ಮಾತುಕತೆಗೆ ಸಿದ್ಧ ಎಂದು ಹೇಳಿಲ್ಲ; ಪಾಕ್ ಮಾಧ್ಯಮಗಳ ವರದಿಗೆ ಭಾರತ ತಿರುಗೇಟು!
Team Udayavani, Jun 20, 2019, 4:23 PM IST
ನವದೆಹಲಿ: ಪಾಕಿಸ್ತಾನದ ಜೊತೆ ಮಾತುಕತೆ ನಡೆಸಲು ಭಾರತ ಸಿದ್ಧವಾಗಿದೆ ಎಂಬ ಪಾಕಿಸ್ತಾನಿ ಮಾಧ್ಯಮಗಳ ವರದಿಯನ್ನು ಭಾರತ ಸಾರಸಗಟಾಗಿ ಗುರುವಾರ ತಳ್ಳಿಹಾಕಿದೆ.
ಪಾಕಿಸ್ತಾನದ ಜೊತೆ ಮಾತುಕತೆ ನಡೆಸುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿಯವರಾಗಲಿ ಮತ್ತು ವಿದೇಶಾಂಗ ವ್ಯವಹಾರಗಳ ಸಚಿವ ಎಸ್.ಜೈಶಂಕರ್ ಅವರಾಗಲಿ ಯಾವುದೇ ಸಂದೇಶ, ಪ್ರತಿಕ್ರಿಯೆ ನೀಡಿಲ್ಲ ಎಂದು ಭಾರತ ಸ್ಪಷ್ಟಪಡಿಸಿದೆ.
ಇತ್ತೀಚೆಗಷ್ಟೇ ನಡೆದ ಶೃಂಗಸಭೆಯಲ್ಲಿ ನಡೆದ ಮಾತುಕತೆ ಹಿನ್ನೆಲೆಯಲ್ಲಿ ಪಾಕಿಸ್ತಾನದ ಜೊತೆ ಮಾತುಕತೆ ನಡೆಸಬೇಕೆಂಬ ಮನವಿಗೆ ಪ್ರಧಾನಿ ನರೇಂದ್ರ ಮೋದಿ ಮತ್ತು ಎಸ್.ಜೈಶಂಕರ್ ಸಕಾರಾತ್ಮಕ ಪ್ರತಿಕ್ರಿಯೆ ನೀಡಿರುವುದಾಗಿ ಎಕ್ಸ್ ಪ್ರೆಸ್ ಟ್ರಿಬ್ಯೂನ್ ಪತ್ರಿಕೆ ವರದಿ ಮಾಡಿತ್ತು.
ಆದರೆ ಭಾರತ ಯಾವುದೇ ಈ ರೀತಿಯ ಹೇಳಿಕೆಯನ್ನಾಗಲಿ, ಮಾತುಕತೆ ನಡೆಸುವ ಬಗ್ಗೆ ಪಾಕಿಸ್ತಾನಕ್ಕೆ ಸಂದೇಶ ರವಾನಿಸಿಲ್ಲ ಎಂದು ತಿಳಿಸಿರುವುದಾಗಿ ವರದಿ ವಿವರಿಸಿದೆ.