ಯುವ ಕಾಂಗ್ರೆಸ್ ಪ್ರತಿಭಟನೆ
Team Udayavani, Nov 19, 2019, 3:59 PM IST
ಬಾಗಲಕೋಟೆ: ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ದೇಶದ ಆರ್ಥಿಕ ವ್ಯವಸ್ಥೆ ಕುಸಿದಿದೆ ಎಂದು ಆರೋಪಿಸಿ ಯುವ ಕಾಂಗ್ರೆಸ್ ಕಾರ್ಯಕರ್ತರು ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಜಿಲ್ಲೆಯ ವಿವಿಧೆಡೆಯಿಂದ ಆಗಮಿಸಿದ್ದ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಬಳಿಕ ಜಿಲ್ಲಾಧಿಕಾರಿ ಕ್ಯಾಪ್ಟನ್ ಡಾ| ಕೆ. ರಾಜೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ವಿನಯ ತಿಮ್ಮಾಪುರ ಮಾತನಾಡಿ, ದೇಶದ ಪ್ರಸ್ತುತ ಆರ್ಥಿಕ ಪರಿಸ್ಥಿತಿ ನೋಡಿದರೆ, ನಾವು ಅಭಿವೃದ್ಧಿಯತ್ತ ಸಾಗುತ್ತಿದ್ದೇವೋ ಎಂಬ ಪ್ರಶ್ನೆ ಎದುರಾಗುತ್ತಿದೆ. ಹೀಗೆ ಸಾಗಿದರೆ ನಮ್ಮ ದೇಶದಆರ್ಥಿಕ ಮಟ್ಟ ಎಲ್ಲಿಗೆ ಹೋಗಿ ನಿಲ್ಲುತ್ತದೆ ಎಂಬ ಆತಂಕ ಎದುರಾಗಿದೆ. ದೇಶದಲ್ಲಿ ಒಂದೆಡೆದಿನನಿತ್ಯ ಬಳಕೆಯ ವಸ್ತುಗಳ ಏರಿಕೆಯಾಗುತ್ತಿದೆ. ಹೆಸರಾಂತ ಉದ್ಯಮದ ಕಂಪನಿಗಳು, ಸಂಸ್ಥೆಗಳು ಮುಚ್ಚುವ ಪರಿಸ್ಥಿತಿ ಬಂದಿದೆ. ಇದರಿಂದ ಲಕ್ಷಾಂತರ ಜನರು ತಮ್ಮ ಉದ್ಯೋಗ ಕಳೆದುಕೊಂಡು, ನಿರುದ್ಯೋಗಿಗಳಾಗುತ್ತಿದ್ದಾರೆ ಎಂದು ಆರೋಪಿಸಿದರು.
ಬಿಜೆಪಿ ಸರ್ಕಾರದ ಅವೈಜ್ಞಾನಿಕ ನೀತಿಗಳಿಂದ ಮಧ್ಯಮ ಹಾಗೂ ಕೆಳ ವರ್ಗದ ಜನರು ಸಂಕಷ್ಟದ ಸ್ಥಿತಿಗೆ ಸಿಲುಕಿದ್ದಾರೆ. ಕಂಪನಿಗಳು ಮುಚ್ಚುತ್ತಿದ್ದರೆ, ಉದ್ಯೋಗಿಗಳು ಬೀದಿಗೆ ಬರುತ್ತಿದ್ದಾರೆ. ಮಧ್ಯಮ ಮತ್ತು ಕೆಳ ವರ್ಗದ ಜನರ ಬದುಕು ದುಸ್ತರವಾಗಿದೆ. ಕೇಂದ್ರ ಸರ್ಕಾರ ಇದನ್ನು ಗಂಭೀರವಾಗಿ ಪರಿಗಣಿಸಿ, ದೇಶದ ಆರ್ಥಿಕ ಸ್ಥಿತಿ ಸುಧಾರಣೆಗೆ ಕ್ರಮ ಕೈಗೊಳ್ಳಬೇಕು. ನಿರುದ್ಯೋಗ ಸಮಸ್ಯೆ, ದಿನ ನಿತ್ಯದ ಬಳಕೆಯ ವಸ್ತುಗಳ ಬೆಲೆ ಏರಿಕೆ ತಡೆಗಟ್ಟಬೇಕು ಎಂದು ಒತ್ತಾಯಿಸಿದರು.
ಮಾಜಿ ಶಾಸಕ ಹಾಗೂ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಎಸ್.ಜಿ. ನಂಜಯ್ಯನಮಠ, ಯುವ ಕಾಂಗ್ರೆಸ್ ರಾಜ್ಯ ಉಸ್ತುವಾರಿ ಸಂದೀಪ ವಾಲ್ಮೀಕಿ, ರಾಜ್ಯ ಕಾರ್ಯದರ್ಶಿ ಪ್ರವೀಣಗೌಡ ಪಾಟೀಲ, ಪ್ರಮುಖರಾದ ಚಿನ್ನ ಅಂಬಿ, ಮಹೇಶ ಜಾಲವಾದಿ, ಆರೀಫ್ ಮೋಮಿನ, ಬಸವರಾಜ ಹೂವಿನಹಳ್ಳಿ, ಪ್ರಕಾಶ ಮಾಂಗ, ನಿಸಾರ ಪಟ್ಟೇವಾಲ, ಸೂರಜ ಅವಟಿ ಸೇರಿದಂತೆ ಜಿಲ್ಲೆಯ ಯುವ ಕಾಂಗ್ರೆಸ್ ಕಾರ್ಯಕರ್ತರು ಪಾಲ್ಗೊಂಡಿದ್ದರು.