ಮಧ್ಯಂತರ ಚುನಾವಣೆಗೆ ಈಗಿನಿಂದಲೇ ಸಜ್ಜು
Team Udayavani, Aug 1, 2019, 3:05 AM IST
ಬೆಂಗಳೂರು: “ರಾಜ್ಯದಲ್ಲಿ ಮಧ್ಯಂತರ ಚುನಾವಣೆ ಮೂರು ತಿಂಗಳಿಗೆ ಬರುತ್ತೋ ಆರು ತಿಂಗಳಿಗೆ ಬರುತ್ತೋ ಗೊತ್ತಿಲ್ಲ. ಆದರೆ, ನಾವು ಮಾತ್ರ ಈಗಿನಿಂದಲೇ ಸಜ್ಜಾಗುತ್ತಿದ್ದೇವೆ’ ಎಂದು ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡರು ತಿಳಿಸಿದ್ದಾರೆ. ಜೆಪಿ ಭವನದಲ್ಲಿ ಬುಧವಾರ ನಡೆದ ವಿಧಾನಸಭಾ ಪರಾಜಿತ ಅಭ್ಯರ್ಥಿಗಳ ಆತ್ಮಾವಲೋಕನ ಸಭೆಯಲ್ಲಿ ಮಾತನಾಡಿದರು. ರಾಜ್ಯ ಪ್ರವಾಸ ಮಾಡಲು ಎಲ್ಲ ನಾಯಕರಿಗೆ ಸೂಚನೆ ಕೊಟ್ಟಿದ್ದೇನೆ.
ಎಚ್.ಡಿ.ಕುಮಾರಸ್ವಾಮಿಯವರ 14 ತಿಂಗಳ ಸಾಧನೆ ಮನೆ ಮನೆಗೆ ತಲುಪಿಸುವ ನಿರ್ದೇಶನ ನೀಡಿದ್ದೇನೆ. ಆ. 7ರಂದು ಬೆಂಗಳೂರಿನಲ್ಲಿ ಜೆಡಿಎಸ್ ಸಮಾ ವೇಶ ಆಯೋಜಿಸಲಾಗಿದ್ದು, ಅಲ್ಲಿ ನೂತನ ಜಿಲ್ಲಾ ಅಧ್ಯಕ್ಷರ ನೇಮಕ ಮಾಡಲಾಗುವುದು ಎಂದರು. ಸ್ಥಳೀಯ ಸಂಸ್ಥೆಗಳ ಚುನಾವಣೆಗಳಲ್ಲಿ ಯಾವುದೇ ಹೊಂದಾಣಿಕೆ ಬೇಡ ಎಂಬ ಅಭಿಪ್ರಾಯ ವ್ಯಕ್ತವಾಗಿದೆ. ಪಕ್ಷದ ನಾಯಕರನ್ನು ವಿಶ್ವಾಸಕ್ಕೆ ಪಡೆದು ಕ್ರಮ ಕೈಗೊಳ್ಳುವೆ ಎಂದರು.
ಜೆಡಿಎಸ್ನ ಮೂವರು ಉಚ್ಚಾಟನೆ: ರಾಜೀನಾಮೆ ನೀಡಿ ಅನರ್ಹಗೊಂಡಿರುವ ಜೆಡಿಎಸ್ನ ಮೂವರು ಶಾಸಕರನ್ನು ಪಕ್ಷದಿಂದಲೂ ಉಚ್ಚಾಟನೆ ಮಾಡಲಾಗಿದೆ. ಹುಣಸೂರು ಕ್ಷೇತ್ರದ ಅಡಗೂರು ಎಚ್.ವಿಶ್ವನಾಥ್, ಮಹಾಲಕ್ಷ್ಮಿ ಲೇಔಟ್ನ ಕೆ.ಗೋಪಾಲಯ್ಯ, ಕೆ.ಆರ್.ಪೇಟೆಯ ಕೆ.ಸಿ.ನಾರಾಯಣಗೌಡ ಅವರನ್ನು ಉಚ್ಚಾಟಿಸಲಾಗಿದೆ ಎಂದು ದೇವೇಗೌಡರು ತಿಳಿಸಿದ್ದಾರೆ.