ಪೈಪೋಟಿಯಲ್ಲಿ ಭೋಜನಕೂಟ
Team Udayavani, Feb 8, 2019, 1:06 AM IST
ಬೆಂಗಳೂರು: ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಪೈಪೋಟಿಯಲ್ಲಿ ಶಾಸಕರು ಹಾಗೂ ಸಚಿವರಿಗೆ ಭೋಜನ ಕೂಟ ಏರ್ಪಡಿಸುತ್ತಿದ್ದಾರೆ. ಇದು ಕಾಂಗ್ರೆಸ್ನಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.
ಪ್ರತಿ ಬಾರಿ ಸಂಪುಟ ಸಭೆಗೂ ಮುನ್ನ ಕಾಂಗ್ರೆಸ್ ಸಚಿವರಿಗೆ ಭೋಜನ ಕೂಟ ಏರ್ಪಡಿಸಬೇಕೆಂಬ ಹಿನ್ನೆಲೆಯಲ್ಲಿ ಎರಡು ಬಾರಿ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಉಪಾಹಾರ ಕೂಟ ಏರ್ಪಡಿಸಿದ್ದರು. ಅದು ಪರಮೇಶ್ವರ್ ಶಕ್ತಿ ಪ್ರದರ್ಶನ ಎಂಬ ವ್ಯಾಖ್ಯಾನಕ್ಕೆ ಕಾರಣವಾಗಿತ್ತು. ಅದಾದ ಬಳಿಕ, ಇತ್ತೀಚೆಗೆ ಜಂಟಿ ಅಧಿವೇಶನ ಆರಂಭಕ್ಕೂ ಮುನ್ನ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಪಕ್ಷದ ಸಚಿವರಿಗೆ ಭೋಜನ ಕೂಟ ಏರ್ಪಡಿಸಿ, ಸದನದಲ್ಲಿ ಸರ್ಕಾರವನ್ನು ಸಮರ್ಥಿಸಿಕೊಳ್ಳುವಂತೆ ಸಲಹೆ ನೀಡಿದ್ದರು. ಅದಾದ ಮಾರನೇ ದಿನವೇ ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್ ಎರಡೂ ಪಕ್ಷಗಳ ಶಾಸಕರಿಗೆ ಜಂಟಿ ಭೋಜನ ಕೂಟ ಏರ್ಪಡಿಸಿ, ಮೈತ್ರಿ ಸರ್ಕಾರದಲ್ಲಿ ಸಮನ್ವಯತೆ ತರುವ ಪ್ರಯತ್ನ ನಡೆಸಿದ್ದರು. ಈಗ ಸಿದ್ದರಾಮಯ್ಯ ಕೂಡ ಅದೇ ಮಾರ್ಗ ಅನುಸರಿಸುತ್ತಿದ್ದು, ಫೆಬ್ರವರಿ 12 ರಂದು ಮೈತ್ರಿ ಸರ್ಕಾರದ ಎರಡೂ ಪಕ್ಷಗಳ ಶಾಸಕರಿಗೆ ಔತಣಕೂಟ ಏರ್ಪಡಿಸಿ, ಎಲ್ಲರ ವಿಶ್ವಾಸಗಳಿಸುವ ಪ್ರಯತ್ನ ಮಾಡುತ್ತಿದ್ದಾರೆ. ಇಬ್ಬರು ನಾಯಕರ ಭೋಜನ ಕೂಟದ ರಾಜಕೀಯ ಎರಡೂ ಪಕ್ಷದ ಶಾಸಕರಲ್ಲಿ ಸಾಕಷ್ಟು ಚರ್ಚೆಗೆ ಗ್ರಾಸವಾಗಿದೆ.