ಡಿ.ಕೆ.ಶಿವಕುಮಾರ್ಗೆ ಮುಂದುವರಿದ ಚಿಕಿತ್ಸೆ
Team Udayavani, Sep 16, 2019, 3:05 AM IST
ಬೆಂಗಳೂರು: ಅಕ್ರಮ ಹಣ ವರ್ಗಾವಣೆ ಆರೋಪದಲ್ಲಿ ಜಾರಿ ನಿರ್ದೇಶನಾಲಯದ ವಶದಲ್ಲಿರುವ ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಅವರಿಗೆ ದಿಲ್ಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರಿಸಲಾಗಿದೆ. ಜ್ವರ ಮತ್ತು ರಕ್ತದೊತ್ತಡ ಹೆಚ್ಚಾದ ಹಿನ್ನೆಲೆಯಲ್ಲಿ ಶನಿವಾರ ಮಧ್ಯಾಹ್ನ ನವದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು. ಬಿಪಿ ನಿಯಂತ್ರಣಕ್ಕೆ ಬಂದಿದ್ದರೂ, ಜ್ವರ ಕಡಿಮೆಯಾಗದ ಹಿನ್ನೆಲೆಯಲ್ಲಿ ಅಡ್ಮಿಟ್ ಆಗಲು ವೈದ್ಯರು ಸೂಚಿಸಿದ್ದರು.
ಶನಿವಾರ ರಾತ್ರಿ ಆಸ್ಪತ್ರೆಗೆ ಭೇಟಿ ನೀಡಿ ಅವರ ಮಗಳು ಐಶ್ವರ್ಯ ಆರೋಗ್ಯ ವಿಚಾರಿಸಿದ್ದರು. ಜ್ವರ ಹಾಗೂ ಕೆಮ್ಮಿನಿಂದ ಬಳಲುತ್ತಿದ್ದ ಡಿ.ಕೆ.ಶಿವಕುಮಾರ್ ಅವರಿಗೆ ಎದೆ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಭಾನುವಾರ ಕಾರ್ಡಿಯಾ ಕೇರ್ ಯುನಿಟ್ ವಾರ್ಡ್ಗೆ ಸ್ಥಳಾಂತರಿಸಲಾಗಿದೆ. ಕುಣಿಗಲ್ ಶಾಸಕ ಡಾ.ರಂಗನಾಥ್ ಅವರು ಡಿ.ಕೆ.ಶಿವಕುಮಾರ್ ಅವರ ಕುಟುಂಬದ ವೈದ್ಯರಾಗಿ ಜತೆಯಲ್ಲಿದ್ದಾರೆ. ಡಾ.ರಂಗನಾಥ್ ಅವರನ್ನು ಹೊರತುಪಡಿಸಿ, ಇ.ಡಿ ಅಧಿಕಾರಿಗಳು ಬೇರೆ ಯಾರಿಗೂ ಶಿವಕುಮಾರ್ ಭೇಟಿಗೆ ಅವಕಾಶ ನೀಡುತ್ತಿಲ್ಲ.