ಭೀಕರ ಪ್ರವಾಹದ ಆತಂಕ
ಧಾರಾಕಾರ ಮಳೆಗೆ ಕೃಷ್ಣಾ ನದಿಗೆ ವ್ಯಾಪಕ ಪ್ರಮಾಣದ ನೀರು
Team Udayavani, Aug 3, 2019, 10:48 AM IST
ಬೆಳಗಾವಿ: ಚಿಕ್ಕೋಡಿ ತಾಲೂಕಿನ ಯಡೂರು ಗ್ರಾಮದಲ್ಲಿ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚಳ ಕುರಿತು ಸರಕಾರ ಎಚ್ಚರಿಕೆ ಸೂಚನಾ ಫಲಕ.
ಬೆಳಗಾವಿ: ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಧಾರಾಕಾರ ಮಳೆ, ಜಲಾಶಯಗಳಿಂದ ಕೃಷ್ಣಾ ನದಿಗೆ ವ್ಯಾಪಕ ಪ್ರಮಾಣದಲ್ಲಿ ಹರಿದು ಬರುತ್ತಿರುವ ನೀರು ಬೆಳಗಾವಿ ಜಿಲ್ಲೆಯ ನದಿ ತೀರದ ಮೂರು ತಾಲೂಕುಗಳಲ್ಲಿ 13 ವರ್ಷಗಳ ಹಿಂದಿನ ಭೀಕರ ಪ್ರವಾಹದ ನೆನಪು ಮಾಡುತ್ತಿದೆ.
ನದಿಯ ನೀರಿನ ಮಟ್ಟ ಏರುತ್ತಿರುವಂತೆ ನದಿ ದಡದ ಮೇಲಿರುವ ಗ್ರಾಮಗಳ ಜನರ ಆತಂಕ ಸಹ ಕ್ಷಣ ಕ್ಷಣಕ್ಕೂ ಹೆಚ್ಚುತ್ತಿದೆ. ಜನರನ್ನು ಸುರಕ್ಷಿತ ಸ್ಥಳಕ್ಕೆ ಸ್ಥಳಾಂತರಿಸಲು ಜಿಲ್ಲಾಡಳಿತ ಎಲ್ಲ ಕ್ರಮಗಳನ್ನು ಕೈಗೊಂಡಿದ್ದರೂ ಜನರ ಮನಸ್ಸಿನಿಂದ ಭೀಕರ ಪ್ರವಾಹದ ಆತಂಕ ಮಾತ್ರ ದೂರವಾಗಿಲ್ಲ.
ಬೆಳಗಾವಿ ಜಿಲ್ಲೆಯ ಮೂರು ತಾಲೂಕುಗಳಿಗೆ ಆತಂಕ ಉಂಟುಮಾಡುವ ಮಹಾರಾಷ್ಟ್ರದ ಕೊಯ್ನಾ ಹಾಗೂ ವಾರಣಾ ಜಲಾಶಯಗಳು ಇನ್ನೂ ತುಂಬಿಕೊಂಡಿಲ್ಲ. ಆದರೆ ಮುನ್ನೆಚ್ಚರಿಕೆ ಕ್ರಮವಾಗಿ ಈ ಜಲಾಶಯಗಳಿಂದ ನೀರು ಬಿಡುಗಡೆ ಮಾಡುವ ಪ್ರಕ್ರಿಯೆ ಆರಂಭವಾಗಿದೆ. ಇದಲ್ಲದೇ ಜಲಾಶಯ ವ್ಯಾಪ್ತಿಯ ಪ್ರದೇಶಗಳಲ್ಲಿ ಭಾರೀ ಮಳೆಯಾಗುತ್ತಿರುವುದರಿಂದ ಕೃಷ್ಣಾ ನದಿ ನೀರಿನ ಮಟ್ಟ ಹೆಚ್ಚುತ್ತಲೆ ಹೋಗುತ್ತಿರುವುದು ಆತಂಕಕ್ಕೆ ಎಡೆಮಾಡಿಕೊಟ್ಟಿದೆ.
