ರೈಲ್ವೆಯಲ್ಲಿ ಕನ್ನಡಕ್ಕೆ ಆದ್ಯತೆ
Team Udayavani, Oct 30, 2019, 3:03 AM IST
ಬೆಳಗಾವಿ: “ರೈಲ್ವೆ ಇಲಾಖೆಯಲ್ಲಿ ಪ್ರಾದೇಶಿಕ ಭಾಷೆಯಾಗಿ ಕನ್ನಡ ಜಾರಿಗೆ ತರಲು ಅಗತ್ಯ ಕ್ರಮ ಕೈಗೊಳ್ಳಲಾಗುವುದು’ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ ಅಂಗಡಿ ಹೇಳಿದರು. ನಗರದಲ್ಲಿ ಸುದ್ದಿಗಾರರ ಜತೆ ಮಾತನಾಡಿ, ಈಗಾಗಲೇ ರಾಜ್ಯದ ಎಲ್ಲ ರೈಲ್ವೆ ನಿಲ್ದಾಣಗಳಲ್ಲಿ ಕನ್ನಡದಲ್ಲೇ ಮಾಹಿತಿ ನೀಡಲಾಗುತ್ತಿದೆ. ಇದಲ್ಲದೇ ಕನ್ನಡದಲ್ಲಿ ಪತ್ರಿಕಾ ಹೇಳಿಕೆಗಳನ್ನು ಸಹ ಬಿಡುಗಡೆಗೊಳಿಸಲಾಗುತ್ತಿದೆ. ಕನ್ನಡ ಭಾಷೆ ಬಲ್ಲ ಹೆಚ್ಚಿನ ಸಂಖ್ಯೆಯ ಅಧಿಕಾರಿಗಳು ರಾಜ್ಯದಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.
ಮುಂಬರುವ ದಿನಗಳಲ್ಲಿ ರೈಲ್ವೆ ಇಲಾಖೆಯಲ್ಲಿ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ಕನ್ನಡ ಅನುಷ್ಠಾನಕ್ಕೆ ಒತ್ತು ನೀಡಲಾಗುವುದು. ಅಷ್ಟೇ ಅಲ್ಲ, ಕನ್ನಡದಲ್ಲಿ ವ್ಯವಹರಿಸಬಲ್ಲ ಸಿಬ್ಬಂದಿ ನೇಮಕಕ್ಕೂ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು. ದೇಶದಲ್ಲಿನ ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ವಿದೇಶಿಗರು ಬರುತ್ತಾರೆ. ಈ ಹಿನ್ನೆಲೆಯಲ್ಲಿ ರಾಷ್ಟ್ರೀಯ ಭಾಷೆ ಹಿಂದಿ ಜತೆಗೆ ಇಂಗ್ಲೀಷ್ ಕೂಡ ಬಳಸಲಾಗುತ್ತಿದೆ ಎಂದ ಅವರು, ಕರ್ನಾಟಕದ ಮಟ್ಟಿಗೆ ಕನ್ನಡ ಬಳಕೆಗೆ ಆದ್ಯತೆ ನೀಡುವ ನಿಯಮಗಳನ್ನು ರೂಪಿಸಲಾಗುವುದು ಎಂದರು.