ಪೌರತ್ವ ಕಾಯ್ದೆ; ಪೂರ್ವ ದೆಹಲಿಯ ಪೊಲೀಸ್ ಠಾಣೆಗೆ ಬೆಂಕಿ; ಲಾಠಿಚಾರ್ಜ್, ಅಶ್ರುವಾಯು ಪ್ರಯೋಗ
Team Udayavani, Dec 17, 2019, 4:03 PM IST
ನವದೆಹಲಿ: ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ದೆಹಲಿಯ ಸೀಲಾಂಪುರ್ ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಸಂಘರ್ಷಕ್ಕೆ ತಿರುಗಿದ ಪರಿಣಾಮ ಉದ್ರಿಕ್ತ ಪ್ರತಿಭಟನಾಕಾರರನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸರು ಅಶ್ರುವಾಯು ಪ್ರಯೋಗ ನಡೆಸಿದ್ದಾರೆ. ಏತನ್ಮಧ್ಯೆ ಪ್ರತಿಭಟನಾಕಾರರು ಪೂರ್ವ ದೆಹಲಿಯ ಪೊಲೀಸ್ ಠಾಣೆಗೆ ಬೆಂಕಿ ಹಚ್ಚಿದ್ದು, ಬಸ್ ಗಳಿಗೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ವರದಿ ತಿಳಿಸಿದೆ.
ಘಟನೆಯಲ್ಲಿ ಇಬ್ಬರು ಪೊಲೀಸರು ಗಾಯಗೊಂಡಿರುವುದಾಗಿ ರಾಯಟರ್ಸ್ ನ್ಯೂಸ್ ಏಜೆನ್ಸಿ ವರದಿ ಮಾಡಿದ್ದು, ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆಯುತ್ತಿದ್ದ ಶಾಂತಿಯುತ ಪ್ರತಿಭಟನೆ ದಿಢೀರನೆ ಕೈಮೀರಿ ಹೋಗಿತ್ತು ಎಂದು ಪ್ರತ್ಯಕ್ಷದರ್ಶಿಯೊಬ್ಬರು ತಿಳಿಸಿರುವುದಾಗಿ ವರದಿ ವಿವರಿಸಿದೆ.
ಪ್ರತಿಭಟನಾಕಾರರು ಬಸ್ ಹಾಗೂ ಕಾರುಗಳನ್ನು ಜಖಂಗೊಳಿಸಿದ್ದರು. ಹಿರಿಯ ಪೊಲೀಸ್ ಅಧಿಕಾರಿಗಳ ಪ್ರಕಾರ ಪ್ರತಿಭಟನೆ 12ಗಂಟೆಗೆ ಆರಂಭವಾಗಿದ್ದು, ಜನರು ಸ್ಥಳದಲ್ಲಿ ಒಟ್ಟುಗೂಡಿದ ನಂತರ ಜಾಥಾ ಹೊರಟಿತ್ತು. ಏತನ್ಮಧ್ಯೆ ಪ್ರತಿಭಟನಾಕಾರರು ಬಸ್ ಗಳನ್ನು ಗುರಿಯಾಗಿರಿಸಿಕೊಂಡು ಕಲ್ಲುತೂರಾಟ ಆರಂಭಿಸಿದಾಗ ಪರಿಸ್ಥಿತಿ ವಿಕೋಪಕ್ಕೆ ಹೋಗಿರುವುದಾಗಿ ತಿಳಿಸಿದ್ದಾರೆ.
ಹಿಂಸಾಚಾರ ಆರಂಭವಾಗುತ್ತಿದ್ದಂತೆಯೇ ಪ್ರತಿಭಟನಾಕಾರರನ್ನು ನಿಯಂತ್ರಿಸಲು ಪೊಲೀಸರು ಮುಂದಾದಾಗ ಏಕಾಏಕಿ ಕಲ್ಲು ತೂರಾಟ ನಡೆಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.