ಸಿಂಗ್ ಆಡಳಿತಾವಧಿಯಲ್ಲಿ 3 ಬಾರಿ ಸರ್ಜಿಕಲ್ ದಾಳಿ ನಡೆದಿತ್ತು; ರಾಹುಲ್
Team Udayavani, Dec 1, 2018, 4:30 PM IST
ಜೈಪುರ್: 2016ರಲ್ಲಿ ಗಡಿನಿಯಂತ್ರಣ ರೇಖೆಯಲ್ಲಿ ನಡೆಸಿದ ಸರ್ಜಿಕಲ್ ಸ್ಟ್ರೈಕ್ ಅನ್ನು ಪ್ರಧಾನಿ ನರೇಂದ್ರ ಮೋದಿ ಅವರು ರಾಜಕೀಯ ಸ್ವತ್ತನ್ನಾಗಿ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿರುವ ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ, ಮನಮೋಹನ್ ಸಿಂಗ್ ನೇತೃತ್ವದ ಯುಪಿಎ ಸರ್ಕಾರದ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್ ದಾಳಿ ನಡೆಸಲಾಗಿತ್ತು ಎಂದು ತಿಳಿಸಿದರು.
ಚುನಾವಣಾ ಪ್ರಚಾರದ ಹಿನ್ನೆಲೆಯಲ್ಲಿ ರಾಜಸ್ಥಾನದ ಉದಯ್ ಪುರ್ ನಲ್ಲಿ ಸಭೆಯನ್ನು ಉದ್ದೇಶಿಸಿ ಮಾತನಾಡಿದ ಅವರು, 2016ರ ಸೆಪ್ಟೆಂಬರ್ 29ರಂದು ಗಡಿ ನಿಯಂತ್ರಣ ರೇಖೆಯಲ್ಲಿ ನಡೆಸಿದ ಸರ್ಜಿಕಲ್ ದಾಳಿ ಬಗ್ಗೆ ಪದೇ, ಪದೇ ಹೇಳುತ್ತಿದ್ದಾರೆ. ಆದರೆ ಮನಮೋಹನ್ ಸಿಂಗ್ ಅವರ ಅವಧಿಯಲ್ಲಿ ಮೂರು ಬಾರಿ ಸರ್ಜಿಕಲ್ ಸ್ಟ್ರೈಕ್ ನಡೆಸಲಾಗಿತ್ತು. ಇದರ ಬಗ್ಗೆ ನಿಮಗೆ ಗೊತ್ತಾ? ಎಂದು ಪ್ರಶ್ನಿಸಿದ ರಾಹುಲ್, ನಿಜಕ್ಕೂ ಮೋದಿ ಅವರು ಸೇನೆಯ ಸರ್ಜಿಕಲ್ ಸ್ಟ್ರೈಕ್ ಅನ್ನು ರಾಜಕೀಯದ ಸ್ವತ್ತನ್ನಾಗಿ ಮಾಡಿಕೊಳ್ಳುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದರು.
ಉತ್ತರಪ್ರದೇಶದ ಚುನಾವಣಾ ಅಖಾಡದಲ್ಲಿ ಗೆಲುವು ಸಾಧಿಸುವ ನಿಟ್ಟಿನಲ್ಲಿಯೇ ಬಿಜೆಪಿ ಸರ್ಜಿಕಲ್ ಸ್ಟ್ರೈಕ್ ವಿಷಯವನ್ನು ಬಹಿರಂಗ ಮಾಡಿತ್ತು ಎಂದು ಆರೋಪಿಸಿದರು. ಅಷ್ಟೇ ಅಲ್ಲ ಜಿಎಸ್ ಟಿ ಅನುಷ್ಠಾನದ ಬಗ್ಗೆಯೂ ಜನರು ತುಂಬಾ ಗೊಂದಲದಲ್ಲಿದ್ದಾರೆ ಎಂದರು.
ದೊಡ್ಡ, ದೊಡ್ಡ ಕಂಪನಿಗಳಿಗೆ ಬಾಗಿಲನ್ನು ತೆರೆದಿರುವುದು ದೊಡ್ಡ ಹಗರಣವಾಗಿದೆ ಎಂದ ರಾಹುಲ್, ನೋಟು ಅಮಾನ್ಯೀಕರಣ ಮತ್ತು ಜಿಎಸ್ ಟಿ ಜಾರಿಯಿಂದಾಗಿ ದೇಶದ ಆರ್ಥಿಕತೆ ಮತ್ತು ಜನಸಾಮಾನ್ಯರ ಬೆನ್ನೆಲುಬನ್ನೇ ಮುರಿದಂತಾಗಿದೆ ಎಂದು ದೂರಿದರು.