ಕೇಂದ್ರ ಸರಕಾರದ ಮೇಲೆ ಸಂಪೂರ್ಣ ನಂಬಿಕೆ ಇದೆ: ಕೇಜ್ರಿವಾಲ್
ಆರ್ಥಿಕ ಹಿಂಜರಿಕೆ ವಿರುದ್ಧ ಅದು ಸೂಕ್ತ ಕ್ರಮ ಕೈಗೊಳ್ಳುವ ಭರವಸೆ
Team Udayavani, Aug 23, 2019, 7:20 PM IST
ಹೊಸದಿಲ್ಲಿ: ಆರ್ಥಿಕ ಕುಸಿತದ ಬಗ್ಗೆ ಪ್ರತಿಪಕ್ಷಗಳ ನಾಯಕರು ಕೇಂದ್ರ ಸರಕಾರದ ವಿರುದ್ಧ ಹರಿಹಾಯುತ್ತಿದ್ದರೆ, ಅಚ್ಚರಿ ಎಂಬಂತೆ ಪ್ರಧಾನಿ ನರೇಂದ್ರ ಮೋದಿ ಅವರನ್ನು ಶತಾಯಗತಾಯ ಟೀಕಿಸುತ್ತಿದ್ದ ಆಮ್ ಆದ್ಮಿ ಪಕ್ಷದ ಮುಖಂಡ, ದಿಲ್ಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಸರಕಾರದ ಮೇಲೆ ತಮಗೆ ಸಂಪೂರ್ಣ ನಂಬಿಕೆ ಇದೆ ಎಂದು ಹೇಳಿದ್ದಾರೆ.
ಆರ್ಥಿಕ ಕುಸಿತ ತಡೆಯಲು ಅದು ಪರಿಣಾಮಕಾರಿ ಹೆಜ್ಜೆಗಳನ್ನು ಇಡಲಿದೆ ಎಂಬ ಭರವಸೆ ಹೊಂದಿದ್ದೇನೆ ಎಂದು ಹೇಳಿದ್ದಾರೆ. ಅಲ್ಲದೇ ಈ ಹೊತ್ತಿನಲ್ಲಿ ಇಡೀ ದೇಶ ಒಂದಾಗಿ ನಿಲ್ಲಬೇಕಿದೆ ಎಂದು ಹೇಳಿದ್ದಾರೆ. ಆರ್ಥಿಕ ವಿಚಾರದಲ್ಲಿ ಕೇಂದ್ರ ಕೈಗೊಳ್ಳುವ ಕಾರ್ಯಕ್ರಮಗಳಿಗೆ ದಿಲ್ಲಿ ಸರಕಾರದ ಸಂಪೂರ್ಣ ಬೆಂಬಲ ಇದೆ. ಉದ್ಯೋಗ ನಷ್ಟದ ಬಗ್ಗೆ ನನಗೆ ವೈಯಕ್ತಿಕವಾಗಿ ಚಿಂತೆಯಾಗಿದೆ ಎಂದು ಹೇಳಿದ್ದಾರೆ. ಕಾರ್ಯಕ್ರಮವೊಂದರ ಬಳಿಕ ಅವರು ಮಾಧ್ಯಮವರೊಂದಿಗೆ ಮಾತನಾಡುತ್ತ ಹೀಗೆ ಹೇಳಿದ್ದಾರೆ.