ ನಿರೀಕ್ಷೆ
ಮಂಗಳೂರಿನಲ್ಲಿ ನಡೆಯುವ ರಾಹುಲ್ ಗಾಂಧಿಯವರ ಸಾರ್ವಜನಿಕ ಸಭೆಯಲ್ಲಿ 1ಲಕ್ಷಕ್ಕೂ ಅಧಿಕ ಮಂದಿ ಕಾರ್ಯಕರ್ತರು ಸೇರುವ ನಿರೀಕ್ಷೆ ಇದೆ.
ದ.ಕ ಜಿಲ್ಲಾ ಕಾಂಗ್ರೆಸ್ ಸಭೆ
ರಾಹುಲ್ ಗಾಂಧಿ ದಕ್ಷಿಣ ಕನ್ನಡ ಜಿಲ್ಲಾ ಭೇಟಿ ಕಾರ್ಯಕ್ರಮದ ಬಗ್ಗೆ, ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ. ಹರೀಶ್ ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ಸಕ್ರಿಯ ಕಾರ್ಯಕರ್ತರ ಸಭೆ ಶನಿವಾರ ಜರಗಿತು. ಸಭೆಯಲ್ಲಿ ಎಐಸಿಸಿ ಕಾರ್ಯದರ್ಶಿ ವಿಷ್ಣುನಾಥನ್ , ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಯು.ಬಿ ವೆಂಕಟೇಶ್ , ರಾಹುಲ್ ಗಾಂಧಿಯವರ ಕಚೇರಿ ಉಸ್ತುವಾರಿ ಬಿಜು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಚಂದ್ರಶೇಖರ್, ಜಿ.ಎ. ಬಾವ, ಸಚಿವರಾದ ಬಿ. ರಮಾನಾಥ ರೈ, ಯು.ಟಿ ಖಾದರ್, ಮತ್ತು ಶಾಸಕರುಗಳಾದ ಜೆ.ಆರ್ ಲೋಬೋ, ಅಭಯ ಚಂದ್ರ ಜೈನ್, ಶಕುಂತಳಾ ಶೆಟ್ಟಿ, ಕೆಪಿಸಿಸಿ ಕಾರ್ಯದರ್ಶಿಗಳಾದ ಮಮತಾ ಗಟ್ಟಿ, ದೇವಿ ಪ್ರಸಾದ್ ಶೆಟ್ಟಿ, ನವೀನ್ ಡಿ’ಸೋಜಾ, ಪುರುಷೋತ್ತಮ ಚಿತ್ರಾಪುರ, ಶಶಿಧರ್ ಹೆಗ್ಡೆ, ಇಬ್ರಾಹಿಂ ಕೋಡಿಜಾಲ್, ವಿಧಾನ ಪರಿಷತ್ತಿನ ಮಾಜಿ ಮುಖ್ಯ ಸಚೇತಕ ಕೆ.ಎಸ್ ಎಂ. ಮಸೂದ್ ಮತ್ತು ದ.ಕ ಜಿಲ್ಲಾ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆ ಶಾಲೆಟ್ ಪಿಂಟೋ, ಬ್ಲಾಕ್ ಅಧ್ಯಕ್ಷರು, ಜಿಲ್ಲಾ ಕಾಂಗ್ರೆಸ್ ಪದಾಧಿಕಾರಿಗಳು, ಜಿಲ್ಲಾ ಪಂಚಾಯತ್, ತಾಲೂಕು ಪಂಚಾಯತ್, ಮ.ನ.ಪಾ ಸದಸ್ಯರು ಉಪಸ್ಥಿತರಿದ್ದರು.