ಸಿದ್ದರಾಮಯ್ಯ ಈ ಬಾರಿ ಗೆದ್ದು ತೋರಿಸಲಿ: ಈಶ್ವರಪ್ಪ
Team Udayavani, Apr 20, 2018, 3:38 PM IST
ಶಿವಮೊಗ್ಗ: ಮುಖ್ಯಮಂತ್ರಿ ಸಿದ್ಧರಾಮಯ್ಯ ಮೊದಲು ಚಾಮುಂಡೇಶ್ವರಿ ಕ್ಷೇತ್ರದಿಂದ ಗೆದ್ದುಬರಲಿ. ಆನಂತರ ಮತ್ತೆ ಮುಖ್ಯಮಂತ್ರಿ ಆಗುವ ಕುರಿತು ಯೋಚಿಸುವುದು ಒಳಿತು ಎಂದು ವಿಧಾನ ಪರಿಷತ್ ಪ್ರತಿಪಕ್ಷ ನಾಯಕ ಹಾಗೂ ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ವ್ಯಂಗ್ಯವಾಡಿದರು.
ಗುರುವಾರ ಚುನಾವಣಾ ನಾಮಪತ್ರ ಸಲ್ಲಿಸಿದ ಬಳಿಕ ಎನ್ಡಿವಿ ಹಾಸ್ಟೆಲ್ ಆವರಣದಲ್ಲಿ ಆಯೋಜಿಸಿದ್ದ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಸಿದ್ದರಾಮಯ್ಯರಿಗೆ ಈ ಬಾರಿ ಚಾಮುಂಡೇಶ್ವರಿ ಕ್ಷೇತ್ರ ಆಗಿಬರುವ ಲಕ್ಷಣವಿಲ್ಲ. ಹೀಗಾಗಿ ಬಾದಾಮಿ ಕ್ಷೇತ್ರದತ್ತ ಮುಖ ಮಾಡಿದ್ದರು ಎಂದು ಛೇಡಿಸಿದರು.
ರಾಜ್ಯದಲ್ಲಿ ಪ್ರತಿನಿತ್ಯ ಲಕ್ಷಾಂತರ ಗೋವುಗಳ ಹತ್ಯೆಯಾಗುತ್ತಿದೆ, ಮಹಿಳೆಯರ ಮೇಲಿನ ಅತ್ಯಾಚಾರಕ್ಕೆ ಕಡಿವಾಣ ಇಲ್ಲವಾಗಿದೆ, ಕಾನೂನು ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ಹಿಂದು ಯುವಕರ ಕಗ್ಗೊಲೆ ನಡೆಯುತ್ತಿದ್ದರೆ ರಾಜ್ಯ ಸರ್ಕಾರ ಕಠಿಣ ಕ್ರಮ ಕೈಗೊಳ್ಳಲು ಸಂಪೂರ್ಣ ವಿಫಲವಾಗಿದೆ ಎಂದು ದೂರಿದರು. ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಗೋ ಹತ್ಯೆ ನಿಷೇಧ ಕಾಯ್ದೆ ಜಾರಿಗೊಳಿಸುತ್ತೇವೆ. ಅತ್ಯಾಚಾರಿಗಳಿಗೆ ಕಠಿಣ ಕ್ರಮ ಕೈಗೊಳ್ಳಲಾಗುವುದು. ಹಿಂದು ಯುವಕರ ಕಗ್ಗೊಲೆ ನಡೆಸಿದ ಆರೋಪಿಗಳನ್ನು ಯಾವುದೇ ಕಾರಣಕ್ಕೂ ಬಿಡುವುದಿಲ್ಲ ಎಂದು ಭರವಸೆ ನೀಡಿದರು.
ರಾಜ್ಯದಲ್ಲಿ ಹಿಂದುತ್ವದ ಸರ್ಕಾರ ಈ ಬಾರಿ ಅಧಿಕಾರಕ್ಕೆ ತರುತ್ತೇವೆ. ಅಲ್ಪಸಂಖ್ಯಾತರನ್ನು ಜೊತೆಗಿಟ್ಟುಕೊಂಡು ಉತ್ತಮ ಆಡಳಿತ ನೀಡುತ್ತೇವೆ. ರಾಜ್ಯವನ್ನು ಇನ್ನಷ್ಟು ಅಭಿವೃದ್ಧಿಪಡಿಸುವುದೇ ಬಿಜೆಪಿಯ ಧ್ಯೇಯವಾಗಿದೆ ಎಂದು ಹೇಳಿದರು.
ಸಿಎಂಗೆ ಸವಾಲು: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ದ ವಾಗ್ಧಾಳಿ ನಡೆಸಿದ ಈಶ್ವರಪ್ಪ, ಕಳೆದ ಚುನಾವಣೆಯಲ್ಲಿ ಜಿ.ಪರಮೇಶ್ವರ್ ಎಲ್ಲಿ ಸಿಎಂ ಸ್ಥಾನಕ್ಕೆ ಅಡ್ಡಿ ಬರುತ್ತಾರೋ ಎಂದು ಸ್ವತಃ ಸಿದ್ದರಾಮಯ್ಯರೇ ಕುತಂತ್ರ ರಾಜಕಾರಣ ಮಾಡಿ ಪರಮೇಶ್ವರನ್ನು ಸೋಲಿಸಿದ್ದರು. ಕೊರಟಗೆರೆ ಕ್ಷೇತ್ರದಲ್ಲಿ ಪರಮೇಶ್ವರ್ ಸೋಲುವುದಕ್ಕೆ ಸಿದ್ದರಾಮಯ್ಯರೇ ಕಾರಣ. ಇಲ್ಲವೆಂದಾದರೆ ತಾಯಿ ಚಾಮುಂಡೇಶ್ವರಿ ಮೇಲೆ ಪ್ರಮಾಣ ಮಾಡಲಿ ಎಂದು ಸವಾಲು ಹಾಕಿದರು.
ಕಾಂಗ್ರೆಸ್ ಅಧಿಕಾರದ ಅವಧಿಯಲ್ಲಿ ಕೆಲವರು ಕದ್ದುಮುಚ್ಚಿ ಆಟವಾಡುತ್ತಿದ್ದಾರೆ. ಮುಂದೆ ಇದೇ ಸರ್ಕಾರ ರಾಜ್ಯದಲ್ಲಿ ಅಧಿಕಾರಕ್ಕೆ ಬಂದರೆ ಪರಿಸ್ಥಿತಿ ಇನ್ನಷ್ಟು ಹದಗೆಡುತ್ತದೆ. ನಡುರಸ್ತೆಯಲ್ಲೇ ನಮ್ಮ ಅಕ್ಕತಂಗಿಯರ ಮೇಲೆ ಅತ್ಯಾಚಾರ ನಡೆದರೂ ಆಶ್ಚರ್ಯವಿಲ್ಲ. ರಸ್ತೆಯಲ್ಲೇ ಗೋವುಗಳ ಹತ್ಯೆ ನಡೆಸಿ ಅದನ್ನು ತಿಂದರೂ ಸುಮ್ಮನಿರಬೇಕಾಗುತ್ತದೆ. ಇದಕ್ಕೆ ಅವಕಾಶ ನೀಡಬಾರದು. ನಮ್ಮ ಧರ್ಮ ಹಾಗೂ ಸಂಸ್ಕೃತಿ ರಕ್ಷಣೆಯಾಗಬೇಕು. ಇದಕ್ಕೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂದರು. ಬಿಜೆಪಿ ಜಿಲ್ಲಾಧ್ಯಕ್ಷ ಎಸ್.ರುದ್ರೇಗೌಡ ಮಾತನಾಡಿದರು.
35 ಸಾವಿರ ಮತಗಳಿಂದ ಗೆಲ್ಲುವ ವಿಶ್ವಾಸ: ಈಶ್ವರಪ್ಪ
ಶಿವಮೊಗ್ಗ: ಶಿವಮೊಗ್ಗ ವಿಧಾನಸಭಾ ಕ್ಷೇತ್ರದಲ್ಲಿ ತಾವು ಈ ಬಾರಿ ಕನಿಷ್ಠ 35 ಸಾವಿರಕ್ಕೂ ಹೆಚ್ಚು ಮತಗಳ ಅಂತರದಿಂದ ಗೆಲುವು ಸಾಧಿಸುವ ವಿಶ್ವಾಸವಿದೆ ಎಂದು ವಿಪಕ್ಷ ನಾಯಕ ಮತ್ತು ಶಿವಮೊಗ್ಗ ನಗರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಕೆ.ಎಸ್. ಈಶ್ವರಪ್ಪ ಹೇಳಿದರು. ನಾಮಪತ್ರ ಸಲ್ಲಿಕೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕ್ಷೇತ್ರದಲ್ಲಿ ತಮಗೆ ಎದುರಾಳಿ ಕಾಣುತ್ತಿಲ್ಲ. ಕಳೆದ ಬಾರಿ ಬಿಜೆಪಿ, ಕೆಜೆಪಿ ಗೊಂದಲವಿತ್ತು. ಆದರೆ ಈ ಬಾರಿ ಪಕ್ಷದಲ್ಲಿ ಯಾವುದೇ ಗೊಂದಲವಿಲ್ಲ.
ಗೆಲವಿಗೆ ಪೂರಕ ವಾತಾವರಣ ಇದೆ ಎಂದರು. ಧರ್ಮ ರಕ್ಷಣೆ ಬಿಜೆಪಿಯಿಂದ ಮಾತ್ರ ಸಾಧ್ಯ. ಹೀಗಾಗಿ ಜಿಲ್ಲೆ ಹಾಗೂ ರಾಜ್ಯದ ಜನ ಬಿಜೆಪಿ ಗೆಲುವನ್ನು ಎದುರು ನೋಡುತ್ತಿದ್ದಾರೆ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬರುವುದು ನಿಶ್ಚಿತ ಎಂದರು.
ಮುಖ್ಯಮಂತ್ರಿ ಸಿದ್ಧರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಭ್ರಷ್ಟಾಚಾರದಲ್ಲಿ ಹಾಗೂ ಲೂಟಿ ಹೊಡೆಯುವುದರಲ್ಲಿ ಗಿನ್ನಿಸ್ ದಾಖಲೆ ಮಾಡಿದೆ. ಹಿಂದ ವರ್ಗದ ಅಭಿವೃದ್ಧಿ ಹೆಸರಿನಲ್ಲಿ ಅಧಿಕಾರಕ್ಕೆ ಬಂದು ಆ ವರ್ಗಕ್ಕೆ ದ್ರೋಹ ಬಗೆದಿದೆ. ಇದೊಂದು ದೇಶದ್ರೋಹಿ ಸರ್ಕಾರ. ಗೋ ಹತ್ಯೆ, ಅತ್ಯಾಚಾರಿಗಳಿಗೆ ಬೆಂಬಲ ನೀಡಿದ ಸರ್ಕಾರ.
ಕೆ.ಎಸ್. ಈಶ್ವರಪ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Kerala ವಯನಾಡಲ್ಲಿ ರಾಹುಲ್ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ
Holehonnur: ರಾಜ್ಯದಲ್ಲಿ ಹೆಣ್ಣು ಮಕ್ಕಳಿಗೆ ಸುರಕ್ಷತೆಯಿಲ್ಲ: ಬಿ.ವೈ. ವಿಜಯೇಂದ್ರ
LokSabha; ರಾಹುಲ್ ಗಾಂಧಿಯನ್ನು ರಾಜ್ಯಕ್ಕೆ ಹೆಚ್ಚೆಚ್ಚು ಕರೆಯಿಸಬೇಕು: ವಿಜಯೇಂದ್ರ ವ್ಯಂಗ್ಯ
Lok Sabha Election: ಬಿಜೆಪಿ ಸರ್ಕಾರದಿಂದ ಕ್ರೀಡೆಗೆ ಆದ್ಯತೆ: ಬಿ.ವೈ.ರಾಘವೇಂದ್ರ
Madhu Bangarappa; ಸೋಲಿನ ಭೀತಿಯಿಂದ ಪ್ರಧಾನಿ ಮೋದಿ ಕೀಳು ಮಾತು