ಅಯೋಧ್ಯೆಯಲ್ಲಿ ರಾಮಮಂದಿರ, ಲಕ್ನೋದಲ್ಲಿ ಮಸೀದಿ ನಿರ್ಮಾಣ; ವೇದಾಂತಿ
Team Udayavani, Nov 3, 2018, 3:31 PM IST
ನವದೆಹಲಿ: ಅಯೋಧ್ಯೆಯಲ್ಲಿ ಡಿಸೆಂಬರ್ ನಿಂದ ರಾಮಮಂದಿರ ನಿರ್ಮಾಣ ಕಾರ್ಯ ಚುರುಕುಗೊಳ್ಳಲಿದ್ದು, ಲಕ್ನೋದಲ್ಲಿ ಮಸೀದಿ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಬಿಜೆಪಿ ಮಾಜಿ ಸಂಸದ ಮತ್ತು ರಾಮ ಜನ್ಮಭೂಮಿ ನ್ಯಾಸ ಅಧ್ಯಕ್ಷ ರಾಮ್ ವಿಲಾಸ್ ವೇದಾಂತಿ ಶನಿವಾರ ಘೋಷಿಸಿದ್ದಾರೆ.
ಎಎನ್ ಐ ನ್ಯೂಸ್ ಏಜೆನ್ಸಿ ಜೊತೆ ಮಾತನಾಡಿದ ಅವರು, ಅಯೋಧ್ಯೆಯಲ್ಲಿ ರಾಮಮಂದಿರ ಹಾಗೂ ಲಕ್ನೋದಲ್ಲಿ ಮಸೀದಿ ನಿರ್ಮಾಣ ಕಾರ್ಯ ಡಿಸೆಂಬರ್ ನಲ್ಲಿ ಆರಂಭಗೊಳ್ಳಲಿದೆ ಎಂದು ತಿಳಿಸಿದ್ದಾರೆ. ಮಂದಿರ, ಮಸೀದಿ ನಿರ್ಮಾಣಕ್ಕೆ ಯಾವುದೇ ಸುಗ್ರೀವಾಜ್ಞೆ ಅಗತ್ಯವಿಲ್ಲ..ಪರಸ್ಪರ ಒಪ್ಪಿಗೆಯ ಮೇರೆಗೆ ನಿರ್ಮಾಣ ಕಾರ್ಯ ನಡೆಯಲಿದೆ ಎಂದರು.
2019ರ ಲೋಕಸಭಾ ಚುನಾವಣೆಗೂ ಮುನ್ನ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ವೇದಾಂತಿ ಅವರು ಕಳೆದ ಸೆಪ್ಟೆಂಬರ್ ನಲ್ಲಿಯೇ ತಿಳಿಸಿದ್ದರು. ಅಯೋಧ್ಯೆಯಲ್ಲಿ ರಾಮಮಂದಿರ ನಿರ್ಮಾಣ ಕಾರ್ಯ ಲೋಕಸಭಾ ಚುನಾವಣೆಗೂ ಮುನ್ನವೇ ನಡೆಯಬೇಕಾಗಿದೆ ಎಂದು ಜುಲೈ ತಿಂಗಳಿನಲ್ಲಿ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಹೈದರಾಬಾದ್ ನಲ್ಲಿ ಸಮಾರಂಭವನ್ನು ಉದ್ದೇಶಿಸಿ ಮಾತನಾಡುತ್ತ ತಿಳಿಸಿರುವುದಾಗಿ ವರದಿಯಾಗಿತ್ತು.