ಪ್ರಿಯಾಂಕಾ ಗಾಂಧಿ ಬಂಧನಕ್ಕೆ ಖಂಡನೆ: ಕಾಂಗ್ರೆಸ್ ಪ್ರತಿಭಟನೆ
Team Udayavani, Jul 22, 2019, 5:54 AM IST
ಮಡಿಕೇರಿ: ಭೂ ವಿವಾದಕ್ಕೆ ಸಂಬಂಧಿಸಿದಂತೆ ಸೋನಾಭದ್ರಾ ಜಿಲ್ಲೆಯಲ್ಲಿ ನಡೆದ ಗೋಲಿಬಾರ್ನಲ್ಲಿ ಗಾಯಗೊಂಡವರನ್ನು ಭೇಟಿ ಮಾಡಲು ತೆರಳುತ್ತಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ಅವರನ್ನು ಪೊಲೀಸರು ರಾಜಕೀಯ ದುರುದ್ದೇಶದಿಂದ ಬಂಧಿಸಿದ್ದಾರೆ ಎಂದು ಆರೋಪಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯಿಂದ ನಗರದಲ್ಲಿ ಪ್ರತಿಭಟನೆ ನಡೆಸಿತು.
ನಗರದ ಗಾಂಧಿ ಮಂಟಪದ ಎದುರು ಜಮಾುಸಿದ ಕಾಂಗ್ರೆಸ್ ಮುಖಂಡರು ಹಾಗೂ ಕಾರ್ಯಕರ್ತರು ಉತ್ತರ ಪ್ರದೇಶದ ಬಿಜೆಪಿ ನೇತೃತ್ವದ ಸರಕಾರದ ವಿರುದ್ಧ ಘೋಷಣೆಗಳನ್ನು ಕೂಗಿದರು.
ಈ ಸಂದರ್ಭ ಮಾತನಾಡಿದ ಕಾಂಗ್ರೆಸ್ ಜಿಲ್ಲಾಧ್ಯಕ್ಷ ಕೆ.ಕೆ.ಮಂಜುನಾಥ್ ಕುಮಾರ್, ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸಿರುವ ಕ್ರಮವನ್ನು ಖಂಡಿಸುವುದಾಗಿ ತಿಳಿಸಿದರು.ಉತ್ತರ ಪ್ರದೇಶ ಸರ್ಕಾರ ಸಂವಿಧಾನದ ಆಶಯಗಳಿಗೆ ವಿರುದ್ಧವಾಗಿ ನಡೆದುಕೊಳ್ಳುತ್ತಿದ್ದು, ರೈತರು ಹಾಗೂ ದುರ್ಬಲರಿಗೆ ನೋವುಂಟು ಮಾಡುವ ರೀತಿಯಲ್ಲಿ ಆಡಳಿತ ನಡೆಸುತ್ತಿದೆ ಎಂದು ಆರೋಪಿಸಿದರು.
ಗೋಲಿಬಾರ್ನಲ್ಲಿ ಗಾಯಗೊಂಡ ವರಿಗೆ ಸಾಂತ್ವನ ಹೇಳಲು ತೆರಳಿದ್ದ ಪ್ರಿಯಾಂಕಾ ಗಾಂಧಿ ಅವರನ್ನು ಬಂಧಿಸುವ ಮೂಲಕ ಸರಕಾರ ಸರ್ವಾಧಿಕಾರಿ ಧೋರಣೆಯನ್ನು ಪ್ರದರ್ಶಿಸಿದೆ. ದಬ್ಟಾಳಿಕೆ ೕಗೆ ಮುಂದುವರೆದರೆ ಹೋರಾಟವನ್ನು ತೀವ್ರಗೊಳಿಸುವುದಾಗಿ ಮಂಜುನಾಥ್ ಕುಮಾರ್ ಎಚ್ಚರಿಕೆ ನೀಡಿದರು.
ಕೆಪಿಸಿಸಿ ಉಪಾಧ್ಯಕ್ಷ ಮಿಟ್ಟು ಚಂಗಪ್ಪ, ಸದಸ್ಯ ಟಿ.ಪಿ.ರಮೇಶ್, ವಕ್ಫ್ ಸಲಹಾ ಸಮಿತಿಯ ಅಧ್ಯಕ್ಷ ಕೆ.ಎ.ಯಾಕುಬ್, ಜಿಲ್ಲಾ ಅಲ್ಪಸಂಖ್ಯಾಕರ ಘಟಕದ ಅಧ್ಯಕ್ಷ ಎ.ಕೆ.ಹ್ಯಾರಿಸ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಅಪ್ರು ರವೀಂದ್ರ, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷ ಅಬ್ದುಲ್ ರಜಾ‚ಕ್, ಪ್ರಧಾನ ಕಾರ್ಯದರ್ಶಿ ಆರ್.ಪಿ.ಚಂದ್ರಶೇಖರ್, ಮೂಡಾ ಮಾಜಿ ಅಧ್ಯಕ್ಷ ಚುಮ್ಮಿದೇವಯ್ಯ, ಜಿ.ಪಂ ಸದಸ್ಯೆ ಸುನಿತಾ ಮಂಜುನಾಥ್, ಜಿಲ್ಲಾ ಮಹಿಳಾ ಕಾರ್ಯದರ್ಶಿ ಉದಯ ಚಂದ್ರಿಕಾ, ಟಿ.ಎಂ.ಅಯ್ಯಪ್ಪ, ಸದಾಮುದ್ದಯ್ಯ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು