“ಕಚೇರಿಗಳ ಸ್ಥಳಾಂತರ ಪ್ರಗತಿಯಲ್ಲಿ’
Team Udayavani, Sep 18, 2019, 3:00 AM IST
ಬೆಂಗಳೂರು: “ಸರ್ಕಾರದ ವಿವಿಧ ಇಲಾಖೆಗಳ 9 ಕಚೇರಿಗಳನ್ನು ಉತ್ತರ ಕರ್ನಾಟಕ ಭಾಗದ ಜಿಲ್ಲೆಗಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ’ ಎಂದು ರಾಜ್ಯ ಸರ್ಕಾರ ಹೈಕೋರ್ಟ್ಗೆ ಸೋಮವಾರ ಮಾಹಿತಿ ನೀಡಿದೆ. ಈ ಕುರಿತು ವಕೀಲೆ ಸುಧಾ ಕಾಟವ ಸಲ್ಲಿಸಿದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯು ಮುಖ್ಯ ನ್ಯಾಯಮೂರ್ತಿ ಎ.ಎಸ್. ಓಕ್ ಹಾಗೂ ನ್ಯಾ. ಮೊಹಮ್ಮದ್ ನವಾಜ್ ಅವರಿದ್ದ ವಿಭಾಗೀಯ ಪೀಠದ ಮುಂದೆ ವಿಚಾರಣೆಗೆ ಬಂದಿತ್ತು.
ಈ ವೇಳೆ ಅರ್ಜಿಗೆ ಸಂಬಂಧಿಸಿದಂತೆ ಆಕ್ಷೇಪಣಾ ಹೇಳಿಕೆ ಸಲ್ಲಿಸಿದ ಸರ್ಕಾರದ ಪರ ವಕೀಲರಾದ ಬಿ.ವಿ. ಕೃಷ್ಣ, ಒಂಭತ್ತು ಕಚೇರಿಗಳ ಪೈಕಿ ಈಗಾಗಲೇ ಪುರಾತತ್ವ ಇಲಾಖೆಯ ನಿರ್ದೇಶಕರ ಕಚೇರಿಯನ್ನು ಬಳ್ಳಾರಿ ಜಿಲ್ಲೆಯ ಹಂಪಿಗೆ ಪೂರ್ಣ ಪ್ರಮಾಣದಲ್ಲಿ ಸ್ಥಳಾಂತರಿಸಲಾಗಿದೆ. ಆದರೆ, ಆಯೋಗದ ಆಕ್ಷೇಪದ ಹಿನ್ನೆಲೆಯಲ್ಲಿ ಮಾನವ ಹಕ್ಕು ಆಯೋಗದ ಓರ್ವ ಸದಸ್ಯರ ಕಚೇರಿಯನ್ನು ಧಾರವಾಡಕ್ಕೆ ಸ್ಥಳಾಂತರಿಸುವುದನ್ನು ಕೈಬಿಡಲಾಗಿದೆ.
ಉಳಿದಂತೆ ಕೃಷ್ಣಾಭಾಗ್ಯ ಜಲ ನಿಗಮದ ಕಚೇರಿ-ಆಲಮಟ್ಟಿ, ಕರ್ನಾಟಕ ನೀರಾವರಿ ನಿಗಮ-ದಾವಣಗೆರೆ, ಕರ್ನಾಟಕ ರಾಜ್ಯ ಜವಳಿ ಮೂಲಸೌಲಭ್ಯ ಅಭಿವೃದ್ಧಿ ನಿಗಮ-ಬೆಳಗಾವಿ, ಸಕ್ಕರೆ ನಿರ್ದೇಶಕರು ಹಾಗೂ ಕಬ್ಬು ಅಭಿವೃದ್ಧಿ ಆಯುಕ್ತರ ಕೇಂದ್ರ ಕಚೇರಿ-ಬೆಳಗಾವಿ, ಕರ್ನಾಟಕ ನಗರ ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಪ್ರತ್ಯೇಕ ಕಚೇರಿ-ಹುಬ್ಬಳ್ಳಿಗೆ ಸ್ಥಳಾಂತರಿಸುವ ಪ್ರಕ್ರಿಯೆ ಪ್ರಗತಿಯಲ್ಲಿದೆ ಎಂದರು.