ಮಂಡ್ಯದಲ್ಲಿ ಜೆಡಿಎಸ್ ಅಭ್ಯರ್ಥಿ ಗೆಲ್ಲಿಸಲು ಕಾಂಗ್ರೆಸ್ ಸೂಚನೆ
Team Udayavani, Oct 18, 2018, 7:04 AM IST
ಬೆಂಗಳೂರು: ಮಂಡ್ಯ ಲೋಕಸಭಾ ಉಪ ಚುನಾವಣೆಯಲ್ಲಿ ಪಕ್ಷದ ನಿರ್ಧಾರದ ವಿರುದ್ಧ ಮುನಿಸಿಕೊಂಡಿದ್ದ ಮಾಜಿ ಶಾಸಕರು ಹಾಗೂ ಸ್ಥಳೀಯ ನಾಯಕರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಬುಧವಾರ ಸಭೆ ನಡೆಸಿ ಜೆಡಿಎಸ್ ಅಭ್ಯರ್ಥಿ ಗೆಲುವಿಗೆ ಶ್ರಮಿಸುವಂತೆ ತಾಕೀತು ಮಾಡಿದ್ದಾರೆ.
ಪಕ್ಷದ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಚುನಾವಣಾ ಉಸ್ತುವಾರಿ ಸಚಿವ ಕೆ.ಜೆ. ಜಾರ್ಜ್, ಮಾಜಿ ಸಚಿವರಾದ ಚಲುವರಾಯಸ್ವಾಮಿ, ಪಿ.ಎಂ. ನರೇಂದ್ರಸ್ವಾಮಿ ಮುಖಂಡರಾದ ರವಿ ಗಣಿಗ, ರಾಮಕೃಷ್ಣ, ಮಧು ಮಾದೇಗೌಡ, ಕೆ.ಬಿ. ಚಂದ್ರಶೇಖರ್ ಸೇರಿದಂತೆ 2018ರ ವಿಧಾನಸಭೆ ಚುನಾವಣೆಯಲ್ಲಿ ಸ್ಪರ್ಧೆ ಮಾಡಿದ ಅಭ್ಯರ್ಥಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಂದರ್ಭದಲ್ಲಿ ಮೈತ್ರಿ ಪಕ್ಷಗಳ ಅಭ್ಯರ್ಥಿಗಳನ್ನು ಗೆಲ್ಲಿಸಿಕೊಂಡು ಬರುವ ಜವಾಬ್ದಾರಿ ನಮ್ಮ ಮೇಲಿದೆ. ಜಿಲ್ಲೆಯ ಸ್ಥಳೀಯ ಸಮಸ್ಯೆಗಳ ಬಗ್ಗೆ ಉಪ ಚುನಾವಣೆ ಮುಗಿದ ನಂತರ ಮಾತುಕತೆ ನಡೆಸಿ ಬಗೆಹರಿಸಲಾಗುವುದು. ಈ ಚುನಾವಣೆಯಲ್ಲಿ ಬಿಜೆಪಿಯನ್ನು ಸೋಲಿಸುವ ಮೂಲಕ ರಾಷ್ಟ್ರ ಮಟ್ಟದಲ್ಲಿ ಸಂದೇಶ ರವಾನೆ ಮಾಡುವ ಜವಾಬ್ದಾರಿ ನಮ್ಮ ಮೇಲಿದೆ ಎಂದು ಮಂಡ್ಯ ಜಿಲ್ಲಾ ನಾಯಕರಿಗೆ ಮನವರಿಕೆ ಮಾಡಿಕೊಟ್ಟಿದ್ದಾರೆ ಎಂದು ತಿಳಿದು ಬಂದಿದೆ. ಸಭೆಯ ನಂತರ ಮಾತನಾಡಿದ ಮಾಜಿ ಸಚಿವ ಚಲುವರಾಯಸ್ವಾಮಿ, ಶಿವಮೊಗ್ಗ ಹಾಗೂ ಬಳ್ಳಾರಿ ಕ್ಷೇತ್ರದಲ್ಲಿ ಚುನಾವಣಾ ಕಾವು ಜೋರಾಗಿದೆ. ಮಂಡ್ಯದಲ್ಲಿ ಅಷ್ಟೊಂದು ಜೋರಾಗಿಲ್ಲ. ಆದರೆ, ಪಕ್ಷದ ತೀರ್ಮಾನಕ್ಕೆ ನಾವೆಲ್ಲ ಬದ್ದರಾಗಿದ್ದೇವೆ. ಮಂಡ್ಯ ಅಭ್ಯರ್ಥಿ ಆಯ್ಕೆ ಬಗ್ಗೆ ಬೇಸರವಿಲ್ಲ. ಮಾಧ್ಯಮಗಳಲ್ಲಿ ಊಹಾಪೋಹದ ಸುದ್ದಿಗಳು ಬಿತ್ತರವಾಗುತ್ತಿವೆ. ನಮ್ಮಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ. ಶಿವರಾಮೇಗೌಡರ ಗೆಲುವಿಗೆ ಶ್ರಮಿಸುತ್ತೇವೆ ಎಂದು ಹೇಳಿದರು.