ಒಟ್ಟು 100 ಟಿಎಂಸಿ ಸಾಮರ್ಥ್ಯದ ಕೊಯ್ನಾ ಜಲಾಶಯದಲ್ಲಿ ಈಗ 82 ಟಿಎಂಸಿ ನೀರು ಸಂಗ್ರಹವಾಗಿದ್ದರೆ 34 ಟಿಎಂಸಿ ಸಾಮರ್ಥ್ಯದ ವಾರಣಾ ಜಲಾಶಯದಲ್ಲಿ 30 ಟಿಎಂಸಿ ನೀರು ಸಂಗ್ರಹವಾಗಿದೆ. ಆದರೆ ರಾಧಾನಗರಿ, ಕನೇರಿ, ಧೂಮ್ ಜಲಾಶಯಗಳಿಂದ ರಾಜಾಪುರ ಬ್ಯಾರೇಜ್ಗೆ ಅಪಾರ ಪ್ರಮಾಣದಲ್ಲಿ ನೀರು ಬರುತ್ತಿರುವುದರಿಂದ ಕೃಷ್ಣಾ ಅಪಾಯಮಟ್ಟದಲ್ಲಿ ಹರಿದು ಪ್ರವಾಹದ ಸ್ಥಿತಿ ನಿರ್ಮಾಣವಾಗಿದೆ.
37 ಗ್ರಾಮಗಳಲ್ಲಿ ಪ್ರವಾಹದ ಭೀತಿ: ಮಹಾರಾಷ್ಟ್ರದಲ್ಲಿ ಈಗಲೂ ಮಳೆ ಮುಂದುವರಿದಿದೆ. ಅಲ್ಲಿನ ಜಲಾಶಯಗಳಿಗೆ ಸಾಕಷ್ಟು ನೀರು ಹರಿದು ಬರುತ್ತಿದೆ. ಒಂದು ವೇಳೆ ಮಹಾರಾಷ್ಟ್ರದ ಜಲಾಶಯಗಳಿಂದ ದಿಢೀರ್ ನೀರು ಬಿಟ್ಟರೆ ಕೃಷ್ಣಾ, ವೇದಗಂಗಾ, ಪಂಚಗಂಗಾ ನದಿಗಳ ಪಾತ್ರದಲ್ಲಿರುವ ಚಿಕ್ಕೋಡಿ ಉಪ ವಿಭಾಗದ 37 ಗ್ರಾಮಗಳು ಪ್ರವಾಹದಿಂದ ತೀವ್ರವಾಗಿ ಬಾಧಿತಗೊಳ್ಳಲಿವೆ. ಅದೇ ರೀತಿ 39 ಗ್ರಾಮಗಳು ಪ್ರವಾಹದಿಂದ ಭಾಗಶಃ ಬಾಧಿತಗೊಳ್ಳುವ ಸಾಧ್ಯತೆಯಿದೆ ಎಂಬುದು ಚಿಕ್ಕೋಡಿ ಉಪ ವಿಭಾಗಾಧಿಕಾರಿ ರವಿ ಕರಲಿಂಗಣ್ಣವರ ಹೇಳಿಕೆ.
2005ರಲ್ಲಿ ಉಂಟಾದ ಪ್ರವಾಹ ಸ್ಥಿತಿ ನೋಡಿಕೊಂಡು ಅದರ ಆಧಾರದ ಮೇಲೆ 37 ಗ್ರಾಮಗಳನ್ನು ಗುರುತಿಸಲಾಗಿದ್ದು ಮುನ್ನೆಚ್ಚರಿಕೆ ಕ್ರಮವಾಗಿ ಜನರ ಸುರಕ್ಷಿತ ಸ್ಥಳಾಂತರಕ್ಕೆ ಕ್ರಮ ಕೈಗೊಳ್ಳಲಾಗಿದೆ. ಜನರೂ ಸಹ ಸ್ವಯಂ ಪ್ರೇರಣೆಯಿಂದ ಸುರಕ್ಷಿತ ಸ್ಥಳಕ್ಕೆ ತೆರಳುತ್ತಿದ್ದಾರೆ ಎಂಬುದು ಅಧಿಕಾರಿಗಳ ಹೇಳಿಕೆ.
ಮಹಾರಾಷ್ಟ್ರದಲ್ಲಿನ ಮಳೆಯಿಂದ ರಾಜಾಪುರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಎರಡು ಲಕ್ಷ ಕ್ಯೂಸೆಕ್ ನೀರು ಬರುತ್ತಿದ್ದು ಇದು ಇನ್ನೂ ಹೆಚ್ಚಾಗುವ ಸಾಧ್ಯತೆ ಇದೆ. ನೀರು ಬಿಡುಗಡೆ ಹಾಗೂ ಮಳೆಯ ಸ್ಥಿತಿಗತಿ ಕುರಿತಂತೆ ಮಹಾರಾಷ್ಟ್ರದ ಅಧಿಕಾರಿಗಳ ಜೊತೆ ನಿರಂತರ ಸಂಪರ್ಕದಲ್ಲಿದ್ದೇವೆ. ನೀರು ಬಿಡುಗಡೆ ಮಾಡುವ ಮೊದಲು ಮಾಹಿತಿ ನೀಡಲಾಗುವುದು ಎಂದು ಮಹಾರಾಷ್ಟ್ರದ ಅಧಿಕಾರಿಗಳು ಸಹ ಹೇಳಿದ್ದಾರೆ. ಆದರೂ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಲಾಗಿದೆ ಎಂದು ಉಪವಿಭಾಗಾಧಿಕಾರಿ ಹೇಳಿದರು.
ಎಲ್ಲಕ್ಕಿಂತ ಮುಖ್ಯವಾಗಿ ಮಹಾರಾಷ್ಟ್ರ ಹಾಗೂ ಕರ್ನಾಟಕ ಸರಕಾರದ ನಡುವಿನ ಮಾಹಿತಿ ಸಂಪರ್ಕದ ಕೊರತೆಯಿಂದಾಗಿ ಕೊಯ್ನಾ, ವಾರಣಾ ಮೊದಲಾದ ಜಲಾಶಯಗಳಿಂದ ರಾಜಾಪುರ ಬ್ಯಾರೇಜ್ ಮೂಲಕ ಕೃಷ್ಣಾ ನದಿಗೆ ಐದು ಲಕ್ಷ ಕ್ಯೂಸೆಕ್ಗೂ ಅಧಿಕ ನೀರು ಹರಿದುಬಂದಿತ್ತು. ಒಮ್ಮೆಲೇ ಇಷ್ಟು ಪ್ರಮಾಣದಲ್ಲಿ ನೀರು ಬಂದಿದ್ದರಿಂದ ಚಿಕ್ಕೋಡಿ, ರಾಯಬಾಗ ಹಾಗೂ ಅಥಣಿ ತಾಲೂಕಿನ ನದಿ ತೀರದ 35 ಕ್ಕೂ ಹೆಚ್ಚು ಹಳ್ಳಿಗಳು ಸಂಪೂರ್ಣ ಮುಳುಗಡೆಯಾಗಿದ್ದವು. ಈ ಭಯ ಇನ್ನೂ ನದಿ ಭಾಗದ ಜನರ ಮನಸ್ಸಿನಲ್ಲಿದೆ.
ಈಗ ಮಹಾರಾಷ್ಟ್ರದಲ್ಲಿ ಸುರಿಯುತ್ತಿರುವ ಮಳೆ, ರಾಜಾಪುರ ಬ್ಯಾರೇಜ್, ಪಂಚಗಂಗಾ ನದಿಯಿಂದ ಬರುತ್ತಿರುವ ನೀರು ಕರಾಳ ಪ್ರವಾಹದ ಅನುಭವ ನೆನಪು ಮಾಡುತ್ತಿದೆ. 2005-06 ಪ್ರವಾಹದ ಭೀಕರತೆ ಕಾಣದೇ ಇದ್ದರೂ ನೀರಿನ ರಭಸ ಪ್ರವಾಹದ ಭೀತಿ ಹುಟ್ಟಿಸಿದೆ.
• ಕೇಶವ ಆದಿ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Madhya Pradesh; ರಾಹುಲ್ ಗಾಂಧಿ ಭೇಟಿ ನಡುವೆ, ಬಿಜೆಪಿ ಸೇರಿದ ಕಾಂಗ್ರೆಸ್ ಶಾಸಕ!
Kodaikanal – Ooty ಪ್ರವಾಸಕ್ಕೆ ಇ-ಪಾಸ್ ಕಡ್ಡಾಯ: ಹೈಕೋರ್ಟ್
Muslim ಉತ್ತರಾಧಿಕಾರಕ್ಕೆ ಜಾತ್ಯತೀತ ಕಾಯ್ದೆ ಜಾರಿ: ಸುಪ್ರೀಂಕೋರ್ಟ್ ಚರ್ಚೆ
“Siddaramaiah- H.D. Revanna ನಡುವೆ ಒಪ್ಪಂದಕ್ಕೆ ಎಫ್ಐಆರ್ ಹಾಕಲಿಲ್ಲವೇ?’
Fazal ur Rehman; ಭಾರತ ಸೂಪರ್ಪವರ್, ನಾವು ಭಿಕ್ಷೆ ಬೇಡುತ್ತಿದ್ದೇವೆ: ಪಾಕಿಸ್ಥಾನ ಸಂಸದ