1.43ಲಕ್ಷ ಕ್ಯೂಸೆಕ್ ನೀರು ಕೃಷ್ಣಾ ನದಿಗೆ
Team Udayavani, Sep 8, 2019, 5:55 PM IST
ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಕಳೆದ ಐದು ದಿನಗಳಿಂದ ನಿರಂತರ ಒಳಹರಿವು ಹರಿದು ಬರುತ್ತಿರುವುದರಿಂದ ಶನಿವಾರ ಮಧ್ಯಾಹ್ನ 2:00 ಗಂಟೆಗೆ ಜಲಾಶಯದ 14 ಕ್ರಸ್ಟ್ಗೇಟ್ ತೆರೆದು 1 ಲಕ್ಷ 43 ಸಾವಿರ ಕ್ಯೂಸೆಕ್ ನೀರನ್ನು ಕೃಷ್ಣಾ ನದಿ ಪಾತ್ರಕ್ಕೆ ಹರಿಬಿಡಲಾಗಿದೆ.
ಪ್ರಸ್ತುತ ಆಲಮಟ್ಟಿ ಜಲಾಶಯದಿಂದ ಬಸವಸಾಗರ ಜಲಾಶಯಕ್ಕೆ ಒಳಹರಿವು 1ಲಕ್ಷ 60 ಸಾವಿರ ಕ್ಯೂಸೆಕ್ ಪ್ರಮಾಣದಲ್ಲಿದ್ದು, 491.94 ಮೀಟರ್ಗೆ ನೀರು ಬಂದು ತಲುಪಿದೆ. 31 ಟಿಎಂಸಿ ಅಡಿ ನೀರು ಸಂಗ್ರಹವಿದೆ.
ಕಳೆದ ನಾಲ್ಕೈದು ದಿನಗಳಿಂದ ಉಭಯ ಜಲಾಶಯಗಳಿಗೆ ಹರಿದು ಬರುತ್ತಿರುವ ಒಳಹರಿವಿನ ಪ್ರಮಾಣ ಗಮನಿಸುತ್ತಿರುವ ಅಣೆಕಟ್ಟು ಅಧಿಕಾರಿಗಳು ಜಲಾಶಯಕ್ಕೆ ಒಳಹರಿವು ಹೆಚ್ಚಾದರೆ ಮುಂಜಾಗ್ರತಾ ಕ್ರಮವಾಗಿ ನದಿ ಪಾತ್ರಕ್ಕೆ ನೀರು ಹರಿಸುವ ಪ್ರಮಾಣ ಹೆಚ್ಚಿಗೆ ಮಾಡುತ್ತಿದ್ದಾರೆ. ಒಂದೊಮ್ಮೆ ಕಡಿಮೆಯಾದರೆ ಹೊರ ಹರಿವನ್ನು ಕಡಿಮೆಗೊಳಿಸುವ ಪ್ರಕ್ರಿಯೆ ನಿರಂತವಾಗಿ ಮಾಡಲಾಗುತ್ತಿದೆ. ಒಳಹರಿವಿನ ಪ್ರಮಾಣ ಇನ್ನೂ ಹೆಚ್ಚಾದರೆ ನಾರಾಯಣಪುರ ಜಲಾಶಯದಿಂದ ಹೆಚ್ಚಿನ ಪ್ರಮಾಣದಲ್ಲಿ ನದಿ ತೀರಕ್ಕೆ ನೀರು ಹರಿಬಿಡಲಾಗುತ್ತಿದೆ. ಕಾರಣ ನದಿ ಪಾತ್ರದ ಗ್ರಾಮಗಳ ಜನ, ಜಾನುವಾರುಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ಡ್ಯಾಂ ಅಧಿಕಾರಿಗಳು ಎಚ್ಚರಿಕೆ ಸಂದೇಶ ನೀಡಿದ್ದಾರೆ.