“ಸ್ವಾಭಿಮಾನಕ್ಕೆ ಧಕ್ಕೆಯಾದವರು ರಾಜೀನಾಮೆ ಕೊಟ್ಟಿದ್ದಾರೆ’
Team Udayavani, Jul 8, 2019, 3:00 AM IST
ಚಿಕ್ಕಮಗಳೂರು: ಎಐಸಿಸಿ ಅಧ್ಯಕ್ಷರೇ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿರುವುದರಿಂದ ಕಾಂಗ್ರೆಸ್ ಮೇಲೆ ವಿಶ್ವಾಸವಿಲ್ಲದವರು, ಸ್ವಾಭಿಮಾನಕ್ಕೆ ಧಕ್ಕೆಯಾಗಿ ಅಪಮಾನ ಅನುಭವಿಸಿದವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದಾರೆ. ಇದರಲ್ಲಿ ಬಿಜೆಪಿಯ ಯಾವುದೇ ಪಾತ್ರವಿಲ್ಲ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಸಿ.ಟಿ. ರವಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿ, ಸ್ವತಃ ಎಐಸಿಸಿ ಅಧ್ಯಕ್ಷರಿಗೂ ವಿಶ್ವಾಸವಿಲ್ಲದಂತಾಗಿದೆ. ಹಾಗಾಗಿಯೇ ರಾಹುಲ್ ಗಾಂಧಿ ತಮ್ಮ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಈಗ ರಾಜ್ಯದಲ್ಲಿ 7 ಬಾರಿ ಶಾಸಕರಾದವರು, ಹಲವು ಬಾರಿ ಸಚಿವರಾಗಿ ಕಾರ್ಯ ನಿರ್ವಹಿಸಿದವರು ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ. ಅವರಿಗೆ ಪಕ್ಷದ ಮೇಲೆ ನಂಬಿಕೆ ಇಲ್ಲದಿದ್ದರಿಂದ, ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದ್ದರಿಂದ ರಾಜೀನಾಮೆ ನೀಡಿದ್ದಾರೆ. ಆದರೆ ಹುಳುಕು ಮುಚ್ಚಿಕೊಳ್ಳಲು ಕಾಂಗ್ರೆಸ್ ಮುಖಂಡರು ಬಿಜೆಪಿ ಮೇಲೆ ಆರೋಪ ಹೊರಿಸುತ್ತಿದ್ದಾರೆ ಎಂದರು.