ಪಕ್ಷ ಸಂಘಟನೆ: ಬಿಎಸ್ವೈ ಜತೆ ನಳಿನ್ ಚರ್ಚೆ
Team Udayavani, Oct 4, 2019, 5:01 AM IST
ಬೆಂಗಳೂರು: ರಾಜ್ಯ ಬಿಜೆಪಿ ಅಧ್ಯಕ್ಷ ನಳಿನ್ ಕುಮಾರ್ ಕಟೀಲು ಅವರು ಗುರುವಾರ ಬೆಳಗ್ಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಪಕ್ಷ ಸಂಘಟನೆ ಮತ್ತು ಉಪಚುನಾವಣೆ ಅಭ್ಯರ್ಥಿ ಆಯ್ಕೆ ಸಹಿತ ಅನೇಕ ವಿಷಯಗಳ ಕುರಿತು ಅರ್ಧಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದರು.
ಸಿಎಂ ಯಡಿಯೂರಪ್ಪ ಅವರ ಮನೆಗೆ ಭೇಟಿ ಸದ್ಯದ ರಾಜ್ಯ ರಾಜಕೀಯ ಪರಿಸ್ಥಿತಿ, ಬೂತ್ ಮಟ್ಟದಿಂದ ಪಕ್ಷ ಸಂಘಟನೆ, ಹೊಸ ಪದಾಧಿಕಾರಿಗಳ ನೇಮಕ ಸಹಿತವಾಗಿ ಹಲವು ವಿಷಯಗಳ ಕುರಿತು ಗಂಭೀರ ಚರ್ಚೆ ನಡೆಸಿದ್ದಾರೆ.
ಅನಂತರ ಮಾತನಾಡಿದ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ, ಮುಂದಿನ ರಾಜಕೀಯ ಬೆಳವಣಿಗೆ ಮತ್ತು ಉಪಚುನಾವಣೆ ಸಹಿತವಾಗಿ ಪಕ್ಷವನ್ನು ಯಾವ ರೀತಿ ಬಲಪಡಿಸಬೇಕಿದೆ ಎಂಬುದನ್ನು ಚರ್ಚೆ ಮಾಡಿದ್ದೇವೆ. ಬೇರೆ ಬೇರೆ ಕಾರಣಕ್ಕಾಗಿ ಪಕ್ಷ ಬಿಟ್ಟು ಹೋದವರನ್ನು ಪಕ್ಷಕ್ಕೆ ವಾಪಸ್ ಕರೆಯುತ್ತಿದ್ದೇವೆ. ಎಲ್ಲರನ್ನೂ ಒಗ್ಗೂಡಿಸಿ ಪಕ್ಷ ಕಟ್ಟಲು ಮುಂದಾಗಿದ್ದೇವೆ ಎಂದು ಪಕ್ಷ ತ್ಯಜಿಸಿದವರಿಗೆ ಕರೆ ನೀಡಿದರು.
ಅನರ್ಹರಿಗೆ ಅನ್ಯಾಯವಾಗಲು ಬಿಡಲ್ಲ
ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲು ಮಾತನಾಡಿ, ಅನರ್ಹ ಶಾಸಕರಿಗೆ ಅನ್ಯಾಯ ಆಗಲು ಬಿಡುವುದಿಲ್ಲ. ಅನರ್ಹರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ. ಉಪಚುನಾವಣೆ ಟಿಕೆಟ್ ವಿಚಾರದಲ್ಲಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ, ಸಿಎಂ ಯಡಿಯೂರಪ್ಪ ಮತ್ತು ನಾನು ಕುಳಿತು ಚರ್ಚಿಸಿ ತೀರ್ಮಾನಿಸುತ್ತೇವೆ. ಸುಪ್ರೀಂ ಕೋರ್ಟ್ ತೀರ್ಪು ಏನೇ ಬಂದರೂ ಅನರ್ಹರಿಗೆ ಅನ್ಯಾಯ ಆಗದಂತೆ ನೋಡಿಕೊಳ್ಳುತ್ತೇವೆ. ನಮ್ಮಿàರ್ವರ ಮಧ್ಯೆ ಯಾವುದೇ ಗೊಂದಲ ಇಲ್ಲ ಎಂದರು.