ಬಸ್ ಪ್ರಯಾಣ ದರ ಇಳಿಕೆಗೆ ಚಿಂತನೆ: ಡಿ.ಸಿ.ತಮ್ಮಣ್ಣ
Team Udayavani, Sep 21, 2018, 6:35 AM IST
ಬೆಂಗಳೂರು: ಬಸ್ ಪ್ರಯಾಣ ದರ ಇಳಿಕೆ ಮಾಡುವ ಕುರಿತು ಚಿಂತನೆ ನಡೆದಿದೆ ಎಂದು ಸಾರಿಗೆ ಸಚಿವ ಡಿ.ಸಿ.ತಮ್ಮಣ್ಣ ತಿಳಿಸಿದ್ದಾರೆ.
ಸುದ್ದಿಗಾರರ ಜತೆ ಮಾತನಾಡಿದ ಅವರು, ಬಸ್ ಪ್ರಯಾಣ ದರ ಪರಿಷ್ಕರಣೆ ವಿಚಾರದಲ್ಲಿ ಸಾರಿಗೆ ಇಲಾಖೆ ಹಾಗೂ ಮುಖ್ಯಮಂತ್ರಿ ನvಡುವೆ ಯಾವುದೇ ಗೊಂದಲವಿಲ್ಲ. ಬಸ್ ದರ ಇಳಿಸುವ ಪ್ರಯತ್ನ ಮಾಡುತ್ತೇವೆ ಎಂದು ಹೇಳಿದರು.
ವಿದ್ಯಾರ್ಥಿಗಳಿಗೆ ಉಚಿತ ಬಸ್ ಪಾಸ್ ನೀಡಲು ಈ ವರ್ಷ ಅವಧಿ ಮುಗಿದು ಹೋಗಿದೆ. ಮುಂದಿನ ದಿನಗಳಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಒಂದು ಒಳ್ಳೆಯ ಕೆಲಸ ಆಗಬೇಕು ಎಂದರೆ ತಾಳ್ಮೆ ಬೇಕಾಗುತ್ತದೆ ಎಂದು ತಿಳಿಸಿದರು.
ರಾಜ್ಯ ಸರ್ಕಾರ ಪತನವಾಗಲಿದೆ ಎಂಬ ಬಿಜೆಪಿ ನಾಯಕರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಬಿಜೆಪಿಯವರಿಗೆ ಆರೋಪ ಮಾಡುವುದೇಕೆಲಸ. ಮೊನ್ನೆ ಇನ್ನೇನು ಸರ್ಕಾರ ಬಿದ್ದೇ ಹೋಯ್ತು ಅಂದ್ರು ಬಿಧ್ದೋಯ್ತಾ ಎಂದು ಪ್ರಶ್ನಿಸಿದರು.
ಮುಖ್ಯಮಂತ್ರಿ ಕುಮಾರಸ್ವಾಮಿಯವರ ಹೇಳಿಕೆ ಸಮರ್ಥಿಸಿಕೊಂಡ ಅವರು, ಬಿಜೆಪಿಯವರಿಗೆ ತಕ್ಕ ಉತ್ತರ ಕೊಟ್ಟಿದ್ದಾರೆ ಎಂದು ಹೇಳಿದರು.