ಪಾಕಿಸ್ತಾನ ಕಾಂಗ್ರೆಸ್ನ ಪಾಪದ ಕೂಸು
Team Udayavani, Dec 17, 2019, 3:04 AM IST
ತುಮಕೂರು: ಪಾಕಿಸ್ತಾನ ಕಾಂಗ್ರೆಸ್ನ ಪಾಪದ ಕೂಸು ಎಂದು ಪ್ರವಾಸೋದ್ಯಮ ಸಚಿವ ಸಿ.ಟಿ. ರವಿ ಆರೋಪಿಸಿದರು. ಸಿದ್ಧಗಂಗಾ ಮಠಕ್ಕೆ ಸೋಮವಾರ ಭೇಟಿ ನೀಡಿದ ವೇಳೆ ಸುದ್ದಿಗಾರರೊಂದಿಗೆ ಅವರು ಮಾತನಾಡಿದರು.
ಮತೀಯ ಆಧಾರದಲ್ಲಿ ಕಾಂಗ್ರೆಸ್ ದೇಶ ವಿಭಜನೆ ಮಾಡಿದ ಪಾಪದ ಕೂಸಿನ ಪರಿಣಾಮ ಜನ ಇಂದು ಸಂಕಷ್ಟ ಅನುಭವಿಸುವಂತಾಗಿದೆ. ಹಿಂದು, ಸಿಖ್, ಬೌದ್ಧ, ಕ್ರೈಸ್ತರು ಪಾಕಿಸ್ತಾನ, ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರು ಎಂಬ ಕಾರಣಕ್ಕೆ ಅವರಿಗೆ ಪೌರತ್ವ ಕೊಡುವ ತೀರ್ಮಾನ ಕೈಗೊಳ್ಳಲಾಗಿದೆ.
ಇದನ್ನು ವಿರೋಧ ಮಾಡುವಷ್ಟೇ ಪಾಕಿಸ್ತಾನ ರಚನೆಗೂ ವಿರೋಧ ಮಾಡಿದ್ದರೆ ಅಂದು ಪಾಕಿಸ್ತಾನ ಹುಟ್ಟತ್ತಲೇ ಇರಲಿಲ್ಲ. ಇದಕ್ಕೆ ಕಾಂಗ್ರೆಸ್ನವರೇ ಹೊಣೆ ಎಂದು ಕಿಡಿಕಾರಿದರು. ಕಾಂಗ್ರೆಸ್ನವರು ತಾಲಿಬಾನಿಗಳೊಂದಿಗೆ ಸೇರಿ ಪ್ರಧಾನಿ ಮೋದಿಯವರ ನೇತೃತ್ವದ ಬಿಜೆಪಿ ಸರ್ಕಾರವನ್ನು ಉರುಳಿಸುವ ಹುನ್ನಾರ ನಡೆಸುತ್ತಿದ್ದಾರೆ. ಇದರೊಂದಿಗೆ ಪೌರತ್ವ ಕಾಯ್ದೆ ವಿಚಾರವಾಗಿಯೂ ಪಿತೂರಿ ನಡೆಸುತ್ತಿದ್ದಾರೆ ಎಂದು ಆರೋಪಿಸಿದರು.
ಮುಖ್ಯಮಂತ್ರಿ ವಿವೇಚನೆಗೆ ಬಿಟ್ಟಿದ್ದು: ಹೆಚ್ಚುವರಿ ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸುವ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು. ಪಕ್ಷದ ವರಿಷ್ಠರ ಜತೆ ಮುಖ್ಯಮಂತ್ರಿಗಳು ಸಮಾಲೋಚನೆ ಮಾಡಿ ನಿರ್ಣಯ ಕೈಗೊಳ್ಳುತ್ತಾರೆ ಎಂದು ಸಚಿವರು ಹೇಳಿದರು.