ಶಾಸಕ ತಿಪ್ಪಾರೆಡ್ಡಿ ನಿವಾಸಕ್ಕೆ ಮುತ್ತಿಗೆ ಯತ್ನ
Team Udayavani, Jan 18, 2019, 12:50 AM IST
ಚಿತ್ರದುರ್ಗ: ಕಾಂಗ್ರೆಸ್-ಜೆಡಿಎಸ್ ಸರ್ಕಾರವನ್ನು ಅಸ್ಥಿರಗೊಳಿಸಲು ಬಿಜೆಪಿ ನಾಯಕರು ಮುಂದಾಗಿದ್ದಾರೆ ಎಂದು ಆರೋಪಿಸಿ ಜಿಲ್ಲಾ ಯುವ ಕಾಂಗ್ರೆಸ್ ಕಾರ್ಯಕರ್ತರು ನಗರದಲ್ಲಿರುವ ಶಾಸಕ ಜಿ.ಎಚ್.ತಿಪ್ಪಾರೆಡ್ಡಿ ನಿವಾಸಕ್ಕೆ ಬುಧವಾರ ಮುತ್ತಿಗೆ ಹಾಕಲು ಯತ್ನಿಸಿದರು. ಆದರೆ, ಶಾಸಕರ ನಿವಾಸದ ದ್ವಾರದಲ್ಲೇ ಪ್ರತಿಭಟನಾಕಾರರನ್ನು ತಡೆದ ಪೊಲೀಸರು, ಒಳಗೆ ಪ್ರವೇಶಿಸಲು ಅವಕಾಶ ನೀಡಲಿಲ್ಲ. ಪ್ರತಿಭಟನಾಕಾರರು ಆಗಮಿಸುವ ಮುನ್ನವೇ ಪೊಲೀಸರು, ಶಾಸಕರ ನಿವಾಸದ ಗೇಟ್ ಬಂದ್ ಮಾಡಿ, ಬ್ಯಾರಿಕೇಡ್ಗಳನ್ನು ಅಡ್ಡ ಇಟ್ಟಿದ್ದರು. ಇದರಿಂದ ಕುಪಿತಗೊಂಡ ಯುವ ಕಾಂಗ್ರೆಸ್ ಕಾರ್ಯಕರ್ತರು ರಸ್ತೆಯಲ್ಲೇ ಕುಳಿತು ಘೋಷಣೆ ಕೂಗಿದರು. ಇದರಿಂದ ವಾಹನ ಸಂಚಾರಕ್ಕೆ ಕೆಲ ಕಾಲ ಅಡ್ಡಿ ಉಂಟಾಗಿತ್ತು.
ಇದೇ ವೇಳೆ, ಮುನ್ನೆಚ್ಚರಿಕೆ ಕ್ರಮವಾಗಿ ಚಿತ್ರದುರ್ಗ ನಗರ ವ್ಯಾಪ್ತಿಯಲ್ಲಿರುವ ಬಿಜೆಪಿ ಶಾಸಕರಾದ ಜಿ.ಎಚ್.ತಿಪ್ಪಾರೆಡ್ಡಿ ಹಾಗೂ ಹೊಳಲ್ಕೆರೆ ಶಾಸಕ ಎಂ.ಚಂದ್ರಪ್ಪ ಅವರ ಮನೆ ಗಳಿಗೂ ಬಿಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿತ್ತು.