ಪರಿಸರ ಯೋಜನೆಗೆ ವರದಿ ಸಲ್ಲಿಸಿ
Team Udayavani, Dec 4, 2019, 6:02 PM IST
ರಾಯಚೂರು: ಜಿಲ್ಲಾ ಮಟ್ಟದ ಪರಿಸರ ಯೋಜನೆ ರೂಪಿಸಲು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಸಂಬಂಧಿಸಿದ ಇಲಾಖೆಗಳು ವರದಿ ಸಲ್ಲಿಸಬೇಕು ಎಂದು ಜಿಲ್ಲಾಧಿಕಾರಿ ಆರ್.ವೆಂಕಟೇಶಕುಮಾರ ಸೂಚಿಸಿದರು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಪರಿಸರ ಯೋಜನೆ ಕುರಿತ ಪೂರ್ವಭಾವಿ ಸಿದ್ಧತಾ ಸಭೆ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ರಾಷ್ಟ್ರೀಯ ಹಸಿರು ನ್ಯಾಯಾಧೀಕರಣ ಪೀಠದ ನಿರ್ದೇಶನದನ್ವಯ ಪ್ರತಿ ಜಿಲ್ಲೆಯಲ್ಲೂ ಜಿಲ್ಲಾ ಪರಿಸರ ಯೋಜನೆ ರೂಪಿಸಿ ಅದನ್ನು ರಾಜ್ಯಮಟ್ಟಕ್ಕೆ ಸಲ್ಲಿಸಬೇಕು. ರಾಜ್ಯಮಟ್ಟದಿಂದ ರಾಷ್ಟ್ರಮಟ್ಟಕ್ಕೆ ಪರಿಸರ ಯೋಜನೆಯ ರೂಪುರೇಷೆಗಳಿಗಾಗಿ ವರದಿ ಕಳುಹಿಸಲಾಗುವುದು ಎಂದು ಹೇಳಿದರು.
ಜಿಲ್ಲೆಯಲ್ಲಿ ಎಲ್ಲ ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ, ಪ್ಲಾಸ್ಟಿಕ್ ತ್ಯಾಜ್ಯ, ವೈದ್ಯಕೀಯ ತ್ಯಾಜ್ಯ, ಅಪಾಯಕಾರಿ ತ್ಯಾಜ್ಯ, ಇ-ತ್ಯಾಜ್ಯಗಳ ನಿರ್ವಹಣೆಯನ್ನು ಕ್ರಮಬದ್ದವಾಗಿ ಮಾಡಬೇಕು. ಸ್ಥಳೀಯ ಸಂಸ್ಥೆಗಳು ಘನತ್ಯಾಜ್ಯ ವಿಲೇವಾರಿ ಕುರಿತು ತರಕಾರಿ ಮಾರಾಟಗಾರರ ಸಭೆ ಕರೆದು ಅವರಿಗೆ ಸೂಚಿಸಬೇಕು. ಹಸಿ ತ್ಯಾಜ್ಯ ಹಾಗೂ ಒಣ ತ್ಯಾಜ್ಯ ಬೇರ್ಪಡಿಸಿ ನೀಡದವರಿಗೆ ದಂಡ ವಿಧಿಸಬೇಕು. ಪ್ಲಾಸ್ಟಿಕ್ ತ್ಯಾಜ್ಯದಲ್ಲಿ ಲೆಗಸಿ, ಪಾಲಿಥಿನ್ಗಳನ್ನು ಬೇರ್ಪಡಿಸಿ ಸಿಮೆಂಟ್ ಫ್ಯಾಕ್ಟರಿಗಳಿಗೆ ಕಳುಹಿಸಬೇಕು. ಪರಿಸರ ಇಂಜಿನಿಯರ್ಗಳು ಸ್ಥಳ ಪರಿಶೀಲಿಸಬೇಕು. ಈ ಕುರಿತು ಸೂಕ್ತ ಕ್ರಮ ಕೈಗೊಳ್ಳದಿದ್ದರೆ ಅಧಿಕಾರಿಗಳ ವೇತನ ತಡೆ ಹಿಡಿಯಿರಿ ಎಂದು ಆದೇಶಿಸಿದರು.
ಪ್ರಾದೇಶಿಕ ಪರಿಸರ ಅಧಿಕಾರಿ ಶ್ರೀಧರ, ಗಣಿ ಮತ್ತು ಭೂ ವಿಜ್ಞಾನ ಇಲಾಖೆ ಹಿರಿಯ ಭೂ ವಿಜ್ಞಾನಿ ವಿಶ್ವನಾಥ, ಸ್ಥಳೀಯ ಸಂಸ್ಥೆಗಳ ಅಧಿಕಾರಿಗಳು ಸಭೆಯಲ್ಲಿದ್ದರು.