ಹತ್ತು ಸಾವಿರ ಎಕರೆ ಬಂಡೀಪುರ ಅರಣ್ಯ ಸಂಪೂರ್ಣ ನಾಶ
Team Udayavani, Feb 28, 2019, 12:10 AM IST
ಗುಂಡ್ಲುಪೇಟೆ: ಕಳೆದ ಆರು ದಿನಗಳಿಂದ ಕಾಡ್ಗಿಚ್ಚಿನಿಂದ ಹಾನಿಗೊಳಗಾದ ಬಂಡೀಪುರ ಹುಲಿ ರಕ್ಷಿತಾರಣ್ಯದ ಪ್ರದೇಶಗಳಲ್ಲಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಬುಧವಾರ ವೈಮಾನಿಕ ಸಮೀಕ್ಷೆ ನಡೆಸಿದರು. ಬರೋಬ್ಬರಿ 10 ಸಾವಿರ ಎಕರೆ ಅರಣ್ಯವನ್ನು ಬಲಿ ಪಡೆದು ಬೆಂಕಿ ಕಡೆಗೂ ತಹಬದಿಗೆ ಬಂದಿದೆ.
ಮಧ್ಯಾಹ್ನ 12.30ರ ವೇಳೆಗೆ ಬೆಂಗಳೂರಿನಿಂದ ಹೆಲಿಕಾಪ್ಟರ್ ಮೂಲಕ ಆಗಮಿಸಿದ ಮುಖ್ಯಮಂತ್ರಿಯವರು ಹುಲಿ ಯೋಜನೆಯ ವ್ಯಾಪ್ತಿಯಲ್ಲಿನ ಕಾಡ್ಗಿಚ್ಚಿನಿಂದ ಹೆಚ್ಚು ಹಾನಿಗೊಳಗಾಗಿರುವ ಹಿಮವದ್ ಗೋಪಾಲಸ್ವಾಮಿ ಬೆಟ್ಟ ವಲಯದ ಕರಡಿಕಲ್ಲು ಬೆಟ್ಟ, ಗುಮ್ಮನಗುಡ್ಡ ಮತ್ತು ಬೋಳಗುಡ್ಡ ಪ್ರದೇಶಗಳಲ್ಲಿ ಅಲ್ಲದೇ ಚಮ್ಮನಹಳ್ಳ, ತಿಪ್ಪನಹಳ್ಳ, ಮದ್ದೂರು ಅರಣ್ಯ ವಲಯ, ಮೂಲೆಹೊಳೆ ಅರಣ್ಯ ಹಾಗೂ ಕರಡಿಬೆಟ್ಟ ಅರಣ್ಯ ವಲಯ, ಕುಂದಕೆರೆ ಅರಣ್ಯ ವಲಯದಲ್ಲಿನ ಪ್ರದೇಶಗಳಲ್ಲಿ ಸುಮಾರು ಅರ್ಧಗಂಟೆಗಳ ಕಾಲ ಸಂಚರಿಸಿ ವೈಮಾನಿಕ ಸಮೀಕ್ಷೆ ನಡೆಸಿ ಅರಣ್ಯ ಅಧಿಕಾರಿಗಳಿಂದ ಮಾಹಿತಿ ಪಡೆದುಕೊಂಡರು.ಹೆಲಿಕಾಪ್ಟರ್ ಸಮೀಕ್ಷೆಯನ್ನು ಮುಗಿಸಿ ಮಂಡ್ಯಕ್ಕೆ ಪ್ರಯಾಣ ಬೆಳೆಸಿದರು.
ಕಳೆದ 24ರಂದು ಅರಣ್ಯ ಸಚಿವ ಸತೀಶ್ ಜಾರಕಿಹೋಳಿ ಭೇಟಿ ನೀಡಿ ಪರಿಶೀಲಿಸಿದ ನಂತರ ಮುಖ್ಯಮಂತ್ರಿ ಕುಮಾರಸ್ವಾಮಿ ವಾಯುಸೇನೆಯ ಎರಡು ಹೆಲಿಕಾಪ್ಟರ್ ಮೂಲಕ ಬೆಂಕಿ ನಂದಿಸಲು ಆದೇಶಿಸಿದ್ದರು. ಸತತ ಎರಡು ದಿನಗಳ ಕಾರ್ಯಾಚರಣೆ ನಂತರ ಬೆಂಕಿಯು ಬಹುತೇಕ ನಿಯಂತ್ರಣಕ್ಕೆ ಬಂದಿದೆ. ಆದರೆ, ಅಪರೂಪದ ಜೀವ ವೈವಿಧ್ಯಗಳು ಮತ್ತು ಅಪಾರ ಪ್ರಮಾಣದ ವನ್ಯ ಸಂಪತ್ತು ಬೆಂಕಿಯಲ್ಲಿ ಭಸ್ಮವಾಗಿದೆ.
10 ಸಾವಿರ ಎಕರೆ ಭಸ್ಮ: ಫೆ 21ರ ಸಂಜೆ ಹುಲಿಯೋಜನೆಯ ಕುಂದಕೆರೆ ವಲಯದ ಲೊಕ್ಕೆರೆ ಪ್ರದೇಶಕ್ಕೆ ಬಿದ್ದ ಬೆಂಕಿಯು ಸತತ 6 ದಿನಗಳ ಕಾಲ ನಿಯಂತ್ರಣಕ್ಕೆ ಬಾರದೇ ಸಮೀಪದ ಹಿಮವದ್ ಗೋಪಾಲಸ್ವಾಮಿಬೆಟ್ಟ, ಬಂಡೀಪುರ, ಮದ್ದೂರು ಹಾಗೂ ಮೂಲೆಹೊಳೆ ವಲಯಗಳಿಗೂ ಹರಡಿತ್ತು. ಸತತ ಆರು ದಿನಗಳ ಕಾಲ ಬೆಂಕಿನಂದಿಸಲು ನಡೆದ ಪ್ರಯತ್ನಗಳು ಸಫಲವಾಗದೆ 10 ಸಾವಿರ ಎಕರೆ ಅರಣ್ಯ ಪ್ರದೇಶ ಭಸ್ಮವಾಗಿದೆ ಎಂದು ಅಂದಾಜಿಸಲಾಗಿದೆ.
ಗೋಪಾಲಸ್ವಾಮಿ ಬೆಟ್ಟ ಮೇಲಿರುವ ಗುಡ್ಡಗಳಿಗೆ ಮಾನವರು ಹೋಗಿ ಬೆಂಕಿ ನಂದಿಸಲು ಅಸಾಧ್ಯವೆಂದು ಅರಿತ ವಾಯುಸೇನೆಯ ಹೆಲಿಕಾಪ್ಟರ್ ಅವಿರತವಾಗಿ 24, 25 ಹಾಗೂ 26ರಂದು ನೀರು ಸಿಂಪಡಿಸುವ ಮೂಲಕ ತಮ್ಮ ಕಾರ್ಯವನ್ನು ಯಶಸ್ವಿಯಾಗಿ ಮುಗಿಸಿ ಬೆಂಕಿ ನಂದಿಸಿದವು.
ಶಾಂತವಾದ ಬಂಡೀಪುರ: ಕಳೆದ ಆರು ದಿನಗಳಿಂದ ತನ್ನ ರುದ್ರನರ್ತನವನ್ನು ತೋರಿಸಿದ ಬೆಂಕಿಯು ಈಗ ಸಂಪೂರ್ಣವಾಗಿ ಶಾಂತವಾಗಿದೆ. ಸಫಾರಿ ವಲಯ, ಹಿಮವದ್ ಗೋಪಾಲಸ್ವಾಮಿ ಬೆಟ್ಟದ ವಲಯ, ಕುಂದಕೆರೆ ಸೇರಿದಂತೆ ಬಂಡೀಪುರ ಅರಣ್ಯವಲಯದಲ್ಲಿ ಸಂಪೂರ್ಣವಾಗಿ ಬೆಂಕಿಯನ್ನು ನಂದಿಸಲಾಗಿದೆ.
ಹೆಲಿಕಾಪ್ಟರ್ಗಳನ್ನು ಬಾಡಿಗೆಗೆ ಪಡೆಯಲು ನಿರ್ಧಾರ
ಚಿಕ್ಕಮಗಳೂರು: ಅರಣ್ಯ ಪ್ರದೇಶಗಳಲ್ಲಿ ಬೆಂಕಿ ಬಿದ್ದಾಗ ಅದನ್ನು ನಂದಿಸಲು ಬೇಸಿಗೆ ಕಾಲದಲ್ಲಿ 3 ತಿಂಗಳ ಕಾಲ ಹೆಲಿಕಾಪ್ಟರ್ಗಳನ್ನು ಬಾಡಿಗೆಗೆ ಪಡೆಯಲು ತೀರ್ಮಾನಿಸಲಾಗಿದೆ ಎಂದು ಅರಣ್ಯ ಸಚಿವ ಸತೀಶ ಜಾರಕಿಹೊಳಿ ತಿಳಿಸಿದರು.
ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಹೊಸದಾಗಿ ಹೆಲಿಕಾಪ್ಟರ್ ಖರೀದಿಸಲು ಇಲಾಖೆಯಲ್ಲಿ ಹಣದ ಕೊರತೆ ಇರುವುದರಿಂದ ಬಾಡಿಗೆ ಆಧಾರದಲ್ಲಿ ಪಡೆಯಲಾಗುವುದು. ಬೇಸಿಗೆ ಕಾಲದಲ್ಲಿ ಅರಣ್ಯ ಪ್ರದೇಶಗಳಲ್ಲಿ ಕಾಡ್ಗಿಚ್ಚಿನಿಂದಾಗಲಿ ಅಥವಾ ಇನ್ನಾವುದೇ ಕಾರಣದಿಂದ ಬೆಂಕಿ ಬಿದ್ದಲ್ಲಿ ಅದನ್ನು ನಂದಿಸುವ ಉದ್ದೇಶಕ್ಕಾಗಿ ಪ್ರತಿ ವರ್ಷ 50 ಲಕ್ಷ ರೂ.ಗಳನ್ನು ಮೀಸಲಿಡಲಾಗುತ್ತದೆ ಎಂದರು.
ಬಂಡೀಪುರ ಅಭಯಾರಣ್ಯದಲ್ಲಿ ಬೆಂಕಿ ಸ್ವಾಭಾವಿಕವಾಗಿ ಬಿದ್ದಿಲ್ಲ. ಬೆಂಕಿ ಬೀಳಲು ಇಲಾಖೆಯ ವೈಫಲ್ಯ ಕಾರಣವಲ್ಲ. ಯಾರೋ ಬೆಂಕಿಯನ್ನು ಉದ್ದೇಶಪೂರ್ವಕವಾಗಿ ಹಾಕಿದ್ದಾರೆ. ಇಲಾಖೆಯಿಂದ ಈಗಾಗಲೇ ದೂರು ಸಲ್ಲಿಸಲಾಗಿದೆ ಎಂದು ಹೇಳಿದರು. ಇಲಾಖೆ ಸಿಬ್ಬಂದಿಗೆ ಈಗ ನೀಡಲಾಗಿರುವ ಆಯುಧಗಳು
ಹಳೆಯದಾಗಿದೆ. ಆದ್ದರಿಂದ ಅತ್ಯಾಧುನಿಕ ಆಯುಧಗಳನ್ನು ಖರೀದಿಸಲು ನಿರ್ಧರಿಸಲಾಗಿದೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ
MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ
HD Revanna, ಪ್ರಜ್ವಲ್ ಮೇಲೆ ಲೈಂಗಿಕ ದೌರ್ಜನ್ಯ ಕೇಸ್!
CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್; ಮರು ಪರೀಕ್ಷೆ ನಡೆಸದಿರಲು ನಿರ್ಧಾರ
MUST WATCH
ಹೊಸ ಸೇರ್ಪಡೆ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