25ರಂದು ನಾಮಪತ್ರ ಸಲ್ಲಿಕೆ: ಪ್ರತಾಪ್ ಸಿಂಹ
Team Udayavani, Mar 22, 2019, 7:36 AM IST
ಮೈಸೂರು: ಮೈಸೂರು-ಕೊಡಗು ಲೋಕಸಭಾ ಕ್ಷೇತ್ರದಿಂದ ಪುನರಾಯ್ಕೆ ಬಯಸಿ, ಬಿಜೆಪಿ ಅಭ್ಯರ್ಥಿಯಾಗಿ ಮಾರ್ಚ್ 25 ರಂದು ನಾಮಪತ್ರ ಸಲ್ಲಿಸುವುದಾಗಿ ಸಂಸದ ಪ್ರತಾಪ್ ಸಿಂಹ ತಿಳಿಸಿದರು. ನಗರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದರು.
ಅಂದು ಬೆಳಗ್ಗೆ ಕೋಟೆ ಆಂಜನೇಯ ಸ್ವಾಮಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ, ಪಕ್ಷದ ಕಾರ್ಯಕರ್ತರು, ಮುಖಂಡರೊಂದಿಗೆ ಮೆರವಣಿಗೆಯಲ್ಲಿ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ನಾಮಪತ್ರ ಸಲ್ಲಿಸಲಿದ್ದು, ಈ ವೇಳೆ ರಾಜ್ಯ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ರಾಜ್ಯ ಉಪಾಧ್ಯಕ್ಷ ಬಿ.ಶ್ರೀರಾಮುಲು ಸೇರಿದಂತೆ ರಾಜ್ಯ ಬಿಜೆಪಿಯ ಅನೇಕ ನಾಯಕರು ಭಾಗವಹಿಸಲಿದ್ದಾರೆ ಎಂದರು. ಚುನಾವಣಾ ಪ್ರಚಾರ ಸಭೆಗೆ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರಿಗೆ ಬರುವ ಸಾಧ್ಯತೆ ಇದೆ ಎಂದು ಹೇಳಿದರು.
ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿರುವ ಕಾಂಗ್ರೆಸ್-ಜೆಡಿಎಸ್ ಪಕ್ಷಗಳು ಏನೇ ತಂತ್ರ ಮಾಡಿದರು ಗೆಲುವು ನನ್ನದೇ, ಕಾಂಗ್ರೆಸ್- ಜೆಡಿಎಸ್ ಪಕ್ಷಗಳಲ್ಲಿಯೂ ಮೋದಿ ಬೆಂಬಲಿಸುವ ಜನರಿದ್ದಾರೆ, ಅವರೆಲ್ಲಾ ಬಿಜೆಪಿಯನ್ನು ಬೆಂಬಲಿಸುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. ಮೈಸೂರು ಭಾಗದಲ್ಲಿ ಮೈತ್ರಿ ಆಟ ಯಾವುದೇ ಕಾರಣಕ್ಕೂ ನಡೆಯುವುದಿಲ್ಲ. ಬಿಜೆಪಿಯನ್ನು ಸೋಲಿಸಲು ಎಲ್ಲರು ಒಟ್ಟಾಗಿದ್ದಾರೆ.
ಇದರಲ್ಲೇ ಗೊತ್ತಾಗುತ್ತದೆ ಮೈಸೂರು ಭಾಗದಲ್ಲಿ ಬಿಜೆಪಿ ಎಷ್ಟು ಪ್ರಬಲವಾಗಿದೆ ಎಂಬುದು ಎನ್ನುವ ಮೂಲಕ ಮೈತ್ರಿ ಸರ್ಕಾರಕ್ಕೆ ಟಾಂಗ್ ನೀಡಿದರು. ನನ್ನ ಚುನಾವಣೆ ಮುಗಿಯುವವರೆಗೂ ಯಾವುದೇ ಅಭ್ಯರ್ಥಿಯ ಪರ ನಾನು ಪ್ರಚಾರಕ್ಕೆ ಹೋಗುವುದಿಲ್ಲ. ನನ್ನ ಚುನಾವಣೆ ಮುಗಿದ ನಂತರ ಇತರೆ ಕ್ಷೇತ್ರಗಳಿಗೆ ಪ್ರಚಾರಕ್ಕೆ ಹೋಗುತ್ತೇನೆ ಎಂದು ತಿಳಿಸಿದರು.