ಮೊದಲು ಪರಮೇಶ್ವರ್ ಅವರನ್ನು ಸಿಎಂ ಮಾಡಿ;ಸಿದ್ದುಗೆ ಬಿಎಸ್ವೈ ಪ್ರತಿ ಸವಾಲು
ಕುಮಾರಸ್ವಾಮಿಯವರೇ ನೀವು ಗ್ರಾಮ ವಾಸ್ತವ್ಯ ಮಾಡಿದ ಗ್ರಾಮಗಳ ಸ್ಥಿತಿ ಏನಾಗಿದೆ ?
Team Udayavani, Jun 5, 2019, 4:14 PM IST
ಬೆಂಗಳೂರು: ಮೀಸಲು ಕ್ಷೇತ್ರದಲ್ಲಿ ಗೆದ್ದ ಸಂಸದರಿಗೆ ಸಚಿವ ಸ್ಥಾನ ನೀಡುವ ವಿಚಾರದಲ್ಲಿ ಸಿದ್ದರಾಮಯ್ಯ ಅವರ ಸವಾಲಿಗೆ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಅವರು ಪ್ರತಿ ಸವಾಲು ಹಾಕಿದ್ದು, ನೀವು ಮೊದಲು ಪರಮೇಶ್ವರ್ ಅವರನ್ನು ಸಿಎಂ ಮಾಡಿ , ಬಳಿಕ ನಾವು ಮೀಸಲು ಕ್ಷೇತ್ರದಲ್ಲಿ ಗೆದ್ದ ಸಂಸದರನ್ನು ಸಚಿವರನ್ನಾಗಿಸುತ್ತೇವೆ ಎಂದಿದ್ದಾರೆ.
ಅರಮನೆ ಮೈದಾನದಲ್ಲಿ ಬುಧವಾರ ಹಮ್ಮಿಕೊಂಡಿದ್ದ ರಾಜ್ಯ ಬಿಜೆಪಿಯ 25 ಸಂಸತ್ ಸದಸ್ಯರ ಅಭಿನಂದನಾ ಸಮಾರಂಭದಲ್ಲಿ ಮಾತನಾಡಿದ ಬಿ.ಎಸ್.ಯಡಿಯೂರಪ್ಪ , ಕಾಂಗ್ರೆಸ್ ಮತ್ತು ಜೆಡಿಎಸ್ ವಿರುದ್ಧ ಕಿಡಿ ಕಾರಿದರು.
ಫೈವ್ಸ್ಟಾರ್ ಹೊಟೇಲ್ ಸಿಎಂ
ಫೈವ್ ಸ್ಟಾರ್ ಹೊಟೇಲ್ನಲ್ಲಿ ವಾಸ್ತವ್ಯ ಮಾಡುವ ಮುಖ್ಯಮಂತ್ರಿ ಕುಮಾರಸ್ವಾಮಿ ಈಗ ಶಾಲೆಯಲ್ಲಿ ವಾಸ್ತವ್ಯ ಮಾಡಲು ಮುಂದಾಗಿದ್ದಾರೆ. ಅವರು ಈ ಹಿಂದೆ ಗ್ರಾಮ ವಾಸ್ತವ್ಯ ಮಾಡಿ ಬಡಾಯಿ ಕೊಚ್ಚಿ ಬಂದಿದ್ದ ಗ್ರಾಮಗಳ ಸ್ಥಿತಿ ಏನಾಗಿದೆ ಎನ್ನುವುದನ್ನು ಮೊದಲು ನೋಡಲಿ ಎಂದು ಸವಾಲು ಹಾಕಿದರು.
ಕಾರ್ಯಕರ್ತರ ಮೇಲೆ ಪುಷ್ಪವೃಷ್ಟಿ
ಸಮಾರಂಭದಲ್ಲಿ ಅಭೂತಪೂರ್ವ ವಿಜಯಕ್ಕೆ ಕಾರಣಕರ್ತರಾದ ಕಾರ್ಯಕರ್ತರಿಗೆ ಕೃತಜ್ಞತೆ ಸಮರ್ಪಿಸಲಾಯಿತು.ಕಾರ್ಯಕರ್ತರ ಮೇಲೆ ಬಿಜೆಪಿ ನಾಯಕರು ಪುಷ್ಪವೃಷ್ಟಿ ಮಾಡಿ ವಿಶೇಷ ಗೌರವ ಸಲ್ಲಿಸಿ ಕೃತಜ್ಞತೆ ಸಲ್ಲಿಸಿದರು.
ರಾಹುಲ್ ನಿದ್ದೆ ಮಾಡಲಿ
ಸಮಾರಂಭದಲ್ಲಿ ಭಾಗಿಯಾಗಿದ್ದ ರಾಜ್ಯ ಬಿಜೆಪಿ ಉಸ್ತುವಾರಿ ಮುರಳೀಧರ್ ರಾವ್ ಅವರು ಮಾತನಾಡಿ , ರಾಹುಲ್ ಗಾಂಧಿ ಇನ್ನು 5 ವರ್ಷ ನಿದ್ದೆ ಮಾಡಲಿ , ದೇವೇಗೌಡರು ಮತ್ತು ಸಿದ್ದರಾಮಯ್ಯ ಅವರು ಸನ್ಯಾಸಾಶ್ರಮ ಸ್ವೀಕರಿಸಲಿ ಎಂದರು.
ಸಿದ್ದರಾಮಯ್ಯ ಟ್ವೀಟ್ನಲ್ಲೇನಿತ್ತು?
ಬಾಯಿ ಬಡಾಯಿ ಮೂಲಕ ದಲಿತರ ಉದ್ಧಾರ ಆಗುವುದಿಲ್ಲ. ಮೊನ್ನೆ ನಡೆದ ಚುನಾವಣೆಯಲ್ಲಿ ರಾಜ್ಯದ ಮೀಸಲು ಕ್ಷೇತ್ರಗಳಲ್ಲಿ ಕೂಡಾ ಬಿಜೆಪಿ ಅಭ್ಯರ್ಥಿಗಳು ಗೆದ್ದಿದ್ದಾರೆ. ಅವರಿಗೆ ಅಭಿನಂದನೆಗಳು. ಹೀಗಿದ್ದರೂ ಕೇಂದ್ರ ಸಚಿವ ಸಂಪುಟದಲ್ಲಿ ರಾಜ್ಯದ ಒಬ್ಬ ದಲಿತ ಸಂಸದನಿಗೂ ಅವಕಾಶ ಸಿಕ್ಕಿಲ್ಲ. ಇದಕ್ಕಿಂತ ದೊಡ್ಡ ಅನ್ಯಾಯ, ದ್ರೋಹ ಬೇರೇನಿದೆ? ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದರು.