ಸುಧಾಕರ್ ಮೇಲೆ ಹಲ್ಲೆ: ತನಿಖೆ ಕೋರಿ ಅರ್ಜಿ
Team Udayavani, Aug 7, 2019, 3:04 AM IST
ಬೆಂಗಳೂರು: ಚಿಕ್ಕಬಳ್ಳಾಪುರ ಕ್ಷೇತ್ರದ ಅನರ್ಹ ಶಾಸಕ ಡಾ. ಕೆ ಸುಧಾಕರ್ ಅವರ ಮೇಲೆ ವಿಧಾನಸೌಧದಲ್ಲಿ 2019ರ ಜುಲೈ 10ರಂದು ನಡೆದ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಎಫ್ಐಆರ್ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ವಿಧಾನಸೌಧ ಪೊಲೀಸರಿಗೆ ನಿರ್ದೇಶಿಸುವಂತೆ ಕೋರಿ ಹೈಕೋರ್ಟ್ಗೆ ವಕೀಲ ಎನ್.ಪಿ. ಅಮೃತೇಶ್ ಅರ್ಜಿ ಸಲ್ಲಿಸಿದ್ದಾರೆ.
ಶಾಸಕ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲು ಸುಧಾಕರ್ ಜು.10ರಂದು ವಿಧಾನಸೌಧಕ್ಕೆ ಬಂದಾಗ ಅವರನ್ನು ಬಲವಂತವಾಗಿ ಕೆಲವು ಶಾಸಕರು ಹಾಗೂ ಇತರರು ಸಚಿವ ಕೆ.ಜೆ. ಜಾರ್ಜ್ ಅವರ ಕಚೇರಿಗೆ ಎಳೆದುಕೊಂಡು ಹೋಗಿದ್ದಾರೆ. ಈ ವೇಳೆ ಸುಧಾಕರ್ ಮೇಲೆ ದೈಹಿಕ ಹಲ್ಲೆ ನಡೆಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿದೆ.
ಆ ಸಂದರ್ಭದಲ್ಲಿ ಸಾಕಷ್ಟು ಸಂಖ್ಯೆಯಲ್ಲಿ ಪೊಲೀಸರು ಇದ್ದರು. ಆದರೆ, ಹಲ್ಲೆ ನಡೆಸಿದವರ ವಿರುದ್ಧ ಯಾವುದೇ ಕ್ರಮ ಕೈಗೊಂಡಿಲ್ಲ. ಅಲ್ಲದೇ ಶಾಸಕರಿಗೆ ರಕ್ಷಣೆ ನೀಡುವಂತಹ ಕೆಲಸ ಸಹ ಮಾಡಿಲ್ಲ. ಈ ಬಗ್ಗೆ ವಿಧಾನಸೌಧ ಪೊಲೀಸರಿಗೆ ದೂರು ಕೊಟ್ಟರೂ, ಈವರೆಗೆ ಎಫ್ಐಆರ್ ದಾಖಲಿಸಿಕೊಂಡಿಲ್ಲ ಮತ್ತು ತನಿಖೆ ನಡೆಸಿಲ್ಲ. ಆದ್ದರಿಂದ ಎಫ್ಐಆರ್ ದಾಖಲಿಸಿಕೊಂಡು ಸೂಕ್ತ ತನಿಖೆ ನಡೆಸುವಂತೆ ಸಂಬಂಧಪಟ್ಟ ಪೊಲೀಸರಿಗೆ ನಿರ್ದೇಶಿಸುವಂತೆ ಅರ್ಜಿದಾರರು ಕೋರಿದ್ದಾರೆ.