ಬ್ರಾಹ್ಮಣ ಮಂಡಳಿಗೆ ನೇಮಕಕ್ಕೆ ಮನವಿ
Team Udayavani, Dec 25, 2019, 3:00 AM IST
ಬೆಂಗಳೂರು: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರು ಮತ್ತು ಅಧಿಕಾರೇತರ ಸದಸ್ಯರನ್ನು ನೇಮಕ ಮಾಡುವಂತೆ ಶಾಸಕ ಹಾಗೂ ಮಾಜಿ ಸಚಿವ ಆರ್.ವಿ.ದೇಶಪಾಂಡೆ ಸರ್ಕಾರಕ್ಕೆ ಮನವಿ ಮಾಡಿದ್ದಾರೆ. ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಮತ್ತು ಮುಜರಾಯಿ ಖಾತೆ ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಅವರಿಗೆ ಈ ಬಗ್ಗೆ ಪ್ರತ್ಯೇಕ ಪತ್ರ ಬರೆದಿರುವ ಅವರು ಹಿಂದಿನ ಸರ್ಕಾರ ಬ್ರಾಹ್ಮಣ ಸಮುದಾಯದ ಅಭಿವೃದ್ದಿಗಾಗಿ ಮಂಡಳಿ ರಚನೆ ಮಾಡಿತ್ತು. ಅಲ್ಲದೆ ಸುಮಾರು 25 ಕೋಟಿ ರೂ.ಬಿಡುಗಡೆ ಮಾಡಿತ್ತು.
ಜತೆಗೆ ಸಮಿತಿಗೆ ಒಬ್ಬ ಅಧ್ಯಕ್ಷ ಮತ್ತು ಅಧಿಕಾರೇತರ ಸದಸ್ಯರನ್ನು ಕೂಡ ನೇಮಕ ಮಾಡಿತ್ತು. ಆದರೆ ಸರ್ಕಾರ ಬದಲಾದ ಹಿನ್ನೆಲೆಯಲ್ಲಿ ಅಧ್ಯಕ್ಷರು ಮತ್ತು ಸದಸ್ಯರ ನೇಮಕ ಹಿಂಪಡೆಯಲಾಗಿದೆ ಎಂದು ಹೇಳಿದ್ದಾರೆ. ಈ ಹಿನ್ನೆಲೆಯಲ್ಲಿ ಸರ್ಕಾರ ಕೂಡಲೇ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಗೆ ಅಧ್ಯಕ್ಷರನ್ನು ಮತ್ತು ಅಧಿಕಾರೇತರ ಸದಸ್ಯರನ್ನು ನೇಮಕ ಮಾಡುವಂತೆ ಒತ್ತಾಯಿಸಿದ್ದಾರೆ.