ರೋಹಿಣಿ ಸಿಂಧೂರಿ ವರ್ಗ:ಸಿಎಟಿ ತೀರ್ಪಿಗೆ ತಡೆಯಾಜ್ಞೆ
Team Udayavani, Apr 28, 2018, 6:40 AM IST
ಬೆಂಗಳೂರು: ಹಾಸನ ಜಿಲ್ಲಾಧಿಕಾರಿ ಹುದ್ದೆಯಿಂದ ರೋಹಿಣಿ ಸಿಂಧೂರಿ ಅವರನ್ನು ವರ್ಗಾವಣೆಗೊಳಿಸಿದ್ದ ಸರ್ಕಾರದ ಆದೇಶ ಎತ್ತಿ ಹಿಡಿದಿದ್ದ ಕೇಂದ್ರೀಯ ಆಡಳಿತಾತ್ಮಕ ನ್ಯಾಯಮಂಡಳಿ (ಸಿಎಟಿ) ತೀರ್ಪಿಗೆ ಹೈಕೋರ್ಟ್ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಆದರೆ, ಈ ಕುರಿತ ಅರ್ಜಿ ಇತ್ಯರ್ಥಗೊಳ್ಳುವವರೆಗೆ ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ಮುಂದುವರಿಯುವಂತೆ ರೋಹಿಣಿ ಅವರಿಗೆ ಇದೇ ವೇಳೆ ನ್ಯಾಯಪೀಠ ಆದೇಶಿಸಿದೆ.
ಶುಕ್ರವಾರ ವಿಚಾರಣೆ ನಡೆಸಿದ ನ್ಯಾ.ಎಚ್.ಜಿ.ರಮೇಶ್ ಹಾಗೂ ನ್ಯಾ.ಬಿ.ಶ್ರೀನಿವಾಸೇಗೌಡ ಅವರಿದ್ದ ವಿಭಾಗೀಯ ಪೀಠ, ಸಿಎಟಿ ಆದೇಶಕ್ಕೆ ತಡೆ ನೀಡಿತು. ಆದರೆ,ರೋಹಿಣಿ ಅವರನ್ನು ಉದ್ಯೋಗ ಮತ್ತು ತರಬೇತಿ ಇಲಾಖೆ ಆಯುಕ್ತರಾಗಿ ವರ್ಗಾವಣೆಗೊಳಿಸಿ ಸರ್ಕಾರ ಹೊರಡಿಸಿದ್ದ ಆದೇಶಕ್ಕೆ ತಡೆಯಾಜ್ಞೆ ನೀಡಲು ನಿರಾಕರಿಸಿದ ನ್ಯಾಯಪೀಠ, ರಿಟ್ ಅರ್ಜಿಯ ಅಂತಿಮ ತೀರ್ಪು ಹೊರಬೀಳುವವರೆಗೆ ಆಯುಕ್ತರಾಗಿ ಕಾರ್ಯನಿರ್ವಹಿಸುವಂತೆ ಸೂಚಿಸಿತು. ಈ ಮಧ್ಯೆ ಕರ್ನಾಟಕ ಕೇಡರ್ನ ಐಎಎಸ್ ಅಧಿಕಾರಿಗಳ ವರ್ಗಾವಣೆಗೆ ಸಂಬಂಧಿಸಿದಂತೆ ಮಾರ್ಗಸೂಚಿ ರಚನೆಯಾಗದಿರುವ ಸಂಬಂಧ ಕೂಲಂಕಶ ವಿಚಾರಣೆ ನಡೆಯುವ ಅಗತ್ಯವಿದೆ ಎಂದೂ ನ್ಯಾಯಪೀಠ ಅಭಿಪ್ರಾಯ ವ್ಯಕ್ತಪಡಿಸಿ ವಿಚಾರಣೆಯನ್ನು ಮೇ 30ಕ್ಕೆ ಮುಂದೂಡಿತು.